ಚೆನ್ನೈ: ಏಕದಿನ ಕ್ರಿಕೆಟ್ ಸರಣಿಯ ಮೂರನೇ ಮತ್ತು ಕೊನೆಯ ಪಂದ್ಯದಲ್ಲಿ ಭಾರತ -ಆಸ್ಟ್ರೇಲಿಯಾ ತಂಡಗಳು ಗೆಲುವಿಗಾಗಿ ಹೋರಾಟ ನಡೆಸುತ್ತಿವೆ.
ಎಂ. ಚಿದಂಬರಂ ಕ್ರೀಡಾಂಗಣದಲ್ಲಿ ಬುಧವಾರ ನಡೆಯುತ್ತಿರುವ ಪಂದ್ಯದಲ್ಲಿ ಭಾರತ ವಿರುದ್ಧ ಟಾಸ್ ಗೆದ್ದ ಆಸ್ಟ್ರೇಲಿಯಾ, ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ.
ಮೂರನೇ ಮತ್ತು ಕೊನೆಯ ಪಂದ್ಯವು ಸರಣಿ ಗೆಲುವಿಗಾಗಿ ಉಭಯ ತಂಡಗಳಿಗೂ ನಿರ್ಣಾಯಕವಾಗಿದೆ. ಭಾರತ ತಂಡವು ಜಯಿಸಬೇಕಾದರೆ ಅಗ್ರಕ್ರಮಾಂಕದ ಬ್ಯಾಟರ್ಗಳು ಮಿಂಚುವುದು ಅವಶ್ಯಕವಾಗಿದೆ.
ಸರಣಿಯ ಮೊದಲ ಪಂದ್ಯದಲ್ಲಿ ಮಧ್ಯಮ ಕ್ರಮಾಂಕದಲ್ಲಿ ಆಡಿದ್ದ ಕೆ.ಎಲ್. ರಾಹುಲ್ ಮತ್ತು ರವೀಂದ್ರ ಜಡೇಜ ಅವರ ಬ್ಯಾಟಿಂಗ್ನಿಂದಾಗಿ ತಂಡವು ಜಯಿಸಿತ್ತು. ಆ ಪಂದ್ಯದಲ್ಲಿಯೂ ಮಿಚೆಲ್ ಸ್ಟಾರ್ಕ್ ಆತಿಥೇಯರ ಅಗ್ರಕ್ರಮಾಂಕದ ಬ್ಯಾಟರ್ಗಳನ್ನು ಕಟ್ಟಿಹಾಕಿದ್ದರು. ಮಾರ್ಷ್ ಅರ್ಧಶತಕ ಗಳಿಸಿದ್ದರು. ಎರಡನೇ ಪಂದ್ಯದಲ್ಲಿ ಸ್ಟಾರ್ಕ್ ಐದು ವಿಕೆಟ್ ಗೊಂಚಲನ್ನು ಬುಟ್ಟಿಗೆ ಹಾಕಿಕೊಂಡಿದ್ದರು. ಮಾರ್ಷ್ ಅಬ್ಬರದ ಬ್ಯಾಟಿಂಗ್ ಮಾಡಿದ್ದರು.
ತಂಡಗಳು
ಭಾರತ: ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ಕೆ.ಎಲ್. ರಾಹುಲ್ (ವಿಕೆಟ್ಕೀಪರ್), ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜ, ಕುಲದೀಪ್ ಯಾದವ್, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಅಕ್ಷರ್ ಪಟೇಲ್.
ಆಸ್ಟ್ರೇಲಿಯಾ: ಸ್ಟೀವನ್ ಸ್ಮಿತ್ (ನಾಯಕ), ಡೇವಿಡ್ ವಾರ್ನರ್, ಮಿಚೆಲ್ ಮಾರ್ಷ್, ಟ್ರಾವಿಸ್ ಹೆಡ್, ಮಾರ್ನಸ್ ಲಾಬುಷೇನ್, ಮಾರ್ಕಸ್ ಸ್ಟೋಯಿನಿಸ್, ಅಲೆಕ್ಸ್ ಕ್ಯಾರಿ, ಸೀನ್ ಅಬಾಟ್, ಆಷ್ಟನ್ ಆಗರ್, ಮಿಚೆಲ್ ಸ್ಟಾರ್ಕ್, ಆ್ಯಡಂ ಜಂಪಾ.