ಮಂಡ್ಯ: ರಾಜ್ಯದ ಹೆಣ್ಣು ಮಕ್ಕಳ ಬಗ್ಗೆ ಅತ್ಯಂತ ಹಗುರ ಮತ್ತು ಅವಹೇಳನಕಾರಿಯಾಗಿ ಮಾತನಾಡಿರುವ ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ದಾರಿತಪ್ಪಿದ ಮಗ ಎಂದು ಖ್ಯಾತ ಬಹಭಾಷಾ ನಟ ಪ್ರಕಾಶ್ ರಾಜ್ ಹೇಳಿದ್ದಾರೆ.
ನಗರದ ರೈತ ಸಭಾಂಗಣದಲ್ಲಿ ಜಿಲ್ಲಾ ಶ್ರಮಿಕ ನಗರ ನಿವಾಸಿಗಳ ಒಕ್ಕೂಟದಿಂದ ಆಯೋಜಿಸಿದ್ದ ಶ್ರಮಿಕರ ಸ್ವಾಭಿಮಾನಿ ಗೆಲುವಿನ ಸಮಾವೇಶ ದಲ್ಲಿ ಮಾತನಾಡಿದ ಪ್ರಕಾಶ್ ರಾಜ್, ಹೆಣ್ಣುಮಕ್ಕಳ ಬಗ್ಗೆ ಇಷ್ಟು ಕೆಳ ಮಟ್ಟಕ್ಕೆ ಇಳಿದು ಮಾತನಾಡಲು ಕುಮಾರಸ್ವಾಮಿಗೆ ನಾಚಿಕೆ, ಮಾನ ಮರ್ಯಾದೆ ಇಲ್ಲ ಎಂದು ಪ್ರಶ್ನಿಸಿದರು.
ಕಳೆದ ಲೋಕಸಭಾ ಚುನಾವಣೆಯಲ್ಲಿ ಸುಮಲತಾ ಅಂಬರೀಶ್ ಅವರನ್ನು ಗಂಡ ಸತ್ತ ಮುಂಡೆ ಎಂದು ಕರೆದಿದ್ದರು. ಆ ಕಾರಣಕ್ಕೆ, ಮಂಡ್ಯದ ಮಹಿಳೆಯರು ಚುನಾವಣೆಯಲ್ಲಿ ಸೋಲಿಸಿ ಮನೆಗೆ ಕಳಿಸಿದ್ದರು. ಈ ಬಾರಿಯ ಚುನಾವಣೆಯಲ್ಲೂ ಅಂತದ್ದೆ ಕೆಲಸವನ್ನೂ ಕುಮಾರಸ್ವಾಮಿ ಮಾಡುತ್ತಿದ್ದಾರೆ. ಈಗ ಮಹಿಳೆಯರು ಎಚ್ಚೆತ್ತುಕೊಳ್ಳಬೇಕು. ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಸರಿಯಾದ ಮಗ ಯಾರು, ಕಳ್ಳಳನನ್ನ ಮಗ ಯಾರು ಯಾರು ಎಂಬುವುದನ್ನು ಮಂಡ್ಯದ ಜನರು ತೀರ್ಮಾನಿಸಬೇಕು ಎಂದು ಕರೆ ನೀಡಿದರು.
ಕಳೆದ ಸೆಪ್ಟೆಂಬರ್ನಲ್ಲಿ ಬರ ಪರಿಹಾರಕ್ಕಾಗಿ ರಾಜ್ಯ ಸರ್ಕಾರ ಕೇಂದ್ರಕ್ಕೆ ಮನವಿ ಸಲ್ಲಿಸಿದೆ. ಆದರೆ, ಏಪ್ರಿಲ್ ಬಂದರೂ ಬರ ಪರಿಹಾರ ನೀಡಿಲ್ಲ. ಈ ಕಾರಣ ಪರಿಹಾರ ಬಿಡುಗಡೆಗಾಗಿ ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್ ಮೋರೆ ಹೋಗಿದೆ. ರಾಜ್ಯದ ಅರ್ಜಿ ವಿಚಾರಣೆ ನಡೆಸಿದ ಘನ ನ್ಯಾಯಾಲಯ ಕೇಂದ್ರಕ್ಕೆ ನೋಟಿಸ್ ನೀಡಲು ಮುಂದಾದಾಗ, ನೋಟಿಸ್ ಕೊಡ್ಬೇಡಿ ಮಾನ ಮರ್ಯಾದೆ ಹೋಗುತ್ತೆ ಎಂದು ಬೇಡಿಕೊಳ್ಳುತ್ತಿದ್ದಾರೆ. ಇಷ್ಟೆಲ್ಲಾ ನಾಟಕ ಯಾಕೆ ಎಂದು ಪ್ರಕಾಶ್ ರಾಜ್ ಆಕ್ರೋಶ ವ್ಯಕ್ತಪಡಿಸಿದರು.





