ಎಡಿಟೋರಿಯಲ್

ಸಂಪಾದಕೀಯ : ದಸರಾ ಕಾಮಗಾರಿ; ತರಾತುರಿ ಸಲ್ಲದು

ನಾಡಹಬ್ಬ ಮೈಸೂರು ದಸರಾ ವಿಧ್ಯುಕ್ತವಾಗಿ ಆರಂಭವಾಗಲು ಇನ್ನೊಂದು ತಿಂಗಳು ಮಾತ್ರ ಬಾಕಿ ಇದೆ. ಸೆಪ್ಟೆಂಬರ್ ೨೬ರ ದಸರಾ ಮಹೋತ್ಸವ ಉದ್ಘಾಟನೆಗೂ ಮುನ್ನ ಸಾಂಸ್ಕೃತಿಕ ನಗರಿಯಲ್ಲಿ ಕೈಗೊಳ್ಳಬಹುದಾದ ಅಭಿವೃದ್ಧಿ ಕಾಮಗಾರಿಗಾಗಿ ಮೈಸೂರು ನಗರ ಪಾಲಿಕೆಯು ಟೆಂಡರ್ ಅನ್ನು ಈಗ ತರಾತುರಿಯಲ್ಲಿ ಕರೆದಿದೆ. ಇದರಿಂದ ಕಾಮಗಾರಿಯ ಗುಣಮಟ್ಟ ಎಷ್ಟರ ಮಟ್ಟಿಗೆ ಇರಲಿದೆ ಎನ್ನುವುದು ಊಹೆಗೂ ನಿಲುಕದ ಸಂಗತಿಯೇನಲ್ಲ. ನಾಡಹಬ್ಬ ದಸರೆಯನ್ನು ವರ್ಷ-ವರ್ಷ ಆಚರಣೆ ಮಾಡುವುದು ಎಲ್ಲರಿಗೂ ತಿಳಿದಿರುವ ವಿಚಾರವೇ. ಕೋವಿಡ್ ಹಿನ್ನೆಲೆಯಲ್ಲಿ ಎರಡು ವರ್ಷ ಅದ್ದೂರಿಯಾಗಿ ನಡೆದಿರಲಿಲ್ಲ. ಇದನ್ನು ಬಿಟ್ಟರೆ ಅವ್ಯಾಹತವಾಗಿ ನಡೆದುಕೊಂಡು ಬರುತ್ತಿದೆ. ಆದರೂ ಆಡಳಿತ ಯಂತ್ರ ಹಾಗೂ ಅಧಿಕಾರಿ ವರ್ಗ ‘ಸಂತೆಯ ಹೊತ್ತಿಗೆ ಮೂರು ಮೊಳ ನೇಯುವುದು’ ಎನ್ನುವ ಗಾದೆ ಮಾತುಗೆ ಜೋತು ಬಿದ್ದಂತಿದೆ.

ದಸರಾಗೆ ಮುನ್ನ ನಗರದ ಸೌಂದರ್ಯೀಕರಣ ಸಾಂಗವಾಗಿ ನೆರವೇರಿರಬೇಕು. ಕೆಪಿಟಿಸಿಎಲ್ ಕೈಗೊಳ್ಳುವ ದೀಪಾಲಂಕಾರವೊಂದೇ ಇನ್ನುಳಿದ ಅಭಿವೃದ್ಧಿ ಕೆಲಸಗಳಲ್ಲಿನ ತೊಡಕುಗಳನ್ನು ಮರೆಮಾಚುವುದಿಲ್ಲ. ಅದು ತಾತ್ಕಾಲಿಕ ತೇಪೆಯಾಗಿಯೇ ಕಂಗೊಳಿಸುತ್ತದೆ ಅಷ್ಟೇ. ಹಾಗಾಗಿ ನಗರಪಾಲಿಕೆ ತರಾತುರಿಯಲ್ಲಿ ಕರೆಯುವ ಟೆಂಡರ್ ಪ್ರಕ್ರಿಯೆಗೆ ಸಾಣೆ ಹಿಡಿದು ಶಾಶ್ವತ ಪರಿಹಾರ ನೀಡುವ ಕಡೆಗೆ ಗಮನ ಹರಿಸಬೇಕಾಗಿದೆ. ಕಟ್ಟಡಗಳ ಕಾಂಪೌಂಡ್ ದುರಸ್ತಿ, ರಾಜ ಮಾರ್ಗದ ಫುಟ್‌ಪಾತ್ ದುರಸ್ತಿ, ಗ್ರಿಲ್, ಮಿಡೀಯನ್‌ಗಳಿಗೆ ಮತ್ತು ವೃತ್ತಗಳಿಗೆ ಬಣ್ಣ ಬಳಿಯುವುದು, ಅರಮನೆ ಸುತ್ತಲಿನ ರಸ್ತೆ ಸೇರಿದಂತೆ ನಗರ ಕೇಂದ್ರದ ಮುಖ್ಯ ರಸ್ತೆಗಳ ದುರಸ್ತಿ, ದಸರಾ ವೀಕ್ಷಣೆಗೆ ಆಸನಗಳ ವ್ಯವಸ್ಥೆ, ಕೆಲ ರಸ್ತೆಗಳ ಮರು ಡಾಂಬರೀಕರಣ ಸೇರಿದಂತೆ ಒಟ್ಟು ೨ ಕೋಟಿ ರೂ. ವೆಚ್ಚದಲ್ಲಿ ನಗರವನ್ನು ಸುಂದರವಾಗಿಸಲು ಪಾಲಿಕೆ ಟೆಂಡರ್ ಕರೆದಿದೆ. ಮುಂದಿನ ೧೦ ದಿನಗಳೊಳಗೆ ಟೆಂಡರ್ ಪ್ರಕ್ರಿಯೆ ಪೂರ್ಣಗೊಳಿಸಿ ಸೆ.೨೫ರೊಳಗೆ ಸಿದ್ಧಗೊಳಿಸಬೇಕಿದೆ. ಈಗ ಕರೆದಿರುವ ಟೆಂಡರ್‌ನಲ್ಲಿ ಜಂಬೂ ಸವಾರಿ ವೀಕ್ಷಣೆ ಸಿದ್ಧತೆಗಾಗಿ ೧೨ ಲಕ್ಷ ರೂ., ಗೋಡೆಗಳಲ್ಲಿ ಕಲಾಕೃತಿ ರಚಿಸಲು ೧೨ ಲಕ್ಷ ರೂ., ಜಂಬೂ ಸವಾರಿ ಮಾರ್ಗದ ಸಿದ್ಧತೆಗಾಗಿ ೫೪ ಲಕ್ಷ ರೂ., ಗುಂಡಿ ಮುಚ್ಚುವ ಕಾಮಗಾರಿಗೆ ೪೦ ಲಕ್ಷ ರೂ. ವ್ಯಯಿಸಲು ಅಂದಾಜು ಪಟ್ಟಿ ತಯಾರಿಸಲಾಗಿದೆ

. ಮೈಸೂರು ಮಹಾನಗರ ಪಾಲಿಕೆ ಆಯುಕ್ತರು ತಿಳಿಸುವಂತೆ ದಸರಾ ಸಿದ್ಧತೆ ಕಾಮಗಾರಿಗಾಗಿಯೇ ಸರ್ಕಾರಕ್ಕೆ ೧೫ ಕೋಟಿ ರೂ. ಪ್ರಸ್ತಾವನೆ ಸಲ್ಲಿಸಿದ್ದಾರೆ. ಈಗ ಕರೆದಿರುವ ಟೆಂಡರ್ ಕೇವಲ ಸೌಂದರ್ಯೀಕರಣಕ್ಕಾಗಿ ಮಾತ್ರ. ಅದೂ ೨ ಕೋಟಿ ರೂ. ವೆಚ್ಚದ್ದು. ಪಾಲಿಕೆ ಕೋರಿರುವ ೧೫ ಕೋಟಿ ರೂ. ಪ್ರಸ್ತಾವನೆಗೆ ಸರ್ಕಾರದಿಂದ ಇನ್ನಷ್ಟೇ ಸ್ಪಂದನೆ ದೊರೆಯಬೇಕಿದೆ. ಪ್ರತಿ ಬಾರಿ ದಸರಾ ಬರುವ ಹೊತ್ತಿಗಷ್ಟೇ ಅಭಿವೃದ್ಧಿ ಕಾಮಗಾರಿಗಳು ಗರಿಗೆದರುವುದು ಅಭಿವೃದ್ಧಿಯ ಸಂಕೇತವಲ್ಲ. ಬದಲಾಗಿ ತೇಪೆ ಹಚ್ಚುವ ಕೈಂಕರ್ಯವಷ್ಟೇ. ಈ ಬಗ್ಗೆ ಸಾರ್ವಜನಿಕರು ಜನಾಭಿಪ್ರಾಯ ರೂಪಿಸಿ ಸರ್ಕಾರದ ಮೇಲೆ ಒತ್ತಡ ತಂದು ದಸರಾ ಸಿದ್ಧತೆ ಕೇವಲ ೧೦-೧೫ ದಿನಗಳಿರುವಂತೆ ಆರಂಭವಾಗದೆ, ನಿರ್ದಿಷ್ಟ ಅವಧಿಯಲ್ಲಿ ಮುಗಿಸುವಂತೆ ಒಕ್ಕೊರಲಿನಿಂದ ದನಿ ಎತ್ತಬೇಕಾಗಿದೆ. ಅದಕ್ಕಾಗಿ ಪ್ರತ್ಯೇಕವಾಗಿ ದಸರಾ ಪ್ರಾಧಿಕಾರವನ್ನು ರಚಿಸಿ, ಐಎಎಸ್, ಕೆಎಎಸ್ ಅಧಿಕಾರಿಗಳ ಅಡಿಯಲ್ಲಿ ಸಿಬ್ಬಂದಿ ನಿಯೋಜಿಸಿ ವರ್ಷಪೂರ್ತಿ ಒಂದಲ್ಲ ಒಂದು ಚಟುವಟಿಕೆ, ಅಭಿವೃದ್ಧಿ ಕಾಮಗಾರಿ ಹಮ್ಮಿಕೊಳ್ಳುವಂತೆ ನೋಡಿಕೊಳ್ಳಬೇಕಿದೆ.

ದಸರಾಗೆ ಬರುವ ಪ್ರವಾಸಿಗರಿಗೆ ಯಾವುದೇ ತೊಂದರೆಯಾಗದಂತೆ ಜತನದಿಂದ ಕರ್ತವ್ಯ ನಿರ್ವಹಿಸಲು ಜಿಲ್ಲಾಡಳಿತ ಸದಾ ಮುಂದಿರಬೇಕು. ಹೀಗಿದ್ದಾಗ ಪ್ರವಾಸಿಗರ ಸಂಖ್ಯೆಯಲ್ಲಿ ಹೆಚ್ಚಳವಾಗಿ ಪ್ರವಾಸೋದ್ಯಮ ಅಭಿವೃದ್ಧಿಗೆ ಇಂಬು ನೀಡಿದಂತಾಗುತ್ತದೆ. ದಸರಾ ಎಂದರೆ ಕೇವಲ ಪ್ರವಾಸೋದ್ಯಮ ಮಾತ್ರವಲ್ಲ, ಟೂರ್ಸ್ ಅಂಡ್ ಟ್ರಾವೆಲ್ಸ್, ಹೋಟೆಲ್ ಉದ್ಯಮ, ಸಣ್ಣ ಪುಟ್ಟ ಅಂಗಡಿ ವ್ಯಾಪಾರಿಗಳಿಗೂ ಅನುಕೂಲವಾಗುವಂತಹದ್ದು. ಈ ಎಲ್ಲವನ್ನೂ ಗಮನದಲ್ಲಿಟ್ಟುಕೊಂಡು ೨೦೨೨ನೇ ಸಾಲಿನ ದಸರಾವನ್ನು ಅತ್ಯಂತ ಮನೋಜ್ಞವಾಗಿ ಆಚರಿಸುವಂತಾಗಬೇಕು. ಕಳೆದೆರಡು ವರ್ಷಗಳಿಂದ ನಿಸ್ತೇಜವಾಗಿದ್ದ ದಸರಾವನ್ನು ಕಂಗೊಳಿಸುವಂತೆ ಮಾಡಬೇಕು. ಆ ಮೂಲಕ ಸಾಂಸ್ಕೃತಿಕ ಪ್ರತಿಫಲನ ಎಲ್ಲೆಡೆ ಪಸರಿಸುವಂತೆ ಕ್ರಮ ಕೈಗೊಳ್ಳಬೇಕಿದೆ. ಮೈಸೂರಿಗೆ ಪ್ರವಾಸಿಗರು ಕಾಲಿಡುವ ಮುಂಚೆಯೇ ಕಾಮಗಾರಿಗಳು ಪೂರ್ಣಗೊಂಡು ಲವಲೇಷವೂ ತೊಂದರೆಯಾಗದಂತೆ ಮುತುವರ್ಜಿ ವಹಿಸಬೇಕಾಗಿದೆ. ಮೈಸೂರಿನ ಸಾಂಸ್ಕೃತಿಕ ಹಿರಿಮೆ ನಾಡಿನುದ್ದಗಲಕ್ಕೂ ಹರಡುವಂತೆ ಮಾಡುವ ಜವಾಬ್ದಾರಿ ಆಳುವ ಸರ್ಕಾರದ ಮೇಲಿದೆ. ಸ್ಥಳೀಯ ಸಂಸ್ಥೆಗಳು ಇದಕ್ಕೆ ಪೂರಕವಾಗಿ ನಡೆದುಕೊಳ್ಳಬೇಕಿದೆ. ದಸರಾಗೂ ಮುನ್ನ ಮೈಸೂರು ಮಹಾನಗರ ಪಾಲಿಕೆಗೆ ಹೊಸ ಮಹಾಪೌರರು ಮತ್ತು ಉಪಮಹಾಪೌರರು ಬರುವುದರಿಂದ ಅಭಿವೃದ್ಧಿಗೆ ಇನ್ನಷ್ಟು ಪೂರಕವಾದ ಕೆಲಸ ಕಾರ್ಯಗಳು, ನಿರ್ಧಾರ ತಳೆಯಲು ಸಹಾಯವಾಗಲಿದೆ. ಅದು ಈಡೇರುವಂತಾಗಲಿ ಎಂಬುದು ಮೈಸೂರಿಗರ ಒಲವೂ ಆಗಿದೆ.

andolanait

Recent Posts

ದ್ರಾಕ್ಷಿ ತೋಟ ನೋಡಲು ಮುಗಿಬಿದ್ದ ಜನರು

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…

22 hours ago

ಓದುಗರ ಪತ್ರ: ಎಲ್‌ಇಡಿ ಪರದೆ ಮೂಲಕ ಚಾಮುಂಡಿ ದರ್ಶನ ಮಾಡಿಸಿ

ಪ್ರತಿ ಆಷಾಢ ಶುಕ್ರವಾರಗಳಂದು ಚಾಮುಂಡಿ ಬೆಟ್ಟದಲ್ಲಿ ವಿಪರೀತ ಜನಸಂದಣಿ ಉಂಟಾಗುತ್ತಿದೆ. ಇದಕ್ಕೆ ಇತ್ತೀಚಿನ ಕೆಲವು ವರ್ಷಗಳಲ್ಲಿ ಮಾಡಲ್ಪಟ್ಟ ಅವೈಜ್ಞಾನಿಕ ಮಾರ್ಪಾಡುಗಳೇ…

22 hours ago

ಓದುಗರ ಪತ್ರ: ಪಾಲಿಕೆ ಆಯುಕ್ತರಾದ ಎಂ.ಕೆ. ಸವಿತಾ ನಡೆ ಶ್ಲಾಘನೀಯ

ಈ ಬಾರಿಯ ಸ್ವಾತಂತ್ರೋತ್ಸವದ ಅಂಗವಾಗಿ ೮೦ ತ್ಯಾಜ್ಯ ಹಾಕುವ ತಾಣಗಳನ್ನು ಗುರುತಿಸಿ, ಸ್ವಾತಂತ್ರೋತ್ಸವ ಸ್ವಚ್ಛತಾ ಅಭಿಯಾನ ೨೦೨೬ರ ಪ್ರಯುಕ್ತ ೮೦…

22 hours ago

ಓದುಗರ ಪತ್ರ: ಏನೇ ಓದಿದ್ದರೂ ಬೇಕು ಪಿಸಿ ಹುದ್ದೆ !

ರಾಜ್ಯದಲ್ಲಿ ೩,೭೦೦ ಸಿವಿಲ್ ಪೊಲೀಸ್ ಕಾನ್‌ಸ್ಟೆಬಲ್ ಹುzಗಳಿಗೆ, ೩ ಲಕ್ಷದ ೭೭ ಸಾವಿರ ಅಭ್ಯರ್ಥಿಗಳು ಇದೇ ಭಾನುವಾರ ಲಿಖಿತ ಪರೀಕ್ಷೆ…

22 hours ago

ರವಿಯ ನೋಡ ಹೋಗಿ ಶಶಿಯ ಕಂಡುಬಂದೆ

ಭಾರತಿ ಬಿ ವಿ ವ್ಯಾಲಿ ಆಫ್ ಮಾನ್ಯುಮೆಂಟ್ಸ್‌ನ ಸನ್ ಸೆಟ್ ನೋಡಬೇಕು!’ ಹಾಗಂತ ಮಗ ಸಂದೀಪ್ ಗ್ರಾಂಡ್ ಕ್ಯಾನ್ಯನ್ ಹತ್ತಿರ…

22 hours ago

ಕಾರ್ಗಿಲ್ ಕಾಲದ ಸುಬೇದಾರ್ ಹೈದರ್ ಮೈಸೂರಿನಲ್ಲಿದ್ದಾರೆ

ಅಕ್ಷತಾ ಹೈದರ್ ಅವರ ಮುತ್ತಾತ ಎಂ.ಬುಡಾನ್ ಬೇಗ್ ಮೈಸೂರಿನ ಮಹಾರಾಜರ ಪದಾತಿ ದಳದಲ್ಲಿ ಸುಬೇ ದಾರ್ ಮೇಜರ್ ಆಗಿ ಕರ್ತವ್ಯ…

22 hours ago