ಮೈಸೂರು: ಕೂಡಲಸಂಗಮ ಲಿಂಗಾಯತ ಪಂಚಮಸಾಲಿ ಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ ಅವರು ಬಿಜೆಪಿ ಪಕ್ಷದ ಮೂಲಕ ಸಿಎಂ ಸಿದ್ದರಾಮಯ್ಯ ವ್ಯಕ್ತಿತ್ವಕ್ಕೆ ಮಸಿ ಬಳಿಯುವ ಸುಪಾರಿ ತೆಗೆದುಕೊಂಡಿದ್ದಾರೆ ಎಂದು ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಜಾಗೃತ ವೇದಿಕೆಯ ಅಧ್ಯಕ್ಷ ಕೆ.ಎಸ್.ಶಿವರಾಮು ಆರೋಪಿಸಿದ್ದಾರೆ.
ನಗರದ ಜಲದರ್ಶಿನಿ ಅತಿಥಿ ಗೃಹದಲ್ಲಿ ಲಿಂಗಾಯತ ಪಂಚಮಸಾಲಿ ಸಮಾಜವನ್ನು ಹಿಂದುಳಿದ ವರ್ಗ 2ಎಗೆ ಸೇರಿಸದಂತೆ ಆಗ್ರಹಿಸಿ ಹಾಗೂ ಸಿಎಂ ಸಿದ್ದರಾಮಯ್ಯ ಅವರನ್ನು ಅವಹೇಳನ ಮಾಡಿರುವ ಬಸವಜಯ ಮೃತ್ಯುಂಜಯ ಸ್ವಾಮೀಜಿ ಹೇಳಿಕೆ ಖಂಡಿಸಿ, ರಾಜ್ಯ ಹಿಂದುಳಿದ ವರ್ಗಗಳ ಜಾಗೃತ ವೇದಿಕೆಯಿಂದ ಇಂದು(ಡಿ.14) ಆಯೋಜಿಸಿದ್ದ ದುಂಡು ಮೇಜಿನ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಬಸವಜಯ ಸ್ವಾಮೀಜಿ ಅವರು ಕೆಲವು ವರ್ಷಗಳ ಹಿಂದೆಯಷ್ಟೇ ಸಿಎಂ ಸಿದ್ದರಾಮಯ್ಯ ಅವರೊಂದಿಗೆ ಅನ್ಯೋನ್ಯವಾಗಿದ್ದರು. ಇದೀಗ ಈಗ ಸಿದ್ದರಾಮಯ್ಯ ವಿರುದ್ಧ ದ್ವೇಷಕಾರುತ್ತಿದ್ದಾರೆ. ಮುಡಾ ಮತ್ತು ವಾಲ್ಮೀಕಿ ಅಭಿವೃದ್ಧಿ ಹಗರಣದಲ್ಲಿ ಸಿದ್ದರಾಮಯ್ಯ ತಪ್ಪಿಲ್ಲದಿದ್ದರೂ ಸಹ ಬಿಜೆಪಿಯವರು ಈ ಎರಡು ಹಗರಣಗಳನ್ನು ಮುಂದಿಟ್ಟುಕೊಂಡು ಸಿಎಂ ಹುದ್ದೆಯಿಂದ ಕೆಳಗಿಳಿಸಲು ಪ್ರಯತ್ನಿಸಿದರು. ಆದರೆ ಇದರಿಂದ ಪ್ರಯೋಜನ ಆಗದಿದ್ದಕ್ಕೆ ಈ ಹೋರಾಟದ ಮೂಲಕ ಸ್ವಾಮೀಜಿಯನ್ನು ಎತ್ತಿ ಕಟ್ಟುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.
ಸಿಎಂ ಸಿದ್ದರಾಮಯ್ಯ ವಿರುದ್ಧ ಒಂದು ಸಮುದಾಯವನ್ನು ಎತ್ತಿ ಕಟ್ಟುವುದು ಸ್ವಾಮೀಜಿ ಅವರ ಷಡ್ಯಂತ್ರವಾಗಿದ್ದು, ಸಂವಿಧಾನ ಹಾಗೂ ಪ್ರಜಾಪ್ರಭುತ್ವ ವಿರೋಧಿ ನಡೆಯನ್ನು ಅನುಸರಿಸುತ್ತಿದ್ದಾರೆ. ಜಾತಿ-ಜಾತಿಗಳ ನಡುವೆ ವಿಷ ಬೀಜ ಬಿತ್ತುವ ಕೆಲಸದ ಮೂಲಕ ಅಪನಂಬಿಕೆ ಸೃಷ್ಠಿಸುತ್ತಿದ್ದಾರೆ. ಅಲ್ಲದೇ ಸ್ವಾಮೀಜಿ ಅವರು ರಾಜ್ಯದಲ್ಲಿ ಸೌಹಾರ್ದ ಹಾಳಾಗಲೆಂದು ಕುಮ್ಮಕ್ಕು ನೀಡುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.
ಇನ್ನು ಲಿಂಗಾಯತ ಪಂಚಮಸಾಲಿ ಸಮಾಜ ಎಲ್ಲ ರೀತಿಯಲ್ಲೂ ಮುಂದುವರೆದಿದೆ. ಅವರನ್ನು ಹಿಂದುಳಿದ ವರ್ಗ 2ಎಗೆ ಸೇರಿಸಲು ನಮ್ಮ ಪ್ರಬಲ ವಿರೋಧವಿದೆ. ಸ್ವಾಮೀಜಿಯವರು ಒಂದು ಸಮಾಜದ ಸ್ವಾಮೀಜಿಯಾ ಅಥವಾ ಎಲ್ಲಾ ಸಮುದಾಯಕ್ಕೂ ಸೇರಿದವರಾ ಎಂಬುದನ್ನು ಸ್ಪಷ್ಟಪಡಿಸಲಿ. ಅದನ್ನು ಬಿಟ್ಟು ಸ್ವಾಮೀಜಿ ಅವರು ಸಿದ್ದರಾಮಯ್ಯ ಅವರನ್ನು ಅವಹೇಳನ ಮಾಡುತ್ತಿರುವುದು ಖಂಡನೀಯವಾಗಿದೆ ಎಂದು ಹೇಳಿದ್ದಾರೆ.