ಮೈಸೂರು : ಶಾಲಾ ಶಿಕ್ಷಣ ಇಲಾಖೆಯ ಜಿಪಿಎಸ್ಟಿಆರ್ ಹಾಗೂ ಎಚ್ಎಸ್ಟಿಆರ್ ಶಿಕ್ಷಕರ ನೇಮಕಾತಿಯಲ್ಲಿ ಕನ್ನಡ ಭಾಷಾ ಶಿಕ್ಷಕರ ಹುದ್ದೆಗಳನ್ನು ಪ್ರತ್ಯೇಕವಾಗಿ ನೇಮಕಾತಿ ನಡೆಸುವಂತೆ ಆದೇಶ ಹೊರಡಿಸಿರುವುದನ್ನು ಮೈಸೂರು ವಿ.ವಿ ಸಂಶೋಧಕರ ಸಂಘ ಸ್ವಾಗತಿಸಿದೆ.
ಕನ್ನಡ ಭಾಷಾ ಶಿಕ್ಷಕರ ಹುದ್ದೆಗಳನ್ನು ಪ್ರತ್ಯೇಕವಾಗಿ ನೇಮಕಾತಿ ನಡೆಸಬೇಕು ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪ್ರೊ.ಪುರುಷೋತ್ತಮ ಬಿಳಿಮಲೆ ಅವರಿಗೆ ಈ ಹಿಂದೆ ಸಲ್ಲಿಸಿದ್ದ ಮನವಿಗೆ ಸ್ಪಂದಿಸಿರುವ ಅವರು, ಈ ಸಂಬಂಧ ಸರ್ಕಾರದೊಂದಿಗೆ ಮಾತನಾಡಿ ಕೈಗೊಂಡ ಕ್ರಮಗಳ ಕುರಿತು ಸಂಶೋಧಕರ ಸಂಘದ ಅಧ್ಯಕ್ಷ ವರಹಳ್ಳಿ ಆನಂದ್ ಅವರ ವಿಳಾಸಕ್ಕೆ ಪ್ರತಿಕ್ರಿಯೆ ಪತ್ರ ಕಳುಹಿಸಿದ್ದಾರೆ.
ಇತ್ತೀಚೆಗೆ ಶಾಲಾ ಶಿಕ್ಷಣ ಇಲಾಖೆಯ ಜಿಪಿಎಸ್ಟಿಆರ್ ಹಾಗೂ ಎಚ್ಎಸ್ಟಿಆರ್ ನೇಮಕಾತಿಯಲ್ಲಿ ಕನ್ನಡ ಭಾಷಾ ಶಿಕ್ಷಕರ ಹುದ್ದೆಗಳಿಗೆ ಪ್ರತ್ಯೇಕವಾಗಿ ನೇಮಕಾತಿ ಪ್ರಕ್ರಿಯೆ ನಡೆಸಲು ಅವಕಾಶ ಕಲ್ಪಿಸಿರುವ ಹಿಂದೆ ಪ್ರೊ.ಪುರುಷೋತ್ತಮ ಬಿಳಿಮಲೆ ಅವರ ಒತ್ತಾಸೆ ಹಾಗೂ ನಿರಂತರ ಪ್ರಯತ್ನ ಮಹತ್ವದ ಪಾತ್ರ ವಹಿಸಿದೆ ಎಂದು ಸಂಘದ ಅಧ್ಯಕ್ಷ ವರಹಳ್ಳಿ ಆನಂದ ತಿಳಿಸಿದ್ದಾರೆ.
ಕಳೆದ ನಾಲ್ಕು ಶಿಕ್ಷಕರ ನೇಮಕಾತಿಗಳಲ್ಲಿಯೂ ಕನ್ನಡ ಭಾಷಾ ಶಿಕ್ಷಕರ ಹುದ್ದೆಗಳನ್ನು ಪ್ರತ್ಯೇಕವಾಗಿ ಕರೆಯದೆ ಕಡೆಗಣಿಸಲಾಗಿತ್ತು. ಇದೀಗ ಕನ್ನಡ ಭಾಷಾ ಶಿಕ್ಷಕರ ಹುದ್ದೆಗಳನ್ನು ಪ್ರತ್ಯೇಕವಾಗಿ ನೇಮಕಾತಿ ಪ್ರಕ್ರಿಯೆಗೆ ಒಳಪಡಿಸಿರುವುದು ಕನ್ನಡ ಭಾಷೆ ಹಾಗೂ ಕನ್ನಡನಾಡಿಗೆ ದೊರೆತ ಗೌರವವಾಗಿದೆ ಎಂದು ಸಂಘ ಅಭಿಪ್ರಾಯಪಟ್ಟಿದೆ.
ಕನ್ನಡ ಸೇರಿದಂತೆ ವಿವಿಧ ವಿಷಯಗಳಿಗೆ ಸಂಬಂಧಿಸಿದಂತೆ ಒಟ್ಟು ೧೫ ಸಾವಿರ ಶಿಕ್ಷಕರ ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆ ನಡೆಯುತ್ತಿರುವುದು ಎಲ್ಲರಿಗೂ ತಿಳಿದ ಸಂಗತಿಯಾಗಿದೆ. ನೇಮಕಾತಿ ಪರೀಕ್ಷೆಗಳು ಯಾವುದೇ ರೀತಿಯ ಭ್ರಷ್ಟಾಚಾರಕ್ಕೆ ಅವಕಾಶವಿಲ್ಲದಂತೆ ಸಂಪೂರ್ಣ ಪಾರದರ್ಶಕವಾಗಿ ನಡೆಯಬೇಕು. ಅರ್ಹ ಅಭ್ಯರ್ಥಿಗಳಿಗೆ ನ್ಯಾಯ ದೊರೆಯುವ ರೀತಿಯಲ್ಲಿ ನೇಮಕಾತಿ ಪ್ರಕ್ರಿಯೆ ನಡೆಯಬೇಕು ಎಂಬುದು ಸಂಘದ ಆಗ್ರಹವಾಗಿದೆ.




