ಮೈಸೂರು: ಕೆಳ ಹಂತದ ಅಧಿಕಾರಿಗಳು ಡೈರಿ ಬರೆಯುವುದನ್ನು, ಜಮೀನುಗಳಿಗೆ ಭೇಟಿ ನೀಡುವುದನ್ನು ಜಿಲ್ಲಾ ಮಟ್ಟದ ಅಧಿಕಾರಿಗಳು ಖಚಿತಪಡಿಸಿಕೊಳ್ಳಿ. ಕೆಳ ಹಂತದ ಅಧಿಕಾರಿಗಳು ನೀಡುವ ವರದಿ ಆಧರಿಸಿ ಅಗತ್ಯ ಕಂಡ ಕೃಷಿ ಭೂಮಿಗೆ ಭೇಟಿ ನೀಡಿ ಪರಿಶೀಲಿಸಿ ಎಂದು ಸಿಎಂ ಸಿದ್ದರಾಮಯ್ಯ ಸಲಹೆ ನೀಡಿದರು.
ಕೃಷಿ, ತೋಟಗಾರಿಕೆ, ಪಶು ಸಂಗೋಪನೆ, ರೇಷ್ಮೆ ಇಲಾಖೆ ಅಧಿಕಾರಿಗಳು ಜನಸಂಪರ್ಕ ನಡೆಸುತ್ತಲೇ ಇರಬೇಕು. ನೀವು ಜನರ ಮಧ್ಯೆ ಇದ್ದು ಕೆಲಸ ಮಾಡಲೇಬೇಕು. ಆಗ ಮಾತ್ರ ಪರಿಣಾಮಕಾರಿ ಕೆಲಸ ಸಾಧ್ಯವಾಗುತ್ತದೆ. ನೀವು ಜನಸಂಪರ್ಕ ಸಭೆ ನಡೆಸದೆ ಕೇವಲ ಸಭೆಗಳಲ್ಲಿ ಬಂದು ನೀವು ಹೇಳಿದ್ದನ್ನು ಕೇಳಿಕೊಂಡು ನಾವು ಹೋಗುವುದಿಲ್ಲ ಎಂದು ಹೇಳಿದರು,
ಕೃಷಿ ಅಧಿಕಾರಿಗಳು ಗ್ರಾಮಗಳಿಗೆ ಭೇಟಿ ನೀಡಿ ರೈತರ ಜಮೀನುಗಳಲ್ಲಿ ಪರಿಶೀಲನೆ ನಡೆಸಬೇಕು. ರೈತರ ಸಭೆಗಳನ್ನು ನಡೆಸಬೇಕು. ಇದನ್ನೆಲ್ಲಾ ನೀವು ಮಾಡಿದ್ದೀರಾ ಎಂದು ಸಿಎಂ ಪ್ರಶ್ನಿಸಿದರು. ಈ ವೇಳೆ ಕೃಷಿ ಅಧಿಕಾರಿ ತಾವು ಗ್ರಾಮ ಭೇಟಿ ನೀಡಿದ್ದ ಡೈರಿಯನ್ನು ಸಿಎಂಗೆ ನೀಡಿದರು. ಸಿಎಂ ಡೈರಿ ಪರಿಶೀಲಿಸಿದರು. ಸಮಾಧಾನ ಆಗಲಿಲ್ಲ. ನೀವು ಭೇಟಿ ನೀಡಿದ ಫೋಟೋಗಳನ್ನು ತೋರಿಸಿ ಎಂದರು. ಅಧಿಕಾರಿಗಳು ತಾವು ಭೇಟಿ ನೀಡಿದ್ದ ಫೋಟೋಗಳನ್ನು ಪ್ರದರ್ಶಿಸಿದರು.
ಆದರೂ ಸಮಾಧಾನ ಆಗದ ಮುಖ್ಯಮಂತ್ರಿಗಳು, ರೈತರ ಜಮೀನುಗಳಿಗೆ ಭೇಟಿ ನೀಡಿದಾಗ ರೈತರಿಗೆ ಹೆಚ್ಚು ತಿಳಿವಳಿಕೆ ಇದೆಯಾ? ನಿಮಗೆ ಹೆಚ್ಚು ತಿಳಿವಳಿಕೆ ಇದೆಯಾ ಗೊತ್ತಾಯ್ತಾ ಎಂದು ಕೇಳಿದರು. ಇದಕ್ಕೆ ಉತ್ತರಿಸಿದ ಅಧಿಕಾರಿಗಳು, ಪ್ರಾಕ್ಟಿಕಲ್ ಆಗಿ ರೈತರು ಬುದ್ದಿವಂತರಿರುತ್ತಾರೆ. ನಾವು ಅವರಿಂದ ಕಲಿಯುತ್ತೀವಿ ಎಂದರು.





