ಮೈಸೂರು: ಕನ್ನಡ ಚಿತ್ರರಂಗದ ನಟ ಡಾಲಿ ಧನಂಜಯ್ ಅವರು ಇದೇ ಫೆಬ್ರವರಿ.15 ಮತ್ತು 16ರಂದು ಮೈಸೂರಿನ ವಸ್ತು ಪ್ರದರ್ಶನ ಆವರಣದಲ್ಲಿ ಧನ್ಯತಾ ಜೊತೆ ವಿವಾಹವಾಗಲಿದ್ದಾರೆ.
ಈ ಹಿನ್ನೆಲೆಯಲ್ಲಿಂದು ವಸ್ತು ಪ್ರದರ್ಶನ ಆವರಣದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ನಟ ಡಾಲಿ ಧನಂಜಯ್ ಅವರು, ಮದುವೆಗೆ ಈಗಾಗಲೇ ಸಿದ್ಧತೆ ಮಾಡಿಕೊಳ್ಳಲಾಗಿದ್ದು, ಮೈಸೂರಿನಲ್ಲೇ ಮದುವೆ ಆಗಬೇಕು ಎನ್ನುವುದು ನಮ್ಮ ಕನಸು. ನನ್ನ ವಿದ್ಯಾಭ್ಯಾಸ, ಚಿತ್ರರಂಗಕ್ಕೆ ಕಾಲಿಟ್ಟಿದ್ದು ಎಲ್ಲವೂ ಮೈಸೂರಿನಿಂದಲೇ ಎಂದರು.
ಇನ್ನು ನನ್ನ ಮದುವೆ ಸಮಾರಂಭದಲ್ಲಿ ಪಾಲ್ಗೊಳ್ಳಲು ಅಭಿಮಾನಿಗಳಿಗೆ ಮುಕ್ತ ಅವಕಾಶ ನೀಡಿದ್ದೇವೆ. ಎಲ್ಲರೂ ನೇರವಾಗಿ ಬಂದು ನನಗೆ ಆಶೀರ್ವಾದ ಮಾಡಿ ಹೋಗಬಹುದು. ವಿದ್ಯಾಪತಿ ದ್ವಾರದ ಮೂಲಕ ಅಭಿಮಾನಿಗಳಿಗೆ ಎಂಟ್ರಿ ಇರುತ್ತದೆ ಎಂದು ಮಾಹಿತಿ ನೀಡಿದರು.
ಇನ್ನು ಮುಂದುವರಿದು ಮಾತನಾಡಿದ ಅವರು, ಚಾಮುಂಡೇಶ್ವರಿ ದೇವಾಲಯ ಮಾದರಿಯಲ್ಲಿ ವೇದಿಕೆ ನಿರ್ಮಾಣ ಆಗುತ್ತಿದೆ. ದಕ್ಷಿಣ ಭಾರತದ ಮಾದರಿಯ ಊಟದ ವ್ಯವಸ್ಥೆ ಇದೆ. ಅಭಿಮಾನಿಗಳು, ವಿಐಪಿಗಳಿಗೆ ಪ್ರತ್ಯೇಕ ಊಟದ ವ್ಯವಸ್ಥೆ ಮಾಡಲಾಗಿದೆ. ಎಲ್ಲರಿಗೂ ಒಂದೇ ಮಾದರಿಯ ಊಟ ಇರುತ್ತದೆ ಎಂದು ತಿಳಿಸಿದರು.
ಇನ್ನು ನಟ ದರ್ಶನ್ ಅವರು ನನ್ನ ಮದುವೆಗೆ ಬಂದರೆ ಸಂತೋಷ ಎಂದ ಅವರು, ಈಗಿನ ಪರಿಸ್ಥಿತಿಯಲ್ಲಿ ದರ್ಶನ್ ಅವರನ್ನು ಭೇಟಿಯಾಗಲು ಆಗುತ್ತಿಲ್ಲ. ಕನ್ನಡ ಚಿತ್ರರಂಗದ ಎಲ್ಲರನ್ನೂ ಕರೆದಿದ್ದೇನೆ. ದರ್ಶನ್ರನ್ನು ಕರೆಯಲು ಪ್ರಯತ್ನ ಮಾಡುತ್ತಿದ್ದೇನೆ. ಆದರೆ ಅವರು ಸಿಗುತ್ತಿಲ್ಲ. ದರ್ಶನ್ ಅವರು ಮದುವೆಗೆ ಬಂದರೆ ಸ್ವಾಗತ ಎಂದರು.