ಮೈಸೂರು: ಮೈಸೂರಿನ ನಾಡನಹಳ್ಳಿ ಗ್ರಾಮದಲ್ಲಿ ಇಂದು ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಸಮುದಾಯ ಭವನ ನಿರ್ಮಾಣಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ.ಮಹದೇವಪ್ಪ ಗುದ್ದಲಿ ಪೂಜೆ ನೆರವೇರಿಸಿದರು.
ಈ ವೇಳೆ ಮಾತನಾಡಿದ ಸಚಿವ ಮಹದೇವಪ್ಪ ಅವರು, ಅಂಬೇಡ್ಕರ್ ಅವರ ಗೌರವದ ಸಂಕೇತವಾಗಿ ಪ್ರತಿಮೆಗಳನ್ನು ನಿರ್ಮಿಸುತ್ತಿದ್ದೇವೆ. ನಮ್ಮ ಜನರು ಬಾಬಾ ಸಾಹೇಬರ ಮಾತನ್ನು ಅರ್ಥಮಾಡಿಕೊಂಡು ಶಿಕ್ಷಣ ಪಡೆದು, ಪುಸ್ತಕಗಳನ್ನು ಅಧ್ಯಯನ ಮಾಡಬೇಕು ಎಂದು ಕಿವಿಮಾತು ಹೇಳಿದರು.
ಈ ವೇಳೆ ಮಾತನಾಡಿದ ಶಾಸಕ ಜಿ.ಟಿ.ದೇವೇಗೌಡ ಅವರು, ಈ ಗ್ರಾಮ ಪಟ್ಟಣ ಪಂಚಾಯಿತಿ ವ್ಯಾಪ್ತಿಗೆ ಒಳಪಟ್ಟು ಮೇಲ್ದರ್ಜೆಗೇರಿದೆ. ಆದರೂ ಇಲ್ಲಿ ಗ್ರಾಮಸ್ಥರಿಗೆ ಕೆಲವು ತೊಂದರೆ ಉಂಟಾಗುತ್ತಿದೆ. ಈ ಗ್ರಾಮದ ನಿರಾಶ್ರಿತರಿಗೆ ಆಶ್ರಯ ಯೋಜನೆಯಡಿ ನಿವೇಶನ ವಿತರಿಸಲು ಸಚಿವರೊಂದಿಗೆ ಮಾತನಾಡಿ ಕ್ರಮವಹಿಸಲಾಗುವುದು ಎಂದು ಹೇಳಿದರು.





