ಅನೂಪ್ ಭಂಡಾರಿ ನಿರ್ದೇಶನದ ಮತ್ತು ನಿರೂಪ್ ಭಂಡಾರಿ ನಾಯಕನಾಗಿ ನಟಿಸಿದ ‘ರಂಗಿತರಂಗ’ ಚಿತ್ರವು 2015ರ ಜುಲೈ.3ರಂದು ಬಿಡುಗಡೆಯಾಗಿ ಯಶಸ್ವಿಯಾಗಿತ್ತು. ಪರಭಾಷೆಗಳ ದೊಡ್ಡದೊಡ್ಡ ಚಿತ್ರಗಳ ನಡುವೆ ತೆರೆ ಕಂಡಿದ್ದ ಎಚ್.ಕೆ.ಪ್ರಕಾಶ್ ನಿರ್ಮಾಣದ ಈ ಚಿತ್ರ ಯಶಸ್ವಿಯಾಗುವುದರ ಜೊತೆಗೆ, ಹೊಸಬರ ತಂಡವು ಗೆಲ್ಲಬಹುದು ಎಂದು ತೋರಿಸಿಕೊಟ್ಟಿತ್ತು.
ಇದೀಗ ‘ರಂಗಿತರಂಗ’ ಚಿತ್ರವು 10 ವರ್ಷಗಳನ್ನು ಪೂರೈಸಿದ ಖುಷಿಯಲ್ಲಿ ಚಿತ್ರವನ್ನು ಮತ್ತೆ ಬಿಡುಗಡೆ ಮಾಡುವುದಕ್ಕೆ ಚಿತ್ರತಂಡ ಮುಂದಾಗಿದೆ. ಚಿತ್ರವನ್ನು ಜುಲೈ.04ರಂದು ಪುನಃ ಬಿಡುಗಡೆ ಮಾಡುವುದಕ್ಕೆ ಮುಂದಾಗಿದೆ.
ಈ ಕುರಿತು ಮಾಹಿತಿ ನೀಡಲು ಆಯೋಜಿಸಿದ್ದ ಪತ್ರಿಕಾಗೋಷ್ಠಿಯಲ್ಲಿ, ಚಿತ್ರತಂಡದ ಸದಸ್ಯರು ತಮ್ಮ ಅನುಭವಗಳನ್ನು ಹಂಚಿಕೊಂಡು ಹಳೆಯ ನೆನಪುಗಳನ್ನು ಮೆಲುಕು ಹಾಕಿದರು.
ಈ ಚಿತ್ರದ ಕುರಿತು ಮಾತನಾಡಿರುವ ನಿರ್ದೇಶಕ ಅನೂಪ್ ಭಂಡಾರಿ, ‘ಕಪಾಲಿ ಚಿತ್ರಮಂದಿರದಲ್ಲಿ ಚಿತ್ರ ನೋಡಿ ಬಂದ ಕೆಲವರು ನಮ್ಮ ನಿರ್ಮಾಪಕರಿಗೆ ‘ನಿಮಗೆ ಪೋಸ್ಟರ್ ಖರ್ಚು ಕೂಡ ಬರುವುದಿಲ್ಲ’ ಎಂದು ಹೆದರಿಸಿದ್ದರು. ಜನ ನಮ್ಮ ಕೈ ಹಿಡಿದರು. ‘ಬಾಹುಬಲಿ’, ‘ಭಜರಂಗಿ ಭಾಯಿಜಾನ್’, ‘ಶ್ರೀಮಂತುಡು’ ನಂತಹ ದೊಡ್ಡ ಚಿತ್ರಗಳ ಜೊತೆ ಬಿಡುಗಡೆಯಾದರೂ ನಮ್ಮ ಕನ್ನಡ ಚಿತ್ರ ಹಿಟ್ ಆಯಿತು. ‘ರಂಗಿತರಂಗ’ದ ಮೂಲಕ ಅಮೆರಿಕದಲ್ಲಿ ಕನ್ನಡಕ್ಕೆ ಒಂದು ಹೊಸ ಮಾರುಕಟ್ಟೆ ಸೃಷ್ಟಿಯಾಯಿತು. ಆ ವರ್ಷದ ಬಹುಪಾಲು ಪ್ರಶಸ್ತಿಗಳನ್ನು ಬಾಚಿಕೊಂಡ ‘ರಂಗಿತರಂಗ’ ಈ ಜುಲೈ.4ರಂದು ಮರು-ಬಿಡುಗಡೆಯಾಗುತ್ತಿದೆ. ಮತ್ತೆ ನಮ್ಮ ಚಿತ್ರವನ್ನು ಕನ್ನಡಿಗರು ಗೆಲ್ಲಿಸುತ್ತಾರೆ ಎಂಬ ಭರವಸೆ ಇದೆ’ ಎಂದರು.
‘ಪೊಲೀಸ್ ಸ್ಟೋರಿ’ ಮತ್ತು ‘ರಂಗಿತರಂಗ’ ಚಿತ್ರಗಳು ನನ್ನ ಎರಡು ಕಣ್ಣುಗಳು ಎಂದ ಹಿರಿಯ ನಟ ಸಾಯಿಕುಮಾರ್, ‘ಇಂತಹ ಕನ್ನಡ ಚಿತ್ರಗಳಲ್ಲಿ ನಟಿಸಿದ್ದು ಬಹಳ ಖುಷಿಯಾಗಿದೆ. ಈಗಲೂ ನಾನು ಹೋದ ಕಡೆ ‘ರಂಗಿತರಂಗ’ದ ನನ್ನ ಪಾತ್ರಕ್ಕೆ ಜನ ಮೆಚ್ಚುಗೆ ಸೂಚಿಸುತ್ತಾರೆ. ಚಿತ್ರ ಮರು-ಬಿಡುಗಡೆಯಲ್ಲೂ ದಾಖಲೆ ಬರೆಯಲಿ’ ಎಂದು ಶುಭ ಹಾರೈಸಿದರು.
ಅಣ್ಣನ ಮೊದಲ ಚಿತ್ರಕ್ಕೆ ನಾನೇ ಹೀರೋ ಎಂದಾಗ, ಅದ ಖುಷಿ ಅಷ್ಟಿಷ್ಟಲ್ಲ ಎಂದ ನಿರೂಪ್ ಭಂಡಾರಿ, ‘ನಾನು ಐಟಿ ಉದ್ಯೋಗಿಯಾಗಿದ್ದರೂ ಸಿನಿಮಾ ಮೇಲೆ ಹೆಚ್ಚು ಆಸಕ್ತಿ ಹೊಂದಿದ್ದೆ. ಅಣ್ಣನ ನಿರ್ದೇಶನದ ಕಿರುಚಿತ್ರಗಳಿಗೆ ನಾನೇ ಹೀರೋ. ಬೆಳ್ಳಿತೆರೆಯ ಮೇಲೆ ಅನೂಪ್ ನಿರ್ದೇಶನದ ಮೊದಲ ಚಿತ್ರಕ್ಕೂ ನಾನೇ ನಾಯಕ ಎಂದು ತಿಳಿದಾಗ ಆದ ಖುಷಿ ಅಷ್ಟಿಷ್ಟಲ್ಲ. ಮೊದಲ ದೃಶ್ಯದಲ್ಲೇ ನಾನು ಸಾಯಿಕುಮಾರ್ ಅವರೊಂದಿಗೆ ಫೈಟ್ ಮಾಡಬೇಕಿತ್ತು. ಆಗ ನನಗಾದ ಭಯ ಈಗಲೂ ಕಣ್ಣ ಮುಂದೆ ಇದೆ. ಅಮೆರಿಕಾಗೆ ಹೋದಾಗ ಅಲ್ಲಿ ನಮ್ಮ ಚಿತ್ರವನ್ನು ನೋಡಲು ಬಂದಿದ್ದ ಜನಸಾಗರ ಕಂಡು ಬಹಳ ಖುಷಿಪಟ್ಟಿದ್ದೆ’ ಎಂದು ನೆನಪಿಸಿಕೊಂಡರು.
ಈ ಸಂದರ್ಭದಲ್ಲಿ ನಾಯಕಿ ರಾಧಿಕಾ ನಾರಾಯಣ್, ಚಿತ್ರದಲ್ಲಿ ಪೊಲೀಸ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದ ಅರವಿಂದ ರಾವ್ ಮುಂತಾದವರು ಹಾಜರಿದ್ದರು.





