ಮೈಸೂರು : ಮೈಸೂರು ನಗರದಲ್ಲಿ ಬೆಳ್ಳಂಬೆಳಿಗ್ಗೆ ಜೆಸಿಬಿ ಘರ್ಜನೆ ಕೇಳಿ ಬಂದಿದ್ದು, ಸರ್ಕಾರಿ ಭೂಮಿಯನ್ನು ಒತ್ತುವರಿ ಮಾಡಿಕೊಂಡಿದ್ದ ಜಾಗವನ್ನು ಸರ್ಕಾರದ ವಶಕ್ಕೆ ಪಡೆಯಲಾಗಿದೆ. ಮೈಸೂರು ತಾಲೂಕು ತಹಶೀಲ್ದಾರ್ ಮಹೇಶ್ ಕುಮಾರ್ ಅವರ ನೇತೃತ್ವದಲ್ಲಿ ನಡೆದ ಈ ಕಾರ್ಯಾಚರಣೆಯಲ್ಲಿ 38 ಗುಂಟೆ ಭೂಮಿಯನ್ನು ತೆರವುಗೊಳಿಸಿ ಸರ್ಕಾರದ ವಶಕ್ಕೆ ಪಡೆಯಲಾಗಿದೆ.
ಈ ಭೂಮಿ ಮೈಸೂರು ಗ್ರಾಮದ ಸರ್ವೇ ನಂ. 87ರಲ್ಲಿ ಇದ್ದು, 0.38 ಎಕರೆ ಪ್ರದೇಶವನ್ನು ಒಳಗೊಂಡಿದೆ. 2010ರಲ್ಲಿ ಜಿಲ್ಲಾಧಿಕಾರಿಗಳ ಆದೇಶದಂತೆ (ಜ್ಞಾಪನ ಸಂಖ್ಯೆ: LND(1)CR: 280/2009-10, ದಿನಾಂಕ: 30.08.2010) ಇದನ್ನು ಹಿಂದುಳಿದ ವರ್ಗಗಳ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಗೆ ಮೆಟ್ರಿಕ್ ನಂತರದ ಬಾಲಕಿಯರ/ಬಾಲಕರ ವಿದ್ಯಾರ್ಥಿ ನಿಲಯ ನಿರ್ಮಾಣಕ್ಕಾಗಿ ಕಾಯ್ದಿರಿಸಲಾಗಿತ್ತು. ಆದರೆ ಕೆಲವು ಖಾಸಗಿ ವ್ಯಕ್ತಿಗಳು ಇದನ್ನು ಅನಧಿಕೃತವಾಗಿ ಖಾಸಗಿ ವಾಹನಗಳ ಪಾರ್ಕಿಂಗ್ ಮತ್ತು ಟೀ ಅಂಗಡಿಗಾಗಿ ಬಳಸಿಕೊಂಡಿದ್ದರು. ಪ್ರತಿದಿನ ಪಾರ್ಕಿಂಗ್ ಶುಲ್ಕ ವಸೂಲಿ ಮಾಡಿ ಹಣ ಗಳಿಸುತ್ತಿದ್ದರು ಎಂದು ಮೂಲಗಳು ತಿಳಿಸಿವೆ.
ಹಿಂದುಳಿದ ವರ್ಗಗಳ ಮತ್ತು ಅಲ್ಪಸಂಖ್ಯಾತರ ಇಲಾಖೆಯ ಜಿಲ್ಲಾ ಅಧಿಕಾರಿ ಅವರು ಒತ್ತುವರಿ ತೆರವುಗೊಳಿಸುವಂತೆ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದ್ದರು. ಜಿಲ್ಲಾಧಿಕಾರಿಗಳ ನಿರ್ದೇಶನದಂತೆ ಫೆಬ್ರವರಿ 6 ರಂದು ತಹಶೀಲ್ದಾರ್ ಮಹೇಶ್ ಕುಮಾರ್ ಹಾಗೂ ಅವರ ತಂಡ ಸ್ಥಳಕ್ಕೆ ಭೇಟಿ ನೀಡಿ ಜೆಸಿಬಿ ಸಹಾಯದಿಂದ ಒತ್ತುವರಿ ತೆರವು ಮಾಡಿದರು. ಕೋಟ್ಯಂತರ ರೂಪಾಯಿ ಬೆಲೆ ಬಾಳುವ ಈ ಭೂಮಿಯನ್ನು ಸರ್ಕಾರದ ವಶಕ್ಕೆ ಪಡೆಯುವ ಮೂಲಕ ವಿದ್ಯಾರ್ಥಿ ನಿಲಯ ನಿರ್ಮಾಣಕ್ಕೆ ಮಾರ್ಗ ಸುಗಮಗೊಳಿಸಲಾಗಿದೆ.
ಕಾರ್ಯಾಚರಣೆಯ ಸಂದರ್ಭದಲ್ಲಿ ನಗರ ಮಾಪನ ಇಲಾಖೆಯ ಸಹಾಯಕ ನಿರ್ದೇಶಕ ಚಿಕ್ಕಣ್ಣ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ರಾಘವೇಂದ್ರ, ಅರಕ್ಷಕ ನಿರೀಕ್ಷಕ ಯೋಗಾಂಜನಪ್ಪ, ರವಿಶಂಕರ್ ಮತ್ತು ರೋಹಿತ್ ಅವರು ಹಾಜರಿದ್ದರು.





