ಮೈಸೂರು: ಕಳೆದ ನಾಲ್ಕು ತಿಂಗಳಿನಿಂದ ಗೃಹಲಕ್ಷ್ಮೀ ಹಣ ಬಿಡುಗಡೆಯಾಗದ ಹಿನ್ನೆಲೆಯಲ್ಲಿ ಹಾಗೂ ಸ್ಥಳೀಯ ಸಂಸ್ಥೆಗಳ ಚುನಾವಣೆ ವಿಳಂಬವಾಗುತ್ತಿರುವ ಪರಿಣಾಮ ರೊಚ್ಚಿಗೆದ್ದ ಮೈಸೂರು ಜಿಲ್ಲಾ ಜೆಡಿಎಸ್ ಕಾರ್ಯಕರ್ತರು ರಾಜ್ಯ ಸರ್ಕಾರದ ವಿರುದ್ಧ ಇಂದು ಬೀದಿಗಿಳಿದು ಪ್ರತಿಭಟನೆ ನಡೆಸಿದರು.
ಮೈಸೂರಿನ ಗಾಂಧಿ ವೃತ್ತದ ಬಳಿ ಜಮಾಯಿಸಿದ ಪ್ರತಿಭಟನಾಕಾರರು, ರಾಜ್ಯ ಸರ್ಕಾರದ ವಿರುದ್ಧ ವಿವಿಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಈ ವೇಳೆ ಮಾತನಾಡಿದ ಪ್ರತಿಭಟನಾಕಾರರು, ರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆ ಅನುಷ್ಠಾನ ಮಾಡಲಾಗದಷ್ಟು ದಿವಾಳಿಯಾಗಿದೆ. ಕಳೆದ ನಾಲ್ಕು ತಿಂಗಳಿಂದ ಗೃಹಲಕ್ಷ್ಮಿ ಹಣ ಕೊಟ್ಟಿಲ್ಲ. ಈ ಕೂಡಲೇ ಹಣ ಬಿಡುಗಡೆ ಮಾಡಬೇಕು. ಜೊತೆಗೆ ಕೂಡಲೇ ಸ್ಥಳೀಯ ಸಂಸ್ಥೆಗಳ ಚುನಾವಣೆಯನ್ನು ನಡೆಸಬೇಕು ಎಂದು ಆಗ್ರಹಿಸಿದರು.
ಜಿಲ್ಲಾ ನಗರದ ಘಟಕದ ಅಧ್ಯಕ್ಷ ಚಲುವೇಗೌಡ, ಗ್ರಾಮಾಂತರ ಅಧ್ಯಕ್ಷ ನರಸಿಂಹಸ್ವಾಮಿ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಮಾಜಿ ಶಾಸಕ ಅಶ್ವಿನ್ ಕುಮಾರ್, ಮಾಜಿ ಕಾರ್ಪೋರೇಟರ್ ಶ್ರೀಧರ್, ಮಾಜಿ ಮೇಯರ್ ರವಿಕುಮಾರ್ ಸೇರಿದಂತೆ ಹಲವು ಜೆಡಿಎಸ್ ಕಾರ್ಯಕರ್ತರು ಭಾಗಿಯಾಗಿದ್ದರು.





