ಮೈಸೂರು: ಪ್ರಯಾಗ್ರಾಜ್ನಲ್ಲಿ ನಡೆಯುತ್ತಿರುವ ಮಹಾಕುಂಭಮೇಳದ ಬಗ್ಗೆ ಕಾಂಗ್ರೆಸ್ ಟೀಕೆ ಮಾಡುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಕಿಡಿಕಾರಿದ್ದಾರೆ.
ಈ ಕುರಿತು ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು, ಮಹಾಕುಂಭಮೇಳವನ್ನು ಟೀಕೆ ಮಾಡುತ್ತಿರುವ ಕಾಂಗ್ರೆಸ್ ಪಕ್ಷದ ನಾಯಕರು ಅಯೋಗ್ಯರು. ಕುಂಭಮೇಳಕ್ಕೆ ಕೋಟ್ಯಾಂತರ ಜನರು ಹೋಗುತ್ತಿದ್ದಾರೆ. ಆದರೆ ಕಾಂಗ್ರೆಸ್ ನಾಯಕರು ಹಿಂದೂ ಭಾವನೆಗೆ ಧಕ್ಕೆ ತರುವ ರೀತಿಯಲ್ಲಿ ಹೇಳಿಕೆ ನೀಡುತ್ತಿದ್ದಾರೆ. ಇದು ಅಕ್ಷಮ್ಯ ಅಪರಾಧ ಎಂದು ಕಿಡಿಕಾರಿದರು. ಇನ್ನು ಕುಂಭಮೇಳದಲ್ಲಿ ಸಂಭವಿಸಿದ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರಿಗೆ ಶಾಂತಿ ಸಿಗಲಿ ಎಂದರು.
ಇನ್ನು ಬಿಜೆಪಿ ರಾಜ್ಯಾಧ್ಯಕ್ಷ ಬದಲಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಎಲ್ಲಾ ಹಂತಗಳಲ್ಲೂ ಚುನಾವಣೆ ನಡೆಯುತ್ತಿದೆ. ರಾಜ್ಯಾಧ್ಯಕ್ಷರ ಚುನಾವಣಾ ಪ್ರಕ್ರಿಯೆ ಸಾಗಿದೆ. ಮುಂದಿನ ದಿನಗಳಲ್ಲಿ ಏನಾಗುತ್ತೆ ನೋಡೋಣ ಎಂದರು.
ಇನ್ನು ಮುಂದುವರಿದು ಮಾತನಾಡಿದ ಅವರು, ಜಿಲ್ಲಾಧ್ಯಕ್ಷರ ನೇಮಕ ನನ್ನ ತೀರ್ಮಾನ ಅಲ್ಲ. ಬಿಜೆಪಿ ಸಂಘಟನೆ ಪರ್ವ 4-5 ತಿಂಗಳಿನಿದ ನಡೆದಿದೆ. ನಾನು ಜಿಲ್ಲಾಧ್ಯಕ್ಷರನ್ನು ಆಯ್ಕೆ ಮಾಡಲು ಆಗಲ್ಲ. ಸಂಸದ ಡಾ.ಕೆ.ಸುಧಾಕರ್ಗೆ ಮಾಹಿತಿ ಹಾಗೂ ಅನುಭವದ ಕೊರತೆ ಇದೆ. ಬಿಎಸ್ವೈ ಮಗನಾಗಿ ಅನೇಕ ಏಳು ಬೀಳುಗಳನ್ನು ನೋಡಿದ್ದೇನೆ. ಯಡಿಯೂರಪ್ಪ ಅವರ ಮಗನಾಗಿರಲು ನನಗೆ ತುಂಬಾ ಹೆಮ್ಮೆಯಿದೆ. ಸಮಯದ ಅಭಾವದಿಂದ ನಾನು ಸುಧಾಕರ್ ಅವರನ್ನು ಭೇಟಿ ಆಗಿರಲಿಲ್ಲ. ಆದರೆ ಚುನಾವಣೆ ಪ್ರಕ್ರಿಯೆ ನಡೆದ ಬಳಿಕ ಸುಧಾಕರ್ರನ್ನು ಭೇಟಿಯಾಗಿ, ಅವರ ಸಲಹೆ ಸ್ವೀಕರಿಸುತ್ತೇನೆ ಎಂದರು.