ಧನ್ವೀರ್ ಗೌಡ ಅಭಿನಯದ ‘ವಾಮನ’ ಚಿತ್ರ ಒಂದೂವರೆ ವರ್ಷಗಳ ಹಿಂದೆ ಬಿಡುಗಡೆಯಾಗಬೇಕಿತ್ತು. ನಟ ಧನ್ವೀರ್ ಮತ್ತು ನಿರ್ಮಾಪಕಚೇತನ್ ಗೌಡ ನಡುವಿನ ಮುನಿಸಿನಿಂದಾಗಿ ಚಿತ್ರದ ಬಿಡುಗಡೆ ರದ್ದಾಗುವುದಷ್ಟೇ ಅಲ್ಲ, ಇನ್ನು ಬಿಡುಗಡೆಯೇ ಆಗುವುದಿಲ್ಲ ಎಂಬ ಮಾತು ಕೇಳಿಬಂದಿತ್ತು. ಹೀಗಿರುವಾಗಲೇ, ಏಪ್ರಿಲ್ ೧೦ರಂದು ‘ವಾಮನ’ ಬಿಡುಗಡೆ ಮಾಡುವುದಾಗಿ ಚಿತ್ರತಂಡ ಘೋಷಿಸಿದೆ.
ಮೊದಲ ಹಂತವಾಗಿ ಇತ್ತೀಚೆಗೆ ಚಿತ್ರದ ತಾಯಿ ಸೆಂಟಿಮೆಂಟ್ ಹಾಡೊಂದು ಬಿಡುಗಡೆಯಾಯಿತು. ಈ ಸಂದರ್ಭದಲ್ಲಿ ನಿರ್ಮಾಪಕರು ಮತ್ತು ನಾಯಕ ಜೊತೆಯಾಗಿ ಕಾಣಿಸಿಕೊಳ್ಳಲಿಲ್ಲ. ತಮ್ಮ ಭಾಷಣಗಳಲ್ಲಿ ಇನ್ನೊಬ್ಬರ ಹೆಸರನ್ನು ತೆಗೆಯಲಿಲ್ಲ. ಒಂದೂವರೆ ವರ್ಷದ ಹಿಂದೆಯೇ ಬಿಡುಗಡೆಯಾಗಬೇಕಿದ್ದ ಚಿತ್ರವು, ಇಷ್ಟು ತಡವಾಗುತ್ತಿರುವುದೇಕೆ ಎಂಬ ಪ್ರಶ್ನೆಗೆ, ‘ನಾವು ಬಿಡುಗಡೆ ದಿನಾಂಕ ಘೋಷಣೆ ಮಾಡಿರಲಿಲ್ಲ.
ವ್ಯಾಪಾರದ ವಿಷಯವಾಗಿ ಚಿತ್ರ ಸ್ವಲ್ಪ ತಡವಾಯಿತು’ ಎಂದಷ್ಟೇ ಹೇಳಿದರು ನಿರ್ಮಾಪಕ ಚೇತನ್ ಗೌಡ. ‘ವಾಮನ’ ಚಿತ್ರಕ್ಕಾಗಿ ಪ್ರಮೋದ್ ಮರವಂತೆ ಬರೆದಿರುವ ‘ಕಂದನ ಕನಸ ರೂಪ…’ ಎಂಬ ತಾಯಿ – ಮಗನ ಬಾಂಧವ್ಯದ ಕುರಿತಾದ ಹಾಡು ಇತ್ತೀಚೆಗೆ ಬಿಡುಗಡೆಯಾಯಿತು. ದರ್ಶನ್ ಪತಿ ವಿಜಯಲಕ್ಷ್ಮಿ ದರ್ಶನ್ ಈ ಹಾಡನ್ನು ಬಿಡುಗಡೆ ಮಾಡಿ ಚಿತ್ರ ಯಶಸ್ವಿಯಾಗಲೆಂದು ಹಾರೈಸಿದ್ದಾರೆ. ‘ಕಾಂತಾರ’ ಖ್ಯಾತಿಯ ವೆಂಕಟೇಶ್ ಡಿ.ಸಿ. ಈ ಹಾಡನ್ನು ಹಾಡಿದ್ದಾರೆ. ಅಜನೀಶ್ ಲೋಕನಾಥ್ ಸಂಗೀತ ಸಂಯೋಜಿಸಿರುವ ಈ ಹಾಡು ಅ೨ ಞ್ಠoಜ್ಚಿ ಚಾನಲ್ನಲ್ಲಿ ಬಿಡುಗಡೆಯಾಗಿದೆ.
ಈ ಹಾಡನ್ನು ವಿಶ್ವದ ಎಲ್ಲಾ ತಾಯಂದಿರಿಗೆ ಅರ್ಪಿಸುತ್ತೇನೆ ಎಂದು ಮಾತನಾಡಿದ, ಚಿತ್ರಕ್ಕೆ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡಿರುವ ಶಂಕರ್ ರಾಮನ್, ‘ನನಗೆ ‘ಕೈ ತುತ್ತು ಕೊಟ್ಟವಳೆ ಐ ಲವ್ ಯೂ ಮದರ್ ಇಂಡಿಯಾ…’ ಹಾಗೂ ‘ಬೇಡುವೆನು ವರವನ್ನು ಕೊಡೆ ತಾಯಿ ಜನುಮವನು…’ ಹಾಡುಗಳು ತುಂಬಾ ಇಷ್ಟ. ಅದೇ ತರಹದ ಹಾಡು ನಮ್ಮ ಚಿತ್ರಕ್ಕೆ ಬೇಕು ಎಂದು ಕೇಳಿದಾಗ ಪ್ರಮೋದ್ ಮರವಂತೆ ಈ ಹಾಡನ್ನು ಬರೆದು ಕೊಟ್ಟಿದ್ದಾರೆ. ತಾಯಿ ತನ್ನ ಬವಣೆಗಳನ್ನು ಮಗನ ಮುಂದೆ ಹೇಳಿಕೊಳ್ಳುವ ಹಾಡು ಇದು’ ಎಂದರು. ‘ವಾಮನ’ ಚಿತ್ರದಲ್ಲಿ ಧನ್ವೀರ್, ರೀಷ್ಮಾ ನಾಣಯ್ಯ, ತಾರಾ, ಸಂಪತ್, ಆದಿತ್ಯ ಮೆನನ್, ಶಿವರಾಜ್ ಕೆ.ಆರ್.ಪೇಟೆ, ಅವಿನಾಶ್, ಅಚ್ಯುತ್ ಕುಮಾರ್, ಕಾಕ್ರೊಚ್ ಸುಧಿ ಮುಂತಾದವರು ಅಭಿನಯಿಸಿದ್ದಾರೆ.




