ಮೈಸೂರು: ಸಿಎಂ ಬದಲಾವಣೆಯ ಪ್ರಶ್ನೆಯೇ ಇಲ್ಲ. ಬಿಜೆಪಿ ಪಕ್ಷ ಸಿದ್ದರಾಮಯ್ಯ ವಿರುದ್ಧ ರಾಜಕೀಯ ಪಿತೂರಿ ನಡೆಸುತ್ತಿದೆ ಎಂದು ಸಮಾಜ ಕಲ್ಯಾಣ ಇಲಾಖೆ ಸಚಿವ ಹೆಚ್.ಸಿ.ಮಹದೇವಪ್ಪ ಹೇಳಿದ್ದಾರೆ.
ನಗರದಲ್ಲಿ ಇಂದು (ಫೆ.20) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಸಿಎಂ ಆಗಬೇಕು ಎಂದು ಶಾಸಕರು ಮುದ್ರೆ ಒತ್ತಿದ್ದಾರೆ. ಹೈಕಮಾಂಡ್ ಕೂಡ ಅದನ್ನೇ ಹೇಳಿದೆ. ಹೀಗಾಗಿ ಸಿಎಂ ತಮ್ಮ ಸ್ಥಾನದಲ್ಲಿ ಗಟ್ಟಿಯಾಗಿಯೇ ಇದ್ದಾರೆ ಎಂದು ಹೇಳಿದರು.
ಮುಡಾ ಹಗರಣದಲ್ಲಿ ಲೋಕಾಯುಕ್ತ ಕ್ಲೀನ್ಚಿಟ್ ನೀಡಿರುವುದಕ್ಕೆ ಪ್ರತಿಕ್ರಿಯಿಸಿದ ಅವರು, ಸಿದ್ದರಾಮಯ್ಯ ಅವರ ಹೆಸರಿಗೆ ಕಳಂಕ ತರುವ ಉದ್ದೇಶದಿಂದ ವಿರೋಧ ಪಕ್ಷಗಳು ನಡೆಸಿದ ರಾಜಕೀಯ ಪಿತೂರಿ ಕೇಸ್ ಇದು. ಸಿದ್ದರಾಮಯ್ಯ ಅವರು ತಪ್ಪು ಮಾಡಿಲ್ಲ ಎಂದು ನಮಗೂ ಗೊತ್ತಿತ್ತು. ಲೋಕಾಯುಕ್ತ ಕ್ಲೀನ್ಚಿಟ್ ನೀಡಿರುವುದು ಸಂತೋಷವಾಗಿದೆ ಎಂದು ತಿಳಿಸಿದರು.





