ಬೆಂಗಳೂರು: ರಾಜ್ಯದ ಎಲ್ಲಾ ಶಾಲೆಗಳಲ್ಲಿ 2022-23 ನೇ ಸಾಲಿನಿಂದ 5 ಮತ್ತು 8ನೇ ತರಗತಿಗಳಿಗೂ ವಾರ್ಷಿಕ ಪರೀಕ್ಷೆ ನಡೆಸುವಂತೆ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ. ಮಕ್ಕಳ ಕಲಿಕಾ ಕೊರತೆಯನ್ನು ನೀಗಿಸಲು ಕಲಿಕಾ ಚೇತರಿಕೆ ಮಾಡಲು ಶಿಕ್ಷಣ ಇಲಾಖೆ ತಯಾರಿ ನಡೆಸಿದೆ. ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಇವರ ಹಂತದಲ್ಲಿಯೇ ಪ್ರಶ್ನೆ ಪತ್ರಿಕೆ ರೂಪಿಸಿ ಪರೀಕ್ಷೆ ನಡೆಸಿ ಮೌಲ್ಯಮಾಪನ ಮಾಡಬೇಕು. ಫಲಿತಾಂಶವನ್ನು ಶಾಲಾವಾರು ಕ್ಲಸ್ಟರ್ ವಾರು, ತಾಲೂಕವಾರು ವಿಶ್ಲೇಷಿಸಬೇಕು ಎಂದು ಸೂಚಿಸಲಾಗಿದೆ.
ರಾಜ್ಯ ಪಠ್ಯಕ್ರಮದ ಎಲ್ಲಾ ಶಾಲೆಗಳ ವಿದ್ಯಾರ್ಥಿಗಳ ಒಟ್ಟಾರೆ ಸಾಧನೆ ಯಾವ ರೀತಿ ಇದೆ ಎಂಬುದನ್ನು ತಿಳಿಯಲು ಸಾಧ್ಯವಾಗುತ್ತಿಲ್ಲ. ಇದರಿಂದ ಒಟ್ಟಾರೆಯಾಗಿ ಮಕ್ಕಳ ಕಲಿಕೆಯ ಮಟ್ಟವೇನು? ಕೊರತೆಗಳೇನು? ಯಾವ ವಿಷಯದಲ್ಲಿ ಹಿನ್ನಡೆ ಉಂಟಾಗಿದೆ? ಇವುಗಳನ್ನು ನಿವಾರಿಸಲು ಯಾವ ಕ್ರಮಗಳನ್ನು ಅನುಸರಿಸಬೇಕು ಎಂಬುದನ್ನು ನಿರ್ಧರಿಸಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ಎಲ್ಲಾ ಶಾಲೆಯ ವಿದ್ಯಾರ್ಥಿಗಳ ಕಲಿಕಾ ಪ್ರಗತಿ ಹಾಗೂ ಸಾಮರ್ಥ್ಯಗಳನ್ನಾಧರಿಸಿದ ಏಕರೂಪದ ಸಾಧನಾ ಮತ್ತು ತಂತ್ರ ಬಳಸಿ ಮೌಲ್ಯಮಾಪನ ಮಾಡಿ ವಿಶ್ಲೇಷಣೆ ಮಾಡುವುದು ಅವಶ್ಯವಿದೆ. ಹೀಗಾಗಿ ರಾಜ್ಯದ ಎಲ್ಲಾ ಶಾಲೆಗಳಲ್ಲಿ 5 ಮತ್ತು 8ನೇ ತರಗತಿಗಳಿಗೆ ವಾರ್ಷಿಕ ಪರೀಕ್ಷೆ ಮಾಡಲು ಶಿಕ್ಷಣ ಇಲಾಖೆ ಆದೇಶ ಮಾಡಿದೆ ಎಂದು ತಿಳಿದುಬಂದಿದೆ.