ಮೈಸೂರು: ತಂಬಾಕು ಬೆಳೆಗಾರರ ಸಮಸ್ಯೆಗಳನ್ನು ಪರಿಹರಿಸಲು ಸದಾ ಬದ್ಧನಾಗಿದ್ದೇನೆ. ಕಡಿಮೆ ಪ್ರಮಾಣ ಬೆಳೆಯುವ ರೈತರ ಮೇಲೆ ಯಾವುದೇ ದಂಡ ವಿಧಿಸದಂತೆ ತಂಬಾಕು ಮಂಡಳಿ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಮೈಸೂರು-ಕೊಡಗು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ತಿಳಿಸಿದ್ದಾರೆ.
ಈ ಸಂಬಂಧ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಸಂಸದ ಯದುವೀರ್ ಅವರು, ಈ ವಿಷಯದ ಕುರಿತು ಅಧಿಕಾರಿಗಳೊಂದಿಗೆ ಮಾತನಾಡಿದ್ದೇನೆ ಎಂದು ವಿವರಿಸಿದ್ದಾರೆ.
ತಂಬಾಕು ಮಂಡಳಿಯ ಕಾರ್ಯಕಾರಿ ನಿರ್ದೇಶಕರ ಜೊತೆ ಮಾತನಾಡಿದ್ದು, ಪರವಾನಗಿ ಪಡೆದ ರೈತರು ಒಂದು ವೇಳೆ ಕಡಿಮೆ ಪ್ರಮಾಣದಲ್ಲಿ ಬೆಳೆದರೆ ಅಂತಹವರ ಮೇಲೆ ದಂಡ ವಿಧಿಸಬಾರದು ಎಂದು ತಿಳಿಸಲಾಗಿದೆ ಎಂದು ಹೇಳಿದ್ದಾರೆ.
ಈ ನಿಟ್ಟಿನಲ್ಲಿ ಸೂಕ್ತ ರೀತಿಯಲ್ಲಿ ಪರಿಶೀಲನೆ ಮಾಡಿ ಸೂಕ್ತ ಕ್ರಮ ತೆಗೆದು ಕೊಳ್ಳಲಾಗುವುದು ಎಂದು ಭರವಸೆ ನೀಡಿದ್ದಾರೆ ಎಂದು ತಿಳಿಸಿದ್ದಾರೆ.
ನಮ್ಮ ಕ್ಷೇತ್ರದಲ್ಲಿ ತಂಬಾಕು ಬೆಳೆಗಾರರ ಸಂಖ್ಯೆ ಹೆಚ್ಚಾಗಿದೆ. ಇವರ ಸಮಸ್ಯೆಗಳನ್ನು ನನ್ನ ಗಮನಕ್ಕೆ ತಂದ ಕೂಡಲೇ ಕೇಂದ್ರ ಸರ್ಕಾರದೊಂದಿಗೆ ಮಾತುಕತೆ ನಡೆಸಿದ್ದೇನೆ ಎಂದು ಸ್ಪಷ್ಟಪಡಿಸಿದ್ದಾರೆ.
ತಂಬಾಕು ಬೆಳೆಗಾರರ ಕಷ್ಟ-ನಷ್ಟಗಳ ಬಗ್ಗೆ ಅರಿವಿದೆ. ಕೆಲವೊಮ್ಮೆ ನಿಗದಿತ ಪ್ರಮಾಣಕ್ಕಿಂತ ಕಡಿಮೆ ಬೆಳೆಯುವ ಸಾಧ್ಯತೆಗಳಿರುತ್ತದೆ. ಇಂಥವರ ಮೇಲೆ ದಂಡ ವಿಧಿಸಲು ಅಧಿಕಾರಿಗಳು ಮುಂದಾಗಿದ್ದರು ಎಂದು ಸಂಸದರು ತಿಳಿಸಿದ್ದಾರೆ.
ಹೆಚ್ಚುವರಿ ದಂಡ ವಿಧಿಸುವುದರಿಂದ ನಮಗೆ ತೊಂದರೆ ಆಗುತ್ತಿದೆ ಎಂದು ರೈತರು ಸಮಸ್ಯೆ ತೋಡಿಕೊಂಡರು. ಕೂಡಲೇ ತಂಬಾಕು ಮಂಡಳಿ ಕಾರ್ಯಕಾರಿ ನಿರ್ದೇಶಕರೊಂದಿಗೆ ಚರ್ಚಿಸಿ ದಂಡ ವಿಧಿಸುವ ನಿರ್ಧಾರ ಕೈ ಬಿಡುವಂತೆ ತಿಳಿಸಿದ್ದೇನೆ ಎಂದಿದ್ದಾರೆ.
ತಂಬಾಕು ಮಂಡಳಿ ವತಿಯಿಂದ ಸಕಾರಾತ್ಮಕ ಸ್ಪಂದನೆ ವ್ಯಕ್ತವಾಗಿದೆ. ನಮ್ಮ ರೈತರಿಗೆ ಅನುಕೂಲವಾದರೆ ಸಾಕು ಎಂದು ಸಂಸದ ಯದುವೀರ್ ಒಡೆಯರ್ ಸ್ಪಷ್ಟಪಡಿಸಿದ್ದಾರೆ.





