ಎಡಿಟೋರಿಯಲ್

ತರೀಕೆರೆ ಏರಿಮೇಲೆ: ಸವಾಲುಗಳ ತೆರೆಗಳಲ್ಲಿ ಈಜಿದ ಚಿಕ್ಕಮ್ಮಂದಿರು

ಶಾಹಿದಾ ಚಿಕ್ಕಮ್ಮ ಇನ್ನೂ ಇದ್ದಾಳೆ. ಈಕೆ ಪ್ರಾಯದಲ್ಲಿ ಕಿರಗೂರಿನ ಗಯ್ಯಾಳಿ. ಗಂಡಸರ ಜಗತ್ತಿನ ದನ ಮೇಯಿಸುವ, ಮರಹತ್ತುವ ಮಣ್ಣು ಹೊರುವ, ಕಟ್ಟಿಗೆಗಾಗಿ ಕಾಡಿಗೆ ಹೋಗುವ ಕೆಲಸಗಳನ್ನು ಲೀಲೆಯಂತೆ ಮಾಡುತ್ತಿದ್ದವಳು. ದನ ಕಾಯಲು ಹೋದಾಗ ನಮ್ಮನ್ನೂ ಕರೆದುಕೊಂಡು ಹೋಗುತ್ತಿದ್ದಳು. ನಾವು ಮೇಯುವ ಸಾಧು ಎತ್ತುಗಳ ಮೇಲೆ ಸವಾರಿ ಮಾಡುತ್ತಿದ್ದೆವು. ಚಿಕ್ಕಮ್ಮ ಮಾವು, ಪೇರಲೆ, ಹುಣಿಸೇ ಮರಗಳನ್ನು ಕೋತಿಯಂತೆ ಏರಿ ಹಣ್ಣು ಕಿತ್ತುಕೊಡುತ್ತಿದ್ದಳು. ಈಕೆಯದು ಗಾಂಧರ್ವ ವಿವಾಹ. ಆ ಪ್ರಕರಣ ನಡೆದಾಗ ನಾನು ನಾಲ್ಕನೇ ಇಯತ್ತೆ. ಒಂದು ದಿನ, ಗಲ್ಲಿಯ ಜನರೆಲ್ಲ ಕೆಲಸದ ಮೇಲೆ ತೆರಳಿ, ಮಕ್ಕಳು ಮುದುಕರಷ್ಟೇ ಉಳಿದಿರುವ ನಿರ್ಜನ ಮಧ್ಯಾಹ್ನದಲ್ಲಿ, ಮನೆಯ ಮುಂದಿನ ಬೇವಿನ ಮರದಡಿ ಬಾಚಿಯಿಂದ ನೇಗಿಲನ್ನು ಕೆತ್ತುತ್ತಿದ್ದ ಬಡಗಿ ತಾಜರಣ್ಣನಿಗೆ ಚಿಕ್ಕಮ್ಮ ಮನೆಯೊಳಗೆ ಕರೆದು ಕುಡಿಯಲು ನೀರು ಕೊಟ್ಟಳು. ತಾಜರಣ್ಣ ಒಳಹೋಗುವುದನ್ನೇ ಪತ್ತೇದಾರಿ ಮಾಡುತ್ತಿದ್ದ ಯಾರೊ ಪ್ಯಾರಕ ದುಶ್ಮನ್ ಚಿಲಕವನ್ನು ಹೊರಗಿಂದ ಹಾಕಿಬಿಟ್ಟನು.

ಗುಲ್ಲೆದ್ದಿತು. ತಾಜರಣ್ಣನನ್ನು ಮನೆಯಿಂದ ಹೊರಗೆಳೆದು ಬೇವಿನಮರಕ್ಕೆ ಕಟ್ಟಿದರು. ತಡರಾತ್ರಿ ಪಂಚಾಯಿತಿ ಸೇರಿತು. ಮುಸ್ಲಿಮರ ಕೌಟುಂಬಿಕ ಸಮಸ್ಯೆಗಳಿಗೆ ಪಂಚಾಯಿತಿ ಸೇರಿದಾಗ ಎಲ್ಲ ಜಾತಿಯ ಮುಖಂಡರೂ ಇರುತ್ತಿದ್ದರು. ನ್ಯಾಯಸಭೆಯ ಅಧ್ಯಕ್ಷತೆ ಅಪ್ಪನ ಸೋದರಮಾವ ಪಟೇಲ್ ಮಸ್ತಾನಜ್ಜ ಅವರದು. ಚಿಕ್ಕಮ್ಮ ಒಂದೆಡೆ ನಿಂತು ಅಳುತ್ತಿದ್ದಳು. ‘ಆಕೆಯದು ತಪ್ಪಿಲ್ಲ. ನಾನೇ ನೀರು ಕೇಳಿ ಹೋಗಿದ್ದೆ’ ಎಂಬ ತಾಜರಣ್ಣನ ವಾದವನ್ನು ಸಭೆ ಒಪ್ಪಲಿಲ್ಲ. ಕೊನೆಗೆ ಶಂಕರಣ್ಣನವರು ನಮ್ಮ ಮಾವನಿಗೆ ‘ಏನಪ್ಪಾ ರಶೀದ್, ಕೆಟ್ಟರೂ ಸತ್ತರೂ ಅವಳು ನಿನ್ನ ತಂಗೀನೇ. ಕೊನೇ ಮಾತು ನೀನೇ ಹೇಳಿಬಿಡುೞ ಎಂದರು. ‘ನಾಯಿ ಮುಟ್ಟಿದ ಸ್ವಾರೆ ನಾಯಿ ಕೊಳ್ಳಿಗೆ ಕಟ್ಟೋದು’ ಎಂದು ಮಾವ ಕಹಿಯಾಗಿ ನುಡಿದನು. ಸಭೆ ಬರಖಾಸ್ತಾಯಿತು. ಪ್ರೇಮ ಪ್ರಕರಣದಲ್ಲಿ ಸಿಕ್ಕಿಬಿದ್ದವರಿಗೆ ಶಾದಿಭಾಗ್ಯವಿಲ್ಲ. ರಾತ್ರಿ ನಿಖಾ ಮಾತ್ರ. ಮಾರನೆಯ ಸಂಜೆ ಕೆಲವೇ ಹಿರಿಯರ ಸಮ್ಮುಖದಲ್ಲಿ ಸರಳ ನಿಖಾ ನೆರವೇರಿತು. ನನ್ನ ಜನನೀ-ಜನಕರದೂ, ತಮ್ಮಂದಿರದ್ದೂ ಪ್ರೇಮ ವಿವಾಹವಾಗಿದ್ದು, ಆ ಸುದೀರ್ಘ ಪರಂಪರೆಯಲ್ಲಿ ಶಾಹಿದಾ ಚಿಕ್ಕಮ್ಮನೂ ಸೇರಿಕೊಂಡಳು.ಗಂಡನ ಮನೆಯಲ್ಲಿ ‘ಓಡಿಬಂದವಳು’ ಎಂಬ ಬಿರುದನ್ನು ಹೊತ್ತು, ದೊರಕಿದ ತಾತ್ಸಾರವನ್ನೇ ಹಾಸಿಹೊದ್ದು ಶಾಹಿದಾ ಬದುಕಿದಳು. ಗಂಡ ಕುಡುಕನಾದಾಗ ಶಾನೇ ಪಾಡುಪಟ್ಟಳು. ಹಳ್ಳಿಯಲ್ಲಿದ್ದ ಆಕೆಯ ಮನೆಗೆ ಹೋದರೆ ನಮಗೆ ಬೆಲ್ಲ ಹಾಕಿದ ಮೇಕೆ ಹಾಲನ್ನು ಕಾಸಿ ಕೊಡುತ್ತಿದ್ದಳು. ಕೋಳಿ ಕೊಯ್ಯಿಸಿ ಮುದ್ದೆ ಮಾಡುತ್ತಿದ್ದಳು. ತನ್ನ ಹೋತಕ್ಕೆ ಗಂಡ ಕುಡಿದು ಬಂದಾಗ ಗುದ್ದಲು ಕಲಿಸಿದ್ದಳು. ‘ಅಲ್ಲವ್ವ, ಸತ್ತಗಿತ್ತರೆ ಏನ್ ಮಾಡ್ತೀಯಾ?’ ಎಂದರೆ, ‘ಸತ್ತರೆ ಸಾಯಲಿ ಬಿಡಪ್ಪ ಅತ್ಲಾಗಿ. ನನಗೇನು ಸುಖವಾಗಿ ಇಟ್ಟಿದಾನಾ?’ ಎಂದು ನಗೆಯಾಡುತ್ತಿದ್ದಳು. ಹೃದಯ ದೊಡ್ಡದು. ಮನಸ್ಸು ನಿಷ್ಕಲ್ಮಷ. ಈಗಲೂ ಕಂಡೊಡನೆ ತಾಂಬೂಲದಿಂದ ಕೆಂಪಗಾಗಿರುವ ಹಲ್ಲನ್ನು ತೋರುತ್ತ ಪಿಚ್ಚನೆ ನಗುತ್ತಾಳೆ. ಬಾಳ ಉರಿಯಲ್ಲಿ ನಗೆಹೂವು ಎಂದೂ ಬಾಡಲಿಲ್ಲ. ಅಮ್ಮನ ಕಡೆಯ ಕೊನೇ ಕೊಂಡಿ ಎಂದು ನಮಗೆಲ್ಲ ಮಮಕಾರ. ವಯಸ್ಸು ಎಂಬತ್ತರ ಆಸುಪಾಸು. ತಲೆಗೂದಲು ನರೆತಿಲ್ಲ. ಬಾನು, ‘ಚಿಕ್ಕಮ್ಮಾ, ನಿನ್ನ ಕೂದಲು ನನಗೆ ಕೊಡ್ತೀಯಾ?’ ಎಂದು ಕೇಳಿದರೆ, ‘ತಗೊ ಮಾರಾಯ್ತಿ. ನಿನಗೆ ಬ್ಯಾಡ ಅಂತೀನೇ’ ಎನ್ನುತ್ತಾಳೆ. ಸಾಧ್ಯವಿದ್ದರೆ ಅದನ್ನೂ ಕಿತ್ತು ಕೊಡು ತ್ತಿದ್ದಳೊ ಏನೊ? ಶಾಹಿದಾ ಎಂದರೆ ಹುತಾತ್ಮೆ ಎಂದರ್ಥ. ಇಂಥ ಜನರನ್ನು ಬಾಳು ಹುತಾತ್ಮರಾಗಿಸುತ್ತದೆಯೊ, ಜನರೇ ಬಾಳಿಗೆ ಹುತಾತ್ಮ ಪಟ್ಟ ತೊಡಿಸುವರೊ ನಿರ್ಧರಿಸುವುದು ಕಷ್ಟ.

andolanait

Recent Posts

ಮೈಸೂರು | ಪೇದೆ ನೇಮಕಾತಿ ಪರೀಕ್ಷೆ ಸುಸೂತ್ರ ; 13,166 ಹಾಜರ್‌, 3,424 ಮಂದಿ ಗೈರು

ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…

48 mins ago

ದೆಹಲಿಯಲ್ಲಿ 6 ಅಂತಸ್ತಿನ ಕಟ್ಟಡ ಕುಸಿತ ; ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ

ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…

2 hours ago

ಅಶ್ಲೀಲ ಕಮೆಂಟ್‌ ಪ್ರಕರಣ : ರಮ್ಯಾ ಕಾಲಿಗೆ ಬಿದ್ದ ದರ್ಶನ್ ಫ್ಯಾನ್ಸ್ ; ಆದರೂ ಇಲ್ಲ ಕ್ಷಮೆ ಎಂದ ನಟಿ

ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…

4 hours ago

ಬೆಳಗಿನ ಜಾವ ಸಿದ್ದಾಪುರ ಪಟ್ಟಣಕ್ಕೆ ಕಾಡಾನೆಗಳ ಎಂಟ್ರಿ: ಆತಂಕದಲ್ಲಿ ಜನತೆ

ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…

5 hours ago

ಸೋಮವಾರಪೇಟೆಯಲ್ಲಿ ಎಟಿಎಂ ದರೋಡೆಗೆ ಖದೀಮರ ಯತ್ನ

ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್‌ಬಿಐ ಬ್ಯಾಂಕ್‌ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…

5 hours ago

ಸಿಎಂ ಡಿಕೆಶಿ ಹಾಗೂ ಸಚಿವ ಲಕ್ಷ್ಮಣ್ ಸವದಿ ಸಹಕಾರದಿಂದ ಅಧ್ಯಕ್ಷನಾಗಿದ್ದೇನೆ: ಶಾಸಕ ಜಿ.ಟಿ.ದೇವೇಗೌಡ

ಮೈಸೂರು: ಸಹಕಾರ ಮಹಾಮಂಡಲದ ಅಧ್ಯಕ್ಷ ಸ್ಥಾನಕ್ಕೆ ಜಿ.ಟಿ. ದೇವೇಗೌಡ ಆಯ್ಕೆಯಾಗಿರುವುದು ರಾಜಕೀಯ ವಲಯದಲ್ಲಿ ಅಚ್ಚರಿ ಮೂಡಿಸಿದೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್…

6 hours ago