ಮೈಸೂರು: ಮಳೆಯಿಂದ ಆಗುವ ಹಾನಿ ತಡೆಗಟ್ಟಲು ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಿ ಎಂದು ಜಿಲ್ಲಾಧಿಕಾರಿ ಲಕ್ಷ್ಮೀಕಾಂತ ರೆಡ್ಡಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿಂದು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಸಭೆ ನಡೆಯಿತು. ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಹವಾಮಾನ ಇಲಾಖೆ ಈ ಬಾರಿ ಉತ್ತಮ ಮಳೆಯಾಗಲಿದೆ ಎಂದು ಮಾಹಿತಿ ನೀಡಿದೆ. ಮೈಸೂರು ಜಿಲ್ಲೆಯಲ್ಲೂ ಭಾರೀ ಮಳೆಯಾಗಲಿದ್ದು, ಮೊದಲಿಗೆ ಜನರು ಮುನ್ನೆಚ್ಚರಿಕೆ ವಹಿಸಿ ಎಂದು ಸೂಚನೆ ನೀಡಿದರು. ಭಾರೀ ಮಳೆಯ ಹಿನ್ನೆಲೆಯಲ್ಲಿ ತಹಶೀಲ್ದಾರ್ಗಳು ತಮ್ಮ ತಮ್ಮ ಹಂತದಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಬೇಕು ಎಂದು ಸೂಚನೆ ನೀಡಿದರು.
ಕಬಿನಿ ವ್ಯಾಪ್ತಿಯಲ್ಲಿ ಹೆಚ್ಚಿನ ಪ್ರವಾಹ ಉಂಟಾಗುವ ಸಾಧ್ಯತೆಗಳಿದ್ದು, ಜನರ ಸ್ಥಳಾಂತರ, ಗಂಜಿ ಕೇಂದ್ರಗಳನ್ನು ತೆರೆಯುವ ಕುರಿತು ಎಲ್ಲಾ ರೀತಿಯಲ್ಲೂ ಸಿದ್ಧತೆ ಮಾಡಿಕೊಳ್ಳಿ ಎಂದು ಸೂಚಿಸಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಸಿಇಓ ಎಸ್.ಯುಕೇಶ್ ಕುಮಾರ್, ಪಾಲಿಕೆ ಆಯುಕ್ತ ಶೇಖ್ ತನ್ವೀರ್ ಆಸಿಫ್, ಡಿಸಿಪಿ ಮುತ್ತುರಾಜ್, ಅಪರ ಜಿಲ್ಲಾಧಿಕಾರಿ ಡಾ.ಪಿ.ಶಿವರಾಜು ಸೇರಿದಂತೆ ಮತ್ತಿತರರು ಭಾಗಿಯಾಗಿದ್ದರು.





