ಮೈಸೂರು: ಮೈಸೂರು ಜಿಲ್ಲಾ ಹಾಲು ಉತ್ಪಾದಕರ ಸಹಕಾರ ಸಂಘಗಳ ಒಕ್ಕೂಟದ ಅಧ್ಯಕ್ಷ ಸ್ಥಾನದ ಚುನಾವಣೆಗೆ ಆಗಸ್ಟ್.7ಕ್ಕೆ ಮುಹೂರ್ತ ನಿಗದಿಯಾಗಿದೆ.
ಚುನಾವಣೆ ನಿಗದಿಯಾಗಿರುವ ಹಿನ್ನೆಲೆಯಲ್ಲಿ ತೀವ್ರ ರಾಜಕೀಯ ಚಟುವಟಿಕೆಗಳು ನಡೆಯುತ್ತಿದ್ದು, ಜೆಡಿಎಸ್ ಹಾಗೂ ಕಾಂಗ್ರೆಸ್ ನಡುವೆ ಜಿದ್ದಾಜಿದ್ದಿ ನಡೆಯುತ್ತಿದೆ.
ಮೈಮುಲ್ ಅಧ್ಯಕ್ಷರಾಗಿದ್ದ ಪ್ರಸನ್ನ ರಾಜೀನಾಮೆ ನೀಡಿದ ಹಿನ್ನೆಲೆಯಲ್ಲಿ ಈ ಚುನಾವಣೆ ನಡೆಯುತ್ತಿದೆ. ಸಚಿವ ವೆಂಕಟೇಶ್ ಅವರು ಉದ್ದೇಶಪೂರ್ವಕವಾಗಿ ಕಿರುಕುಳ ನೀಡುತ್ತಿದ್ದಾರೆ. ಯಾವುದೇ ಕೆಲಸ ಮಾಡಲು ಬಿಡುತ್ತಿಲ್ಲ ಎಂದು ಪ್ರಸನ್ನ ಗಂಭೀರ ಆರೋಪ ಮಾಡಿದ್ದರು.
ಬಳಿಕ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಪ್ರಸನ್ನ ಗೆಲ್ಲುವ ಸಂದರ್ಭದಲ್ಲಿ ಬಿಜೆಪಿ ಸರಕಾರವಿತ್ತು. ಇದೀಗ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿರುವ ಹಿನ್ನೆಲೆಯಲ್ಲಿ ಈಗಿನ ರಾಜಕೀಯ ಪರಿಸ್ಥಿತಿ ಬದಲಾಗಿದೆ.
ಈಗ ಅವಕಾಶಗಳನ್ನು ಬಳಸಿಕೊಳ್ಳಲು ಕಾಂಗ್ರೆಸ್ ಎಲ್ಲಾ ಪ್ರಯತ್ನ ಮಾಡುತ್ತಿದ್ದು, ಜೆಡಿಎಸ್ ಕೂಡ ತಂತ್ರಗಾರಿಕೆ ರೂಪಿಸುವಲ್ಲಿ ನಿರತವಾಗಿದೆ.
ಇದೇ ಆಗಸ್ಟ್.7ರಂದು ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಯಲಿದ್ದು, ಯಾರು ಮೈಮುಲ್ನಲ್ಲಿ ಅಧಿಕಾರದ ಪಾರುಪತ್ಯ ಸಾಧಿಸಲಿದ್ದಾರೆ ಎಂಬುದೇ ತೀವ್ರ ಕುತೂಹಲ ಮೂಡಿಸಿದೆ.