25 ವರ್ಷಗಳ ಹಿಂದೆ, ಅಂದರೆ 2000ನೇ ಇಸವಿಯಲ್ಲಿ ವಿಷ್ಣುವರ್ಧನ್ ಅಭಿನಯದ ‘ಯಜಮಾನ’ ಚಿತ್ರ ಬಿಡುಗಡೆಯಾಗಿ ಯಶಸ್ವಿಯಾಗಿತ್ತು. ಇದೀಗ ಹೊಸ ತಂತ್ರಜ್ಞಾನದಲ್ಲಿ ಚಿತ್ರವನ್ನು ಇದೇ ನವೆಂಬರ್.7ರಂದು ರಾಜ್ಯಾದ್ಯಂತ ಮರು ಬಿಡುಗಡೆ ಮಾಡಲಾಗುತ್ತಿದೆ. ಮುನಿಸ್ವಾಮಿ ಎಸ್.ಡಿ ಈ ಚಿತ್ರವನ್ನು ಮರು ಬಿಡುಗಡೆ ಮಾಡುತ್ತಿದ್ದಾರೆ.
ಈ ಚಿತ್ರದ ರಜತೋತ್ಸವವನ್ನು ಸಂಭ್ರಮಿಸಲು ಕಲಾವಿದರ ಸಂಘದಲ್ಲಿ ಸಮಾರಂಭ ಆಯೋಜಿಸಲಾಗಿತ್ತು. ಚಿತ್ರದ ನಿರ್ಮಾಪಕರು, ಕಲಾವಿದರು ಹಾಗೂ ತಂತ್ರಜ್ಞರು ಸಮಾರಂಭದಲ್ಲಿ ಭಾಗಿಯಾಗಿದ್ದರು. ‘ಯಜಮಾನ’ ಚಿತ್ರದ ಕುರಿತು ನೆನಪಿನ ಬುತ್ತಿ ಬಿಚ್ಚಿಟ್ಟರು.
ಇದನ್ನೂ ಓದಿ:-ಬಿಹಾರದಲ್ಲಿ ಹೆಣ್ಣು ಮಕ್ಕಳು ಸುರಕ್ಷಿತರಲ್ಲ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ
ಚಿತ್ರದ ಕುರಿತು ಮಾತನಾಡಿದ ನಿರ್ಮಾಪಕ ರೆಹಮಾನ್, ‘ಈ ಚಿತ್ರ ಆಗಲು ಪ್ರಮುಖ ಕಾರಣ ವಿಷ್ಣುವರ್ಧನ್ ಹಾಗೂ ಕೆ.ವಿ. ನಾಗೇಶ್ ಕುಮಾರ್. 130ಕ್ಕೂ ಹೆಚ್ಚು ಕಡೆ ಶತದಿನೋತ್ಸವ, 40ಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ 25 ವಾರ ಹಾಗೂ 4 ಕಡೆಗಳಲ್ಲಿ 1 ವರ್ಷ ಈ ಸಿನಿಮಾ ಓಡಿದೆ. 25 ವರ್ಷಗಳ ಹಿಂದೆಯೇ 35 ಕೋಟಿ ಕಲೆಕ್ಷನ್ ಮಾಡಿ ದಾಖಲೆ ಬರೆದ ಚಿತ್ರವಿದು. ಈ ಚಿತ್ರವನ್ನು ಈಗ ಮುನಿಸ್ವಾಮಿ ಅವರು ಮರು ಬಿಡುಗಡೆ ಮಾಡುತ್ತಿದ್ದಾರೆ. ಹಿಂದೆ ನೀವು ನೀಡಿದ ಗೆಲುವಿಗಿಂತ ದೊಡ್ದ ಗೆಲುವನ್ನು ಈಗ ನೀಡಿ’ ಎಂದರು.
‘ಯಜಮಾನ’ ಚಿತ್ರವನ್ನು DI ಬಳಸಿ 4K ಡಿಜೆಟಲ್ ಪ್ರೊಜೆಕ್ಷನ್ಗೆ ತಯಾರು ಮಾಡಲಾಗಿದೆ. ಇನ್ನು, ಮೋನೊ ಟ್ರ್ಯಾಕ್ ನಲ್ಲಿದ್ದ ಈ ಚಿತ್ರದ ಕಲಾವಿದರ ಧ್ವನಿಗಳನ್ನು ಸಹ 5.1 ಹಾಗೂ 7.1 ಡಿಜಿಟಲ್ ಸೌಂಡ್ಗೆ ವರ್ಗಾಯಿಸಲಾಗಿದೆ. ‘ಯಜಮಾನ’ ಚಿತ್ರದಲ್ಲಿ ವಿಷ್ಣುವರ್ಧನ್ ಜೊತೆಗೆ ಪ್ರೇಮ, ಶಶಿಕುಮಾರ್, ಅಭಿಜಿತ್, ರಮೇಶ್ ಭಟ್, ಟೆನ್ನಿಸ್ ಕೃಷ್ಣ ಮುಂತಾದವರು ನಟಿಸಿದ್ದಾರೆ. ಈ ಚಿತ್ರವನ್ನು ಮೆಹರುನ್ನಿಸಾ ರೆಹಮಾನ್ ನಿರ್ಮಿಸಿದ್ದು, ಆರ್ ಶೇಷಾದ್ರಿ – ರಾಧಾ ಭಾರತಿ ನಿರ್ದೇಶಿಸಿದ್ದಾರೆ. ಚಿತ್ರಕ್ಕೆ ರಾಜೇಶ್ ರಾಮನಾಥ್ ಸಂಗೀತವಿದೆ.





