ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು
ಹನೂರು: ತಾಲ್ಲೂಕಿನ ಲೊಕ್ಕನಹಳ್ಳಿ ಗ್ರಾಮದಲ್ಲಿ ನಡೆಯುತ್ತಿರುವ ಶ್ರೀ ಆದಿಶಕ್ತಿ ಮಾರಮ್ಮ ಜಾತ್ರಾ ಮಹೋತ್ಸವದಲ್ಲಿ ಡಿಜೆ ಬಳಕೆಗೆ ಅವಕಾಶ ನೀಡುವಂತೆ ಗ್ರಾಮಸ್ಥರು ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಿರುವ ಘಟನೆ ಮಂಗಳವಾರ ಮಧ್ಯಾಹ್ನ ಜರುಗಿದೆ.
ಲೊಕ್ಕನಹಳ್ಳಿ ಗ್ರಾಮದಲ್ಲಿ ಏಪ್ರಿಲ್.20ರ ಸೋಮವಾರದಿಂದ 23ರವರೆಗೆ ನಾಲ್ಕು ದಿನಗಳ ಕಾಲ ಶ್ರೀ ಆದಿಶಕ್ತಿ ಮಾರಮ್ಮ ಜಾತ್ರಾ ಮಹೋತ್ಸವ ನಡೆಯುತ್ತಿದೆ. ಜಾತ್ರಾ ಸಂದರ್ಭದಲ್ಲಿ ಧ್ವನಿವರ್ಧಕ ಅಳವಡಿಸಲು ಅನುಮತಿ ಕೇಳಿದ್ದಾರೆ.
ಈ ವೇಳೆ ಡಿಜೆ ಬಳಕೆ ಮಾಡದಂತೆ ಪೊಲೀಸರು ಗ್ರಾಮಸ್ಥರಿಗೆ ಸೂಚನೆ ನೀಡಿದ್ದರು. ಆದರೆ ಲೊಕ್ಕನಹಳ್ಳಿ ಗ್ರಾಮದ ಮುಖ್ಯ ರಸ್ತೆ ಸೇರಿದಂತೆ ದೇವಸ್ಥಾನದ ಸಮೀಪ ಬೃಹತ್ ಡಿಜೆ ಅಳವಡಿಕೆ ಮಾಡಿದ್ದಾರೆ. ಇದರಿಂದ ಸ್ಥಳೀಯ ನಿವಾಸಿಗಳು ಹಾಗೂ ಸಾರ್ವಜನಿಕರಿಗೆ ತೊಂದರೆಯಾಗುತ್ತಿರುವುದನ್ನು ಗಮನಿಸಿದ ಪೊಲೀಸರು ಡಿಜೆ ತೆಗೆಯುವಂತೆ ಸೂಚನೆ ನೀಡಿದ್ದಾರೆ.
ಪೊಲೀಸರ ಹೇಳಿಕೆಯಿಂದ ರೊಚ್ಚಿಗೆದ್ದ ಗ್ರಾಮಸ್ಥರು ಮಹಿಳೆಯರು ಮಕ್ಕಳು ರಸ್ತೆ ತಡೆ ಮಾಡಿ ಪ್ರತಿಭಟನೆ ನಡೆಸಿ ಪೊಲೀಸರ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಗುಂಡ್ಲುಪೇಟೆಯಲ್ಲಿ ನಡೆಯುತ್ತಿರುವ ಮುಖ್ಯಮಂತ್ರಿಗಳ ಕಾರ್ಯಕ್ರಮಕ್ಕೆ ಹನೂರು ಪೊಲೀಸ್ ಠಾಣೆಯಿಂದ ಬಂದೋಬಸ್ತ್ಗಾಗಿ ಹೆಚ್ಚಿನ ಸಂಖ್ಯೆಯಲ್ಲಿ ಸಿಬ್ಬಂದಿಗಳು ಹೋಗಿರುವುದರಿಂದ ಕೇವಲ ಬೆರಳಣಿಕೆಯ ಸಿಬ್ಬಂದಿಗಳು ಮಾತ್ರ ಪ್ರತಿಭಟನಾ ಸ್ಥಳಕ್ಕೆ ಸೇರಿದ್ದರು. ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಮಸ್ಥರು ಪ್ರತಿಭಟನೆ ನಡೆಸಿದ್ದರಿಂದ ಪೊಲೀಸರು ವಿಡಿಯೋ ಚಿತ್ರೀಕರಣ ಮಾಡಿಕೊಂಡು ವಾಪಸ್ ಆಗಮಿಸಿದ್ದಾರೆ.
ರಸ್ತೆ ಸಂಚಾರ ಅಸ್ತವ್ಯಸ್ತ: ಲೊಕ್ಕನಹಳ್ಳಿ ಮಾರ್ಗವಾಗಿ ಅಂತರ ರಾಜ್ಯ ತಮಿಳುನಾಡಿಗೆ ಪ್ರತಿನಿತ್ಯ ನೂರಾರು ವಾಹನಗಳ ಮೂಲಕ ಸಾರ್ವಜನಿಕರು ಹಾಗೂ ವ್ಯಾಪಾರಸ್ಥರು ತೆರಳುತ್ತಾರೆ. ಮಂಗಳವಾರ ಮಧ್ಯಾಹ್ನ ಏಕಾಏಕಿ ಪ್ರತಿಭಟನೆ ನಡೆಸಿದ್ದರಿಂದ ವಾಹನ ಸವಾರರು ಹಾಗೂ ನಾಗರಿಕರಿಗೆ ತೊಂದರೆ ಉಂಟಾಗಿ ಗಂಟೆಗಟ್ಟಲೆ ಕಾಯುವಂತಹ ಸ್ಥಿತಿ ನಿರ್ಮಾಣವಾಗಿತ್ತು.
ಇನ್ನು ಗ್ರಾಮಗಳಲ್ಲಿ ನಡೆಯುವ ಮಾರಿ ಹಬ್ಬಕ್ಕೆ ವರ್ಷದಲ್ಲಿ ಮೂರು ದಿನಗಳ ಕಾಲ ಡಿಜೆ ಬಳಕೆಗೆ ಅವಕಾಶ ನೀಡುವಂತೆ ಪ್ರಜ್ಞಾವಂತ ನಾಗರಿಕರು ಸಾಮಾಜಿಕ ಜಾಲತಾಣದ ಮೂಲಕ ಮನವಿ ಮಾಡಿದ್ದಾರೆ.





