ಸಂಪಾದಕೀಯ

ಸಚಿವ ಸಂಪುಟ ಸಭೆ: ಯೋಜನೆಗಳ ಅನುಷ್ಠಾನವೂ ತ್ವರಿತವಾಗಿ ಆಗಲಿ

ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟದಲ್ಲಿ ಇತ್ತೀಚೆಗೆ ನಡೆದ ಮೈಸೂರು ವಿಭಾಗೀಯ ಮಟ್ಟದ ಸಚಿವ ಸಂಪುಟ ಸಭೆಯಲ್ಲಿ ಸರ್ಕಾರ ಮೈಸೂರು ವಿಭಾಗದ ಎಲ್ಲ ಏಳು ಜಿಲ್ಲೆಗಳ ಅಭಿವೃದ್ಧಿಯ ಕನಸಿಗೆ ನೀರೆರೆದಿದೆ. ಅದರಲ್ಲಿಯೂ ವಿಶೇಷವಾಗಿ ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಗಳ ಪ್ರಗತಿಗಾಗಿ ೩,೬೪೭.೨೪ ಕೋಟಿ ರೂ. ಮೊತ್ತದ ಯೋಜನೆಗಳಿಗೆ ಅನುಮೋದನೆ ನೀಡಲಾಗಿದೆ.

ಚಾಮರಾಜನಗರ ಜಿಲ್ಲೆಯಲ್ಲಿ ಮೊದಲ ಬಾರಿಗೆ ನಡೆದ ಈ ಸಂಪುಟ ಸಭೆಯಲ್ಲಿ ಮೈಸೂರು, ಮಂಡ್ಯ, ಕೊಡಗು, ಚಾಮರಾಜನಗರ, ಹಾಸನ ಹಾಗೂ ಚಿಕ್ಕಮಗಳೂರು ಜಿಲ್ಲೆಗಳ ಅಭಿವೃದ್ಧಿ ಕುರಿತು ಸುದೀರ್ಘ ಚರ್ಚೆ ನಡೆದಿದೆ. ಮಾನವ – ವನ್ಯಜೀವಿ ಸಂಘರ್ಷ ತಡೆಗೆ ೨೧೦ ಕೋಟಿ ರೂ. ವೆಚ್ಚದಲ್ಲಿ ಬ್ಯಾರಿಕೇಡ್ ನಿರ್ಮಾಣ, ಕುಡಿಯುವ ನೀರಿಗಾಗಿ ೩೧೫ ಕೋಟಿ ರೂ., ಆರೋಗ್ಯ ಸುಧಾರಣೆಗೆ ೨೨೮ ಕೋಟಿ ರೂ., ಮೈಸೂರು ವಿಭಾಗದಲ್ಲಿ ಪ್ರವಾಸೋದ್ಯಮ ಅಭಿವೃದ್ಧಿಗೆ ೩೦೦ ಕೋಟಿ ರೂ. … ಹೀಗೆ ಅನೇಕ ಅಭಿವೃದ್ಧಿ ಯೋಜನೆಗಳನ್ನು ಘೋಷಿಸಲಾಗಿದೆ.

ಸಂಪುಟ ಸಭೆಯಲ್ಲಿ ಘೋಷಿಸಿರುವ ಯೋಜನೆಗಳು, ಕಾರ್ಯಕ್ರಮಗಳು ಈ ವಿಭಾಗೀಯ ಮಟ್ಟದ ಅಭಿವೃದ್ಧಿಗೆ ಪೂರಕವಾಗಿವೆ. ಆದರೆ, ಈ ಎಲ್ಲ ಯೋಜನೆಗಳೂ ನಿಗದಿತ ಕಾಲಮಿತಿಯೊಳಗೆ ಮುಗಿಯುವಂತೆ ಕ್ರಮವಹಿಸುವುದು ರಾಜ್ಯ ಸರ್ಕಾರದ ಮುಂದಿರುವ ಸವಾಲು. ಸಚಿವ ಸಂಪುಟಸಭೆಯಲ್ಲಿ ಕೈಗೊಳ್ಳುವ ಎಲ್ಲ ನಿರ್ಧಾರಗಳೂ ಅನುಷ್ಠಾನಗೊಳ್ಳುವುದಿಲ್ಲ. ಅದಕ್ಕೆ ಅನುದಾನದ ಕೊರತೆ, ತಾಂತ್ರಿಕ ಅಡಚಣೆ ಇತ್ಯಾದಿ ಕಾರಣಗಳು ಇರುತ್ತವೆ. ಇನ್ನು ಹಲವು ಕಡೆ ಜನಪ್ರತಿನಿಧಿಗಳು, ಸ್ಥಳೀಯ ರಾಜಕಾರಣಿಗಳು ಅಡ್ಡಗಾಲು ಹಾಕುವುದು ಸಹಜ. ಮುಖ್ಯವಾಗಿ ಕಾಮಗಾರಿಗಳನ್ನು ಯಾರಿಗೆ ಅಥವಾ ಯಾವ ಸಂಸ್ಥೆಗೆ ಗುತ್ತಿಗೆ ನೀಡಲಾಗುತ್ತದೆ ಎಂಬುದು ಅಸಮಾಧಾನಕ್ಕೆ ಕಾರಣವಾಗುತ್ತದೆ.

ಒಬ್ಬರಿಗೆ ಗುತ್ತಿಗೆ ನೀಡಿದರೆ ಇನ್ನೊಬ್ಬರಿಗೆ ಅಸಹನೆ ಎನ್ನುವಂತಾಗಿದೆ. ಆಡಳಿತ ಪಕ್ಷದವರೇ ಆಗಿದ್ದರೂ ಗುಂಪುಗಾರಿಕೆ ಶುರುವಾಗುತ್ತದೆ. ಗುತ್ತಿಗೆ ಪಡೆಯಲು ಆನ್‌ಲೈನ್ನಲ್ಲಿ ಮುಕ್ತವಾಗಿ ಟೆಂಡರ್ ಕರೆಯಬಹುದು. ಆದರೆ, ಆತ ಅಥವಾ ಆ ಸಂಸ್ಥೆ ಉಪ ಗುತ್ತಿಗೆ ನೀಡುವಾಗ ಗೊಂದಲ, ಅಡ್ಡಿ ಎದುರಾಗುತ್ತವೆ. ಬೃಹತ್ ಯೋಜನೆಗಳ ಕಾಮಗಾರಿಗಳ ಗುತ್ತಿಗೆಯಲ್ಲಿ ಬಹುಶಃ ಈ ತರಹದ ಆತಂಕ ಇರುವುದಿಲ್ಲ. ಆದರೆ, ತುಂಡು ಗುತ್ತಿಗೆಗಳಲ್ಲಿ ಸ್ವಪಕ್ಷೀಯರು, ಬಂಧುಗಳು ಎಂಬ ವಾಂಛೆಯಿಂದ ನಿಯಮ ಮೀರಿ ಗುತ್ತಿಗೆ ನೀಡಲಾಗುತ್ತದೆ ಎಂಬ ಆರೋಪಗಳು ಇವೆ. ಅಲ್ಲದೆ, ‘ಪರ್ಸೆಂಟೇಜ್ ನಡೆಯುತ್ತದೆ’ ಎಂಬ ಆಪಾದನೆಗಳೂ ಜೋರಾಗಿಯೇ ಸದ್ದು ಮಾಡುತ್ತವೆ.

ಇಂತಹ ಸಂದಿಗ್ಧ ಸ್ಥಿತಿಯಿಂದ ಪಾರಾಗಲು ಕಾಮಗಾರಿಗಳನ್ನೇ ಸ್ಥಗಿತಗೊಳಿಸುವುದೂ ಉಂಟು. ಆದರೆ, ಈಗ ಸಚಿವ ಸಂಪುಟ ಸಭೆ ಪ್ರಕಟಿಸಿರುವ ಯೋಜನೆಗಳಿಗೆ ಅಂತಹ ದುಸ್ಥಿತಿ ಎದುರಾಗಬಾರದು. ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಸಂಪುಟ ಸಹೋದ್ಯೋಗಿಗಳು ಈ ಯೋಜನೆಗಳನ್ನು ಅನುಷ್ಠಾನಕ್ಕೆ ತರಲು ಕಟಿಬದ್ಧರಾಗಬೇಕಿದೆ. ಎಲ್ಲೋ ಗಲಾಟೆಯಾಯಿತು, ಬರಗಾಲ ಎದುರಾಯಿತು ಎಂಬ ಕಾರಣಕ್ಕೆ ಯೋಜನೆಗಳ ಜಾರಿ ಕುಂಠಿತಗೊಳ್ಳಬಾರದು. ಅದಕ್ಕೆ ನಿಗದಿತ ಗಡುವಿನೊಳಗೆ ಕಾಮಗಾರಿಗಳ ಎಲ್ಲ ಪ್ರಕ್ರಿಯೆಗಳನ್ನೂ ವೇಗವಾಗಿ ಸಂಪೂರ್ಣಗೊಳಿಸಿದರೆ, ಸಾರ್ವಜನಿಕರಿಗೆ ಅವುಗಳ ಅನುಕೂಲ ಸುಲಭವಾಗಿ ತಲುಪುತ್ತದೆ. ಎಲ್ಲಕ್ಕಿಂತ ಮುಖ್ಯವಾಗಿ ಚುನಾವಣೆಗಳು ಈ ಅಭಿವೃದ್ಧಿ ಕಾಮಗಾರಿಗಳಿಗೆ ದೊಡ್ಡ ತಡೆಯೊಡ್ಡಿಬಿಡುತ್ತವೆ. ಲೋಕಸಭೆಯಿಂದ ಗ್ರಾಮ ಪಂಚಾಯಿತಿವರೆಗೆ ಯಾವುದೇ ಚುನಾವಣೆ ಎದುರಾದರೂ ಚುನಾವಣಾ ನೀತಿ ಸಂಹಿತೆಯಿಂದ ಎಲ್ಲ ಕಾಮಗಾರಿಗಳೂ ನನೆಗುದಿಗೆ ಬೀಳುತ್ತವೆ. ಒಂದು ರೀತಿಯಲ್ಲಿ ಬಹುತೇಕ ಆಡಳಿತ ಪಕ್ಷಗಳಿಗೂ ಇದೊಂದು ರೀತಿಯಲ್ಲಿ ಅನುಕೂಲಕರವಾಗುತ್ತದೆ. ಇದನ್ನೆಲ್ಲ ಗಮನದಲ್ಲಿಟ್ಟುಕೊಂಡು ರಾಜ್ಯ ಸರ್ಕಾರ, ಸಚಿವ ಸಂಪುಟ ಸಭೆಯಲ್ಲಿ ಕೈಗೊಂಡಿರುವ ನಿರ್ಧಾರಗಳ ಅನುಷ್ಠಾನಕ್ಕೆ ಮುಂದಾಗಬೇಕು. ಆ ಮೂಲಕ ಮಹದೇಶ್ವರಬೆಟ್ಟದಲ್ಲಿ ನಡೆದ ಸಚಿವ ಸಂಪುಟ ಸಭೆ ಮಾದರಿಯಾಗಬೇಕು. ಈ ಬಗ್ಗೆ ರಾಜ್ಯ ಸರ್ಕಾರ, ಅಧಿಕಾರಿಗಳು ಹೆಚ್ಚು ಒತ್ತು ನೀಡುವುದು ಕೂಡ ಅತ್ಯಗತ್ಯ.

” ಬೃಹತ್ ಯೋಜನೆಗಳ ಕಾಮಗಾರಿಗಳ ಗುತ್ತಿಗೆಯಲ್ಲಿ ಬಹುಶಃ ಈ ತರಹದ ಆತಂಕ ಇರುವುದಿಲ್ಲ. ಆದರೆ, ತುಂಡು ಗುತ್ತಿಗೆಗಳಲ್ಲಿ ಸ್ವಪಕ್ಷೀಯರು, ಬಂಧುಗಳು ಎಂಬ ವಾಂಛೆಯಿಂದ ನಿಯಮ ಮೀರಿ ಗುತ್ತಿಗೆ ನೀಡಲಾಗುತ್ತದೆ ಎಂಬ ಆರೋಪಗಳು ಇವೆ. ಅಲ್ಲದೆ, ‘ಪರ್ಸೆಂಟೇಜ್ ನಡೆಯುತ್ತದೆ’ ಎಂಬ ಆಪಾದನೆಗಳೂ ಜೋರಾಗಿಯೇ ಸದ್ದು ಮಾಡುತ್ತವೆ. ಇಂತಹ ಸಂದಿಗ್ಧ ಸ್ಥಿತಿಯಿಂದ ಪಾರಾಗಲು ಕಾಮಗಾರಿಗಳನ್ನೇ ಸ್ಥಗಿತಗೊಳಿಸುವುದೂ ಉಂಟು. ಆದರೆ, ಈಗ ಸಚಿವ ಸಂಪುಟ ಸಭೆ ಪ್ರಕಟಿಸಿರುವ ಯೋಜನೆಗಳಿಗೆ ಅಂತಹ ದುಸ್ಥಿತಿ ಎದುರಾಗಬಾರದು. ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಸಂಪುಟ ಸಹೋದ್ಯೋಗಿಗಳು ಈ ಯೋಜನೆಗಳನ್ನು ಅನುಷ್ಠಾನಕ್ಕೆ ತರಲು ಕಟಿಬದ್ಧರಾಗಬೇಕಿದೆ.”

ಆಂದೋಲನ ಡೆಸ್ಕ್

Share
Published by
ಆಂದೋಲನ ಡೆಸ್ಕ್

Recent Posts

ಕರ್ನಾಟಕದಲ್ಲಿ ಮುಂಗಾರು ವಿಳಂಬ: ಕಂಗಾಲಾದ ರೈತರು

ಬೆಂಗಳೂರು: ಕರ್ನಾಟಕದಲ್ಲಿ ಮುಂಗಾರು ವಿಳಂಬವಾಗಿದ್ದು, ಇದು ಉತ್ಪಾದನೆಯ ಮೇಲೆ ಪರಿಣಾಮ ಬೀರಬಹುದು. ಕೃಷಿ ಇಲಾಖೆಯ ಅಧಿಕಾರಿಗಳು ಬಿತ್ತನೆ ಗುರಿಯ ಶೇಕಡಾ…

1 hour ago

ಇದು ಕೇವಲ ಆರಂಭ: ಮುಂದೆ ಹೋರಾಟ ದೊಡ್ಡಮಟ್ಟದಲ್ಲಿ ಇದೆ ಎಂದ ನಿಖಿಲ್‌ ಕುಮಾರಸ್ವಾಮಿ

ರಾಮನಗರ: ಟೌನ್‌ಶಿಪ್ ಯೋಜನೆ ವಿರೋಧಿಸಿ ಜೆಡಿಎಸ್‌ ಕೈಗೊಂಡಿರುವ ಕೈಗೊಂಡಿರುವ ಬೃಹತ್‌ ಪಾದಯಾತ್ರೆಯಲ್ಲಿ ಮಾತನಾಡಿದ ಯುವನಾಯಕ ನಿಖಿಲ್‌ ಕುಮಾರಸ್ವಾಮಿ ಇದು ಕೇವಲ…

1 hour ago

ಓದುಗರ ಪತ್ರ: ಮೇಲ್ಮನೆಯ ಗಾಂಭೀರ್ಯ ಹೆಚ್ಚಿಸುವಂತೆ ಕಾರ್ಯನಿರ್ವವಹಿಸಲಿ

ರಾಜ್ಯ ವಿಧಾನ ಸಭೆಯಿಂದ ವಿಧಾನ ಪರಿಷತ್ತಿನ ಏಳು ಸ್ಥಾನಗಳಿಗೆ ಇತ್ತೀಚೆಗೆ ನಡೆದ ಚುನಾವಣೆಯಲ್ಲಿ ನಿರೀಕ್ಷೆಯಂತೆಯೇ ಕಾಂಗ್ರೆಸ್ ೫ ಹಾಗೂ ಬಿಜೆಪಿ…

5 hours ago

ಓದುಗರ ಪತ್ರ: ದೇವಿಯ ನೇರ ದರ್ಶನ ಭಾಗ್ಯ ಕಲ್ಪಿಸಿ

ಆಷಾಢ ಶುಕ್ರವಾರಗಳಂದು ( ಜುಲೈ ೧೭, ೨೪, ೩೧, ಆಗಸ್ಟ್ ೭ ರಂದು ಆಷಾಢ ಶುಕ್ರವಾರಗಳು) ಸಾವಿರಾರು ಭಕ್ತರು ಚಾಮುಂಡಿ…

5 hours ago

ಓದುಗರ ಪತ್ರ: ಕಾಲಾವಕಾಶ ನೀಡಬೇಕು

ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಸದ್ಯ,ಪೊಲೀಸ್ ಇಲಾಖೆಯ ಮೂರು ಸಾವಿರಕ್ಕೂ ಅಧಿಕ ಹುದ್ದೆಗಳ ನೇಮಕಾತಿ ಅಧಿಸೂಚನೆ ಹೊರಡಿಸಿ ಲಿಖಿತ ಪರೀಕ್ಷಾ ದಿನಾಂಕ…

5 hours ago

ಶಿವಾಜಿ ಗಣೇಶನ್‌ ಅವರ ವಾರದ ಅಂಕಣ: ಬಿಜೆಪಿ ಷಡ್ಯಂತ್ರದಿಂದ ಹಲವು ಪಕ್ಷಗಳು ಒಡಕಿನತ್ತ?

ದೇಶದ ಹಲವು ಕಡೆ ಮತ್ತೆ ಪಕ್ಷಾಂತರದ ಹಾವಳಿ ಶುರುವಾಗಿದೆ. ಕೇಂದ್ರದಲ್ಲಿನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರದ ಕೈವಾಡವಿಲ್ಲದೆ ಈ ಪಕ್ಷಾಂತರ…

5 hours ago