ದಿನೇಶ್ ಕುಮಾರ್
ಮೈಸೂರು: ಕೇರಳದ ಉದ್ಯಮಿಯೊಬ್ಬರ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಿಲ್ಲಾ ಪೊಲೀಸರ ತಂಡ ಮತ್ತೋರ್ವ ಶಂಕಿತ ಆರೋಪಿಯನ್ನು ವಶಕ್ಕೆ ಪಡೆದಿದ್ದು, ಬಂಧಿತರ ಸಂಖ್ಯೆ ಎರಡಕ್ಕೆ ಏರಿದೆ.
ಆರೋಪಿಗಳ ಪತ್ತೆಗೆ ಶ್ರಮಿಸುತ್ತಿರುವ ಪೊಲೀಸರ ತಂಡ ಗುರುವಾರ ಬೆಳಿಗ್ಗೆ ಕೇರಳದಲ್ಲಿ ಓರ್ವ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ. ಆತ ದರೋಡೆ ಮಾಡಿದವರೊಂದಿಗೆ ಇದ್ದನು ಎಂಬುದು ವಿಚಾರಣೆ ವೇಳೆ ತಿಳಿದುಬಂದಿದೆ.
ತಾಲ್ಲೂಕಿನ ಜಯಪುರ ಹೋಬಳಿಯ ಹಾರೋಹಳ್ಳಿ ರಸ್ತೆಯಲ್ಲಿ ಸೋಮವಾರ ಬೆಳಿಗ್ಗೆ ೯ ಗಂಟೆಯ ಸುಮಾರಿಗೆ ಕೇರಳದ ಸುಲ್ತಾನ್ ಬತ್ತೇರಿ ಉದ್ಯಮಿ ಸೂಫಿ ಅಹ್ಮದ್ ಹಾಗೂ ಅವರೊಂದಿಗಿದ್ದ ಅಶ್ರಫ್ ಎಂಬುವರ ಮೇಲೆ ದಾಳಿ ನಡೆಸಿದ್ದ ದುಷ್ಕರ್ಮಿಗಳು ೧,೫೦ ಲಕ್ಷ ರೂ. ಹಣವನ್ನು ದೋಚಿದ್ದರು.
ಜಿಲ್ಲಾ ಎಸ್ಪಿ ವಿಷ್ಣುವರ್ಧನ್ ಅವರು ಆರೋಪಿಗಳ ಪತ್ತೆಗೆ ಮೂರು ತಂಡಗಳನ್ನು ರಚಿಸಿದ್ದಾರೆ. ತಂಡಗಳು ಈಗಾಗಲೇ ಕೇರಳ, ತಮಿಳುನಾಡು ಹಾಗೂ ರಾಜ್ಯದ ವಿವಿಧ ಸ್ಥಳಗಳಿಗೆ ತೆರಳಿ ತನಿಖೆ ನಡೆಸುತ್ತಿವೆ.
ದರೋಡೆ ಪ್ರಕರಣದಲ್ಲಿ ಭಾಗಿಯಾಗಿರುವವರು ಬಹುತೇಕ ಕೇರಳ ಮೂಲದವರು ಎಂಬುದು ಪೊಲೀಸರಿಗೆ ಖಚಿತವಾಗಿದೆ. ಹೀಗಾಗಿ ಹೆಚ್ಚಿನ ತನಿಖೆ ಮಾಡುವ ಉದ್ದೇಶದಿಂದ ಕೇರಳಕ್ಕೆ ಹೆಚ್ಚಿನ ಪೊಲೀಸರನ್ನು ಕಳುಹಿಸಿಕೊಟ್ಟಿದ್ದಾರೆ ಎನ್ನಲಾಗಿದೆ. ಒಂದೆರಡು ದಿನಗಳಲ್ಲಿ ಆರೋಪಿಗಳೆಲ್ಲರನ್ನೂ ಬಂಧಿಸುತ್ತೇವೆ ಎಂದು ಎಸ್ಪಿ ವಿಷ್ಣುವರ್ಧನ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.