ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಭವನ ಕಾಮಗಾರಿ ಪೂರ್ಣಗೊಳ್ಳದ ಹಿನ್ನೆಲೆಯಲ್ಲಿ ಆಕ್ರೋಶಗೊಂಡ ದಲಿತ ಸಂಘರ್ಷ ಸಮಿತಿ ಮುಖಂಡರು ಇಂದು ಸಚಿವ ಎಚ್.ಸಿ.ಮಹದೇವಪ್ಪ ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ ಘಟನೆ ನಡೆದಿದೆ.
ಅಂಬೇಡ್ಕರ್ ಭವನ ಕಾಮಗಾರಿ ಪೂರ್ಣಗೊಳಿಸುವಂತೆ ಸರ್ಕಾರಕ್ಕೆ ದಸಂಸ ಹಲವಾರು ಬಾರಿ ಮನವಿ ಮಾಡಿದೆ. ಆದರೂ ನಿರ್ಲಕ್ಷ್ಯ ತೋರಿರುವ ರಾಜ್ಯ ಸರ್ಕಾರ ಕಾಮಗಾರಿಯನ್ನು ಮುಗಿಸದೇ ಬೇಜಾವಾಬ್ದಾರಿ ಪ್ರದರ್ಶನ ಮಾಡುತ್ತಿದೆ.
ಇದರಿಂದ ಆಕ್ರೋಶಗೊಂಡು ರೊಚ್ಚಿಗೆದ್ದ ದಲಿತ ಸಂಘರ್ಷ ಸಮಿತಿ ಮುಖಂಡರು ಇಂದು ಮೈಸೂರಿನ ವಿಜಯನಗರ 2ನೇ ಹಂತದಲ್ಲಿರುವ ಸಚಿವ ಎಚ್.ಸಿ.ಮಹದೇವಪ್ಪ ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನಿಸಿದರು.
ಕೂಡಲೇ ಸ್ಥಳಕ್ಕಾಗಮಿಸಿದ ಪೊಲೀಸರು, ಸುಮಾರು 50ಕ್ಕೂ ಹೆಚ್ಚು ಮಂದಿ ದಸಂಸ ಕಾರ್ಯಕರ್ತರನ್ನು ಬಂಧಿಸಿದರು. ದಸಂಸ ಮುಖಂಡ ಚೋರನಹಳ್ಳಿ ಶಿವಣ್ಣ, ಬೆಟ್ಟಯ್ಯ ಕೋಟೆ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ನೂರಾರು ಕಾರ್ಯಕರ್ತರು ಭಾಗಿಯಾಗಿದ್ದರು.





