ಮೈಸೂರು : ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ಸರ್ಕಾರಿ ಜಿಲ್ಲಾಸ್ಪತ್ರೆಗೆ ಭೇಟಿ ನೀಡಿ ಅಲ್ಲಿರುವ ಸೌಲಭ್ಯಗಳ ಬಗ್ಗೆ ಪರಿಶೀಲನೆ ನಡೆಸಿದರು.
ಆಸ್ಪತ್ರೆಯ ಮೂಲಸೌಕರ್ಯಗಳನ್ನು ಅಭಿವೃದ್ಧಿಗೊಳಿಸಿ, ಆಗಸ್ಟ್ ನಿಂದ ಪೂರ್ಣಪ್ರಮಾಣದ ಸೇವೆಗಳನ್ನು ಇನ್ನಷ್ಟು ಹೆಚ್ಚಿಸುವಂತೆ ಹಿರಿಯ ವೈದ್ಯರು ಹಾಗೂ ಅಧಿಕಾರಿಗಳಿಗೆ ಸೂಚಿಸಿದರು. ಮತ್ತಷ್ಟು ಮೂಲಸೌಕರ್ಯಗಳ ವೃದ್ಧಿಗೆ ಶೀಘ್ರವೇ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದರು.
ಆನಂತರ, ಕೆ.ಆರ್. ಆಸ್ಪತ್ರೆಗೂ ಭೇಟಿ ನೀಡಿದ ಅವರು, ಟೆಲಿ ಐಸಿಯು ಸೇವೆಯನ್ನು ತಾಲೂಕುಗಳಿಗೂ ವಿಸ್ತರಣೆ ಮಾಡಬೇಕೆಂದು ಸೂಚನೆ ನೀಡಿದರು.
ನಗರದ ಜಿಲ್ಲಾಸ್ಪತ್ರೆ ಸೇರಿದಂತೆ ಸ್ಥಳೀಯ ಆಸ್ಪತ್ರೆಗಳಿಗೂ ಭೇಟಿ ನೀಡಿ ಅಲ್ಲಿರುವಂತಹ ರೋಗಿಗಳ ಯೋಗಕ್ಷೇಮ ವಿಚಾರಿಸಿದರು. ನಂತರ ಆರೋಗ್ಯ ಸಿಬ್ಬಂದಿಗಳ ಜೊತೆ ಚರ್ಚಿಸಿ ತೆಗೆದುಕೊಳ್ಳಬೇಕಾದ ಮುಂಜಾಗೃತಾ ಕ್ರಮ ಅನುಸರಿಸುವಂತೆ ಸೂಚಿಸಿದರು.
ಡಯಾಲಿಸಿಸ್ ಕೇಂದ್ರ ಹಾಗೂ ವಿವಿಧ ವಾರ್ಡ್ಗಳಿಗೆ ತೆರಳಿ ರೋಗಿಗಳನ್ನು ಭೇಟಿ ಮಾಡಿ, ಕುಂದು ಕೊರತೆ ಆಲಿಸಿದರು.
ಆನಂತರ, ಡಿಎಚ್ಒ ಡಾ ಪಿ. ಸಿ. ಕುಮಾರಸ್ವಾಮಿ ಅವರಿಂದ ಸಿಬ್ಬಂದಿಗಳ ಕೊರತೆಯ ಬಗ್ಗೆ ಮಾಹಿತಿ ಪಡೆದರು.





