ಮೈಸೂರು: ಇದೇ ಮಾರ್ಚ್.7ರಂದು ಮಂಡನೆಯಾಗಲಿರುವ ರಾಜ್ಯ ಬಜೆಟ್ ಮೇಲೆ ಬೆಟ್ಟದಷ್ಟು ನಿರೀಕ್ಷೆಯಿದೆ ಎಂದು ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ ಹೇಳಿದ್ದಾರೆ.
ಈ ಕುರಿತು ಮೈಸೂರಿನಲ್ಲಿಂದು ಮಾತನಾಡಿದ ಅವರು, ರಾಜ್ಯ ಸರ್ಕಾರದ ಬಜೆಟ್ ಮೇಲೆ ಬೆಟ್ಟದಷ್ಟು ನಿರೀಕ್ಷೆ ಇದೆ. WTO ಒಪ್ಪಂದ ಜಾರಿಗೆ ಬಂದ ನಂತರ ರೈತರ ಜೀವನ ಚಿಂತಾಜನಕವಾಗಿದೆ. ಈ ಬಜೆಟ್ನಲ್ಲಿ ಗ್ರಾಮೀಣ ಮೂಲಭೂತ ಸೌಕರ್ಯಕ್ಕೆ ಹೆಚ್ಚಿನ ಒತ್ತು ನೀಡಬೇಕು. ಮೈಕ್ರೋ ಫೈನಾನ್ಸ್ ಹಾವಳಿಯನ್ನು ಶಾಶ್ವತವಾಗಿ ತಡೆಗಟ್ಟಲು ಸರ್ಕಾರದ ಅಧೀನ ಸಂಸ್ಥೆ ಮೂಲಕ ಸಾಲ ಸೌಲಭ್ಯ ಒದಗಿಸಬೇಕು. ಕಾವೇರಿ ಅಂತಿಮ ತೀರ್ಪಿನಂತೆ ಹೆಚ್ಚುವರಿ ನದಿ ನೀರಿನ ಬಳಕೆಗೆ ಯೋಜನೆ ರೂಪಿಸಿ, ಕೃಷ್ಣ ಬಿ ಸ್ಕೀಂ ನೀರಾವರಿಗೆ ಹೆಚ್ಚಿನ ಆದ್ಯತೆ ನೀಡಬೇಕು. ಬಜೆಟ್ನಲ್ಲಿ ಸಣ್ಣ ನೀರಾವರಿಗೆ ಹೆಚ್ಚಿನ ಆದ್ಯತೆ ನೀಡಿ ಕೃಷಿ ಬಲವರ್ಧನೆ ಮಾಡಬೇಕು. ಈಗಾಗಲೇ ಸರ್ಕಾರಕ್ಕೆ ಮನವಿ ಮಾಡಿರುವ ರೈತ ಬಜೆಟ್ ಹಕ್ಕು ಮಂಡನೆ ಕಿರುಹೊತ್ತಿಗೆಯ ವಿಚಾರವನ್ನು ಬಜೆಟ್ನಲ್ಲಿ ಅಳವಡಿಸಬೇಕು ಎಂದು ಆಗ್ರಹಿಸಿದರು.





