ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಉದ್ಘಾಟನೆಗೆ ಬೂಕರ್ ಪ್ರಶಸ್ತಿ ವಿಜೇತ ಲೇಖಕಿ ಬಾನು ಮುಷ್ತಾಕ್ ಆಯ್ಕೆಗೆ ತೀವ್ರ ವಿರೋಧ ವ್ಯಕ್ತವಾಗಿದೆ.
ಬಾನು ಮುಷ್ತಾಕ್ ಆಯ್ಕೆ ಮಾಡಿರುವುದನ್ನು ಖಂಡಿಸಿ ಮೈಸೂರಿನಲ್ಲಿ ಬಿಜೆಪಿ ಇಂದು ಚಾಮುಂಡಿಚಲೋ ಹಮ್ಮಿಕೊಂಡಿತ್ತು. ಚಾಮುಂಡಿ ಚಲೋ ಪ್ರತಿಭಟನೆ ಆರಂಭವಾಗುತ್ತಿದ್ದಂತೆ ಪೊಲೀಸರು ಬಿಜೆಪಿ ಶಾಸಕ ಶ್ರೀವತ್ಸ ಹಾಗೂ ಹಲವು ಹೋರಾಟಗಾರರನ್ನು ವಶಕ್ಕೆ ಪಡೆದಿದ್ದಾರೆ.
ಮತ್ತೊಂದೆಡೆ ಚಾಮುಂಡಿ ಚಲೋ ಹೋರಾಟದಲ್ಲಿ ಭಾಗಿಯಾಗಲು ಆಗಮಿಸಿದ್ದ ಹಿಂದೂ ಜಾಗರಣಾ ವೇದಿಕೆ ಸದಸ್ಯರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮಾಜಿ ಶಾಸಕ ಎಲ್.ನಾಗೇಂದ್ರ, ಮಾಜಿ ಮೇಯರ್ ಸಂದೇಶ ಸ್ವಾಮಿ ನೇತೃತ್ವದಲ್ಲಿ ಹಿಂದೂ ಜಾಗರಣಾ ವೇದಿಕೆ ಸದಸ್ಯರು ಚಾಮುಂಡಿ ಬೆಟ್ಟದತ್ತ ತೆರಳಿದ್ದರು. ಈ ವೇಳೆ ಪೊಲೀರು ಬೆಟ್ಟಕ್ಕೆ ತೆರಳಲು ಬಿಟ್ಟಿಲ್ಲ.
ಇದರಿಂದ ತೀವ್ರ ಆಕ್ರೋಶಗೊಂಡ ಹೋರಾಟಗಾರರು ಪೊಲೀಸರ ಜೊತೆ ವಾಗ್ವಾದಕ್ಕೆ ಇಳಿದಿದ್ದಾರೆ. ಈ ವೇಳೆ ಪೊಲೀಸರ ನಡೆಗೆ ಎಲ್.ನಾಗೇಂದ್ರ ಕಿಡಿಕಾರಿದ್ದಾರೆ. ಪೊಲೀಸರನ್ನು ಬಳಸಿ ಹೋರಾಟ ಹತ್ತಿಕ್ಕಲಾಗುತ್ತಿದೆ ಎಂದು ವಾಗ್ದಾಳಿ ನಡೆಸಿದರು.
ಈ ವೇಳೆ ಪೊಲೀಸರು ನಾಗೇಂದ್ರ, ಬಿಜೆಪಿ ಮುಖಂಡ ಶುಶ್ರುತ್ ಗೌಡ ಸೇರಿದಂತೆ ಹಿಂದೂ ಜಾಗರಣಾ ವೇದಿಕೆ ಸದಸ್ಯರನ್ನು ವಶಕ್ಕೆ ಪಡೆದಿದ್ದಾರೆ.





