ಮೈಸೂರು : ರಥಸಪ್ತಮಿ ಅಂಗವಾಗಿ ನಗರದಲ್ಲಿ ಭಾನುವಾರ ಅರಮನೆ ಸೇರಿದಂತೆ ವಿವಿಧೆಡೆ ವಿಶೇಷ ಪೂಜೆ ಸಲ್ಲಿಸುವ ಮೂಲಕ ಸೂರ್ಯನಿಗೆ ನಮಿಸಲಾಯಿತು.
ರಥಸಪ್ತಮಿ ಸೂರ್ಯ ನಾರಾಯಣನಿಗೆ ಬಹಳ ವಿಶೇಷ. ಸೂರ್ಯದೇವ ಉತ್ತರಾಯಣದಿಂದ ದಕ್ಷಿಣಾಯಣಕ್ಕೆ ಪಥ ಬದಲಿಸುತ್ತಾನೆ. ಹೀಗಾಗಿ ಸರ್ವರಿಗೂ ಮಂಗಳ ಉಂಟು ಮಾಡಲಿ ಎಂದು ಲೋಕ ಕಲ್ಯಾಣಕ್ಕಾಗಿ ರಥಸಪ್ತಮಿ ಆಚರಿಸಲಾಗುತ್ತದೆ. ಇದು ಬಹಳ ಹಿಂದಿನಿಂದ ನಡೆದುಕೊಂಡು ಬಂದಿರುವ ಆಚರಣೆ. ಅರಮನೆ ಆವರಣದಲ್ಲಿ ಇರುವ ದೇವಾಲಯಗಳು ಬಹಳ ವಿಶೇಷವಾದವು. ಆಗಿನ ಕಾಲದಲ್ಲಿ ರಾಜರು ನಡೆಸುತ್ತಿದ್ದರು. ಈಗ ಸರ್ಕಾರವೇ ಮಾಡುತ್ತಿದೆ.
2016ರ ಬಳಿಕ ಈ ವರ್ಷ ಭಾನುವಾರ ರಥಸಪ್ತಮಿ ಇರುವುದು ವಿಶೇಷ. ಪ್ರತಿ ವರ್ಷದಂತೆ ಈ ವರ್ಷವೂ ಚಾಮುಂಡೇಶ್ವರಿ ಪ್ರಾಧಿಕಾರ ಹಾಗೂ ಅರಮನೆ ಮಂಡಳಿ ವತಿಯಿಂದ ವಿಶೇಷ ಪೂಜೆ ಸಲ್ಲಿಸಲಾಯಿತು. ಅರಮನೆ ಆವರಣದಲ್ಲಿ ನಿಲ್ಲಿಸಿದ್ದ 8 ರಥಗಳಿಗೆ ವಿಶೇಷ ಪೂಜೆ ಸಲ್ಲಿಸುವ ಮೂಲಕ ಸಕಲ ಜೀವರಾಶಿಗೂ ತನ್ನ ಬೆಳಕಿನ ಮೂಲಕ ಚೈತನ್ಯ ನೀಡುವ ಸೂರ್ಯನನ್ನು ಆರಾಧಿಸಲಾಯಿತು. ಮುಂಜಾನೆ ಅರಮನೆಯ ಮುಖ್ಯದ್ವಾರದ ಮುಂಭಾಗ ರಥಗಳನ್ನು ನಿಲ್ಲಿಸಿ ಪೂಜೆ ಸಲ್ಲಿಸಲಾಯಿತು. ನಂತರ ಶ್ರೀ ಭುವನೇಶ್ವರಿ, ಶ್ರೀ ತ್ರಿನೇಶ್ವರ ಸ್ವಾಮಿ, ಶ್ರೀ ಲಕ್ಷ್ಮೀರಮಣಸ್ವಾಮಿ, ಶ್ರೀ ಮಹಾಲಕ್ಷ್ಮೀದೇವಿ, ಶ್ರೀ ಪ್ರಸನ್ನ ಕೃಷ್ಣ, ಶ್ರೀ ವೇದವರಹಸ್ವಾಮಿ, ಶ್ರೀ ಖಿಲ್ಲೆ ವೆಂಕಟರಮಣಸ್ವಾಮಿ ಹಾಗೂ ಶ್ರೀ ಗಾಯಿತ್ರಿ ಅಮ್ಮನವರ ಉತ್ಸವ ಮೂರ್ತಿಗಳ ದರ್ಶನಕ್ಕೆ ಸಾರ್ವಜನಿಕರಿಗೆ ಅವಕಾಶ ನೀಡಲಾಯಿತು. ಬೆಳಗ್ಗೆ 6 ಗಂಟೆಯಿಂದ ಮಧ್ಯಾಹ್ನ 12 ಗಂಟೆವರೆಗೆ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿತ್ತು. ನಗರದ ವಿವಿಧ ಬಡಾವಣೆಗಳಿಂದ ನೂರಾರು ಮಂದಿ ಅರಮನೆಗೆ ಆಗಮಿಸಿ ದೇವರ ದರ್ಶನ ಪಡೆದರು. ಒಂದೇ ಕಡೆ 8 ದೇವರುಗಳನ್ನು ಕಂಡು ಭಕ್ತರು ಪುಳಕಿತರಾದರು.
ಕೋಟೆ ಆಂಜನೇಯಸ್ವಾಮಿ ದೇವಸ್ಥಾನದಲ್ಲೂ ವಿಶೇಷ ಪೂಜೆ ಸಲ್ಲಿಸಲಾಯಿತು. ನೂರಾರು ಭಕ್ತರು ದೇವಸ್ಥಾನಕ್ಕೆ ಆಗಮಿಸಿ ಆಂಜನೇಯಸ್ವಾಮಿ ದರ್ಶನ ಪಡೆದರು.





