ಮೈಸೂರು: ಜುಲೈ.19ರ ಸಮಾವೇಶವು ಸಿದ್ದರಾಮಯ್ಯ ಶಕ್ತಿ ಪ್ರದರ್ಶನದ ಸಮಾವೇಶ ಅಲ್ಲವೇ ಅಲ್ಲ ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ.ಮಹದೇವಪ್ಪ ಹೇಳಿದ್ದಾರೆ.
ಈ ಕುರಿತು ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಜುಲೈ.19ರ ಸಮಾವೇಶ ಸಿದ್ದರಾಮಯ್ಯ ಶಕ್ತಿ ಪ್ರದರ್ಶನದ ಸಮಾವೇಶ ಅಲ್ಲ. ಶಕ್ತಿ ಪ್ರದರ್ಶಿಸುವ ಯಾವ ಅಗತ್ಯವೂ ನಮಗೆ ಇಲ್ಲ. ಕಳೆದ 2023ರಲ್ಲೇ ಜನ ನಮಗೆ ಶಕ್ತಿ ಕೊಟ್ಟಿದ್ದಾರೆ. ಮತ್ತೆ ಮತ್ತೆ ಯಾಕೆ ಶಕ್ತಿ ಪ್ರದರ್ಶನ ಮಾಡಬೇಕು. ಇದು ಶಕ್ತಿ ಪ್ರದರ್ಶಿಸುವ ಕಾಲ ಅಲ್ಲ. ಇದು ಸಾಧನೆ ಹೇಳುವ ಕಾಲ. ನಾವು ಏನು ಅಭಿವೃದ್ಧಿ ಮಾಡಿದ್ದೇವೆ ಹಾಗೂ ಮುಂದಿನ ದಿನಗಳಲ್ಲಿ ಮಾಡುತ್ತೇವೆ ಎಂಬುದನ್ನು ತೋರಿಸಲು ಸಮಾವೇಶ ಮಾಡುತ್ತಿದ್ದೇವೆ ಎಂದು ಹೇಳಿದರು.
ಇನ್ನು ಮುಂದುವರಿದು ಮಾತನಾಡಿದ ಅವರು, ಸಿದ್ದರಾಮಯ್ಯ ಕಾಲದಲ್ಲಿ ಆದ ಅಭಿವೃದ್ಧಿ ಯಾವ ಕಾಲದಲ್ಲೂ ಆಗಿಲ್ಲ. ಯಾವ ಸರ್ಕಾರವೂ ಮಾಡದ ಕೆಲಸವನ್ನು ಮೈಸೂರಿಗೆ ನಮ್ಮ ಸರ್ಕಾರ ಮಾಡಿದೆ. ಕೇವಲ ಮೈಸೂರು ನಗರಕ್ಕಾಗಿ 2569 ಕೋಟಿ ಕೊಟ್ಟಿದ್ದೇವೆ. ಇದು ಸಾಧನೆ ಅಲ್ವಾ ಎಂದು ಪ್ರಶ್ನೆ ಮಾಡಿದ ಅವರು, ಗ್ಯಾರಂಟಿಯಿಂದ ಅನುದಾನ ಇಲ್ಲ ಎಂಬುದು ಸುಳ್ಳು. ಗ್ಯಾರಂಟಿ ಜೊತೆಯೇ ನಾವು ಅಭಿವೃದ್ಧಿ ಮಾಡುತ್ತಿದ್ದೇವೆ. ಈ ಸಾಧನ ಸಮಾವೇಶಕ್ಕೆ ವಿರೋಧ ಪಕ್ಷದ ಶಾಸಕರು ಹಾಗೂ ಸಂಸದರಿಗೆ ಆಹ್ವಾನ ಕೊಟ್ಟಿದ್ದೇವೆ. ಶಿಷ್ಟಾಚಾರ ಪಾಲನೆ ಮಾಡಿದ್ದೇವೆ. ಬರುವುದು ಬಿಡುವುದು ಅವರಿಗೆ ಬಿಟ್ಟಿದ್ದು ಎಂದರು.





