ಯೋಗರಾಜ್ ಭಟ್ ನಿರ್ದೇಶನದ ‘ಮನದ ಕಡಲು’ ಚಿತ್ರದ ಚಿತ್ರೀಕರಣ ಮುಗಿದಿದೆ. ಚಿತ್ರವು ಫೆಬ್ರವರಿಯಲ್ಲಿ ಬಿಡುಗಡೆ ಆಗುತ್ತಿದೆ. ಈ ಮಧ್ಯೆ, ಚಿತ್ರದ ಮೊದಲ ಹಾಡು ಭಾನುವಾರ ಬಿಡುಗಡೆ ಆಗಿದೆ. ಹಾಡು ಅದೇ ದಿನ ಬಿಡುಗಡೆ ಆಗುವುದಕ್ಕೂ ಕಾರಣವಿದೆ. ಅದೇನೆಂದರೆ, 18 ವರ್ಷಗಳ ಹಿಂದೆ ಡಿ. 29ರಂದು ಯೋಗರಾಜ್ ಭಟ್ ನಿರ್ದೇಶನದ ‘ಮುಂಗಾರು ಮಳೆ’ ಮತ್ತು ಇ. ಕೃಷ್ಣಪ್ಪ ನಿರ್ಮಾಣದ ‘ಮುಂಗಾರು ಮಳೆ’ ಚಿತ್ರವು ಬಿಡುಗಡೆ ಆಗಿತ್ತು. ಆ ನೆನಪಲ್ಲಿ ‘ಮನದ ಕಡಲು’ ಹಾಡು ಬಿಡುಗಡೆ ಆಗಿದೆ.
ವಿ. ಹರಿಕೃಷ್ಣ ಸಂಗೀತ ನೀಡಿರುವ ‘ಹೂ ದುಂಬಿಯ ಕಥೆಯ’ ಎಂಬ ಹಾಡು ಡಿಬೀಟ್ಸ್ ಮೂಲಕ ಬಿಡುಗಡೆಯಾಗಿದೆ. ಸಂಜಿತ್ ಹೆಗ್ಡೆ ಈ ಸುಮಧುರ ಹಾಡಿಗೆ ಧ್ವನಿಯಾಗಿದ್ದಾರೆ. ‘ಮನದ ಕಡಲು’ ಚಿತ್ರದ ಮೊದಲ ಹಾಡು ಇದ್ದಾಗಿದ್ದು, ವಿ.ಹರಿಕೃಷ್ಣ ಅವರೇ ಹಾಡನ್ನು ಬಿಡುಗಡೆ ಮಾಡಿದರು. ಹಾಡು ಬಿಡುಗಡೆ ನಂತರ ಚಿತ್ರತಂಡದ ಸದಸ್ಯರು ಮಾತನಾಡಿದರು.
ಈ ಹಾಡಿನ ಕುರಿತು ಮಾತನಾಡುವ ಯೋಗರಾಜ್ ಭಟ್, ‘‘ಮುಂಗಾರು ಮಳೆ’ ಬಂದು 18 ವರ್ಷ ಆಯಿತು ಅಂದರೆ ನಂಬಲಿಕ್ಕೆ ಆಗುತ್ತಿಲ್ಲ. ನಿನ್ನೆ ಮೊನ್ನೆ ಆದ ಹಾಗೆ ಇದೆ. ಇದೇ ಸಂದರ್ಭದಲ್ಲಿ ಇ. ಕೃಷ್ಣಪ್ಪ ಅವರ ನಿರ್ಮಾಣದಲ್ಲಿ ಹಾಗೂ ನನ್ನ ನಿರ್ದೇಶನದಲ್ಲಿ ಮೂಡಿಬರುತ್ತಿರುವ ‘ಮನದ ಕಡಲು’ ಚಿತ್ರದ ಮೊದಲ ಗೀತೆಯನ್ನು ಬಿಡುಗಡೆ ಮಾಡುತ್ತಿದ್ದೇವೆ. ಈ ಹಾಡು ಹುಟ್ಟಿದ್ದು ನಿರ್ಮಾಪಕರ ತೋಟದ ಮನೆಯಲ್ಲಿ. ಕಂಪೋಸ್ ಆಗಿದ್ದು ನನ್ನ ಆಫೀಸ್ ಮೇಲಿರುವ ಸ್ಟುಡಿಯೋದಲ್ಲಿ. ಮುರಳಿ ನೃತ್ಯ ಸಂಯೋಜನೆಯಲ್ಲಿ ‘ಹೂ ದುಂಬಿಯ ಕಥೆಯ’ ಹಾಡು ಮೂಡಿಬಂದಿದೆ. ಸುಮುಖ ಹಾಗೂ ರಾಶಿಕಾ ಶೆಟ್ಟಿ ಈ ಹಾಡಿನಲ್ಲಿ ಅಭಿನಯಿಸಿದ್ದಾರೆ’ ಎಂದು ಹಾಡಿನ ಬಗ್ಗೆ ಮಾಹಿತಿ ನೀಡಿದರು.
18 ವರ್ಷಗಳ ನಂತರ ಯೋಗರಾಜ್ ಭಟ್ ಅವರ ಜೊತೆ ಮತ್ತೆ ಚಿತ್ರ ಮಾಡುತ್ತಿದ್ದೇನೆ ಎಂದು ಮಾತು ಪ್ರಾರಂಭಿಸಿದ ಕೃಷ್ಣಪ್ಪ, ‘ನಿಮ್ಮ ಜೊತೆ ಸಿನಿಮಾ ಮಾಡುವುದಾದರೆ ಹೊಸ ನಾಯಕನೇ ಇರಬೇಕು ಅಂದೆ. ಅದರಂತೆ ಸುಮುಖ ಅವರನ್ನು ಆಯ್ಕೆ ಮಾಡಲಾಯಿತು’ ಎಂದು ನಿರ್ಮಾಪಕ ಇ.ಕೃಷ್ಣಪ್ಪ ತಿಳಿಸಿದರು.
ಸಿನಿಮಾವನ್ನು ತುಂಬಾ ಪ್ರೀತಿಸುವ ತಂಡದ ಜೊತೆಗೆ ಕೆಲಸ ಮಾಡಿದ್ದು ತುಂಬಾ ಖುಷಿಯಾಗಿದೆ ಎಂದ ವಿ. ಹರಿಕೃಷ್ಣ, ‘ಯೋಗರಾಜ್ ಭಟ್ ಅವರು ಬರೆದಿರುವ ಹಾಡನ್ನು ಸಂಜಿತ್ ಸುಶ್ರಾವ್ಯವಾಗಿ ಹಾಡಿದ್ದಾರೆ. ತೆರೆಯ ಮೇಲೂ ಹಾಡು ಬಹಳ ಚೆನ್ನಾಗಿ ಬಂದಿದೆ’ ಎಂದರು.
‘ನನ್ನ ಹಾಗೂ ಸಂಜಿತ್ ಅವರನ್ನು ನೋಡಿದವರು ಟ್ವಿನ್ಸಾ? ಅಂತ ಕೇಳಿದರು. ನಾನು ಯೋಗರಾಜ್ ಭಟ್ ಅವರ ಸಾಹಿತ್ಯಕ್ಕೆ, ಹರಿಕೃಷ್ಣ ಅವರ ಸಂಗೀತಕ್ಕೆ ಹಾಗೂ ಸಂಜಿತ್ ಅವರ ಗಾಯನಕ್ಕೆ ಅಭಿಮಾನಿ’ ಎಂದರು ನಾಯಕ ಸುಮುಖ.
‘ಮನದ ಕಡಲು’ ಚಿತ್ರದಲ್ಲಿ ಸುಮುಖ, ಅಂಜಲಿ ಅನೀಶ್ ಮತ್ತು ರಾಶಿಕಾ ಶೆಟ್ಟಿ ನಾಯಕ-ನಾಯಕಿಯರಾಗಿ ನಟಿಸಿದರೆ, ದತ್ತಣ್ಣ, ರಂಗಾಯಣ ರಘು ಮುಂತಾದ ಹಿರಿಯರಿದ್ದಾರೆ. ಚಿತ್ರಕ್ಕೆ ಸಂತೋಷ್ ರೈ ಪಾತಾಜೆ ಛಾಯಾಗ್ರಹಣ, ಜಯಂತ್ ಕಾಯ್ಕಿಣಿ ಸಾಹಿತ್ಯವಿದೆ.





