ಮೈಸೂರು: ಉಪಚುನಾವಣೆಯಲ್ಲಿ ವಿಪಕ್ಷಗಳ ಷಡ್ಯಂತ್ರ ಏನೂ ನಡೆಯಲಿಲ್ಲ. ನಾನೇ ಗೆಲುವು ಸಾಧಿಸಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ಸಂತಸ ವ್ಯಕ್ತಪಡಿಸಿದ್ದಾರೆ.
ರಾಜ್ಯದ ಎರಡು ಕ್ಷೇತ್ರಗಳ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳೇ ಗೆಲುವು ಸಾಧಿಸಿರುವ ವಿಚಾರಕ್ಕೆ ಸಂಬಂಧಿಸಿದಂತೆ ಮೈಸೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ರಾಜ್ಯದ ಜನರು ನಾವು ಕೊಟ್ಟಿರುವ ಕಾರ್ಯಕ್ರಮಗಳನ್ನು ಮೆಚ್ಚಿ ಉಪಚುನಾವಣೆಯಲ್ಲಿ ನಮಗೆ ಆಶೀರ್ವಾದ ಮಾಡಿದ್ದಾರೆ. ವಿಪಕ್ಷಗಳ ಷಡ್ಯಂತ್ರ ಏನೂ ನಡೆಯಲಿಲ್ಲ. ವಿಪಕ್ಷಗಳು ತಂತ್ರ ಮಾಡಿಲ್ಲ, ಕುತಂತ್ರ ಮಾಡಿದ್ದಾರೆ ಎಂದು ಕಿಡಿಕಾರಿದರು.
ಇನ್ನು ಮುಖ್ಯಮಂತ್ರಿ ಬದಲಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ನಾನು ಮುಂದುವರೆಯುವುದು ಬಿಡುವುದು ಹೈಕಮಾಂಡ್ಗೆ ಬಿಟ್ಟ ವಿಚಾರ. ಅವರು ಮುಂದುವರೆಯಿರಿ ಎಂದರೇ ಮುಂದುವರೆಯುತ್ತೇನೆ, ಇಲ್ಲ ಅದ್ರೆ ಇಲ್ಲ. ಹೈಕಮಾಂಡ್ ಏನು ನಿರ್ಧಾರ ತೆಗೆದುಕೊಳ್ಳುತ್ತದೋ ಅದಕ್ಕೆ ನಾನು ಬದ್ಧ. ಪದೆ ಪದೆ ಅದೇ ಪ್ರಶ್ನೆ ಯಾಕೆ ಕೇಳ್ತೀರಿ ಎಂದು ಮಾಧ್ಯಮ ಪ್ರತಿನಿಧಿಗಳಿಗೆ ಗದರಿದರು.
ಇನ್ನು ಶೃಂಗೇರಿ ಉಪಚುನಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ನಮ್ಮ ಅಭ್ಯರ್ಥಿ ನ್ಯಾಯಾಲಯಕ್ಕೆ ಹೋಗುತ್ತಾರೆ. 257 ಮತಗಳು ಅಸಿಂಧುವಾಗಿದೆ. ಸಿಂಧುವಾಗಿದ್ದ ಮತ ಅಸಿಂಧು ಅಗಿದ್ದು ಹೇಗೆ?. ಹಿಂದಿನ ಬಿಜೆಪಿ ಸರ್ಕಾರ ಹಾಗೂ ಅಭ್ಯರ್ಥಿ ಸೇರಿ ಆ ಕಾಲದಲ್ಲಿಯೇ ತಿದ್ದಿದ್ದಾರೆ. ಇದರಲ್ಲಿ ಯಾವುದೇ ಅನುಮಾನ ಇಲ್ಲ ಎಂದು ಗಂಭೀರ ಆರೋಪ ಮಾಡಿದರು.





