ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಉದ್ಘಾಟನೆಗೆ ಬಾನು ಮುಷ್ತಾಕ್ ಅವರನ್ನು ಆಹ್ವಾನಿಸಿರುವುದನ್ನು ಖಂಡಿಸಿ ಹಿಂದೂ ಜಾಗರಣಾ ವೇದಿಕೆ ನಾಳೆ ಚಾಮುಂಡಿಬೆಟ್ಟಕ್ಕೆ ಪಾದಯಾತ್ರೆ ನಡೆಸಲು ಮುಂದಾಗಿದೆ.
ಈ ಬಗ್ಗೆ ಪತ್ರಿಕಾಗೋಷ್ಠಿ ನಡೆಸಿ ಮಾತನಾಡದ ಹಿಂದೂ ಜಾಗರಣಾ ವೇದಿಕೆ ಮುಖಂಡರು, ಚಾಮುಂಡಿಬೆಟ್ಟಕ್ಕೆ ಪಾದಯಾತ್ರೆ ಮಾಡುವುದು ಭಕ್ತರ ಹಕ್ಕು. ಅದನ್ನು ತಡೆಯುವುದು ಸರಿಯಲ್ಲ.
ಇನ್ನು ಪೊಲೀಸ್ ಇಲಾಖೆ ಪಾದಯಾತ್ರೆಗೆ ಅನುಮತಿ ನಿರಾಕರಿಸಿರುವ ಬಗ್ಗೆ ಮಾತನಾಡಿದ ಅವರು, ಪೊಲೀಸರ ಆಯುಕ್ತರು ಅರಣ್ಯ ಇಲಾಖೆಯ ವ್ಯಾಪ್ತಿಯಲ್ಲಿ ಪಾದಯಾತ್ರೆ ನಡೆಸಲು ಅವಕಾಶವಿಲ್ಲ ಎಂದು ತಿಳಿಸಿದ್ದಾರೆ. ಚಾಮುಂಡಿಬೆಟ್ಟವು ಪ್ರೇಕ್ಷಣೀಯ ಸ್ಥಳವಾಗಿದ್ದು, ಅಲ್ಲಿ ಪ್ರತಿದಿನ ಸಾವಿರಾರು ಭಕ್ತರು ಮತ್ತು ಪ್ರವಾಸಿಗರು ಭೇಟಿ ನೀಡುತ್ತಾರೆ. ಆದ್ದರಿಂದ ಈ ಕಾರಣ ಸಮಂಜಸವಲ್ಲ ಎಂದರು.
ನಾಳೆ ಬೆಳಿಗ್ಗೆ 7.30ಕ್ಕೆ ಕುರುಬರಹಳ್ಳಿ ವೃತ್ತದಿಂದ ಪಾದಯಾತ್ರೆ ಪ್ರಾರಂಭಿಸುವುದಾಗಿ ಘೋಷಣೆ ಮಾಡಲಾಗಿದ್ದು, ನಾಡಿನ ಎಲ್ಲಾ ಚಾಮುಂಡಿ ಭಕ್ತರು ಈ ಪಾದಯಾತ್ರೆಯಲ್ಲಿ ಭಾಗವಹಿಸಬೇಕು ಎಂದು ಮನವಿ ಮಾಡಿದರು.





