ನಮ್ಮ ಮೈಸೂರ ದಸರಾ 2024

ಅದ್ಧೂರಿ ಜೊತೆಗೆ ಅಚ್ಚುಕಟ್ಟಾದ ದಸರಾ: ಜಿಲ್ಲಾಡಳಿತದ ಶ್ರಮ ಮತ್ತು ಶಿಸ್ತಿಗೆ ಸಿಎಂ ಅಭಿನಂದನೆ

ಅಂಬಾರಿ ಏರಿದ ಚಾಮುಂಡಿ ತಾಯಿಗೆ ಪುಷ್ಪಾರ್ಚನೆ ಭಾಗ್ಯ: ರಾಜ್ಯದ ಜನತೆಗೆ ಕೃತಜ್ಞತೆ ಅರ್ಪಿಸಿದ ಸಿಎಂ ಸಿದ್ದರಾಮಯ್ಯ

ಮೈಸೂರು: ಅದ್ಧೂರಿ ಮತ್ತು ಅಚ್ಚುಕಟ್ಟಾದ ದಸರಾ ಆಯೋಜಿಸಿದ ಜಿಲ್ಲಾಡಳಿತ ಶ್ರಮ ಮತ್ತು ಶಿಸ್ತಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿನಂದನೆ ಅಲ್ಲಿಸಿದ್ದಾರೆ.

ಕೋಟ್ಯಾಂತರ ಕನ್ನಡಿಗರ ಸಾಕ್ಷಿಯಾಗಿ ತಾಯಿ ಚಾಮುಂಡಿಗೆ ಪುಷ್ಪಾರ್ಚನೆ ಅರ್ಪಿಸಿದ ಬಳಿಕ ಮುಖ್ಯಮಂತ್ರಿಗಳು ವಿಜ್ರಂಭಣೆಯ ದಸರಾ ವೈಭವವನ್ನು ಮೆಚ್ಚಿಕೊಂಡು ಜಿಲ್ಲಾಡಳಿತಕ್ಕೆ ಅಭಿನಂದಿಸಿದರು.

ಅಂಬಾರಿ ಏರಿದ ತಾಯಿ ಚಾಮುಂಡಿಗೆ ಅತಿ ಹೆಚ್ಚು ಬಾರಿ ಮುಖ್ಯಮಂತ್ರಿಯಾಗಿ ಪುಷ್ಪಾರ್ಚನೆ ಅರ್ಪಿಸಿದ ಭಾಗ್ಯ ತಮ್ಮ ಪಾಲಿಗೆ ಒದಗಿ ಬಂದಿದ್ದಕ್ಕಾಗಿ ರಾಜ್ಯದ ಜನತೆಗೆ ಕೃತಜ್ಞತೆ ಸಲ್ಲಿಸಿದ್ದಾರೆ.

ಕಳೆದ ವರ್ಷ ಭೀಕರ ಬರಗಾಲದ ಕಾರಣದಿಂದ ಸಂಪ್ರದಾಯ ಮತ್ತು ವೈಭವಕ್ಕೆ ಕೊರತೆ ಇಲ್ಲದ ಸರಳ ದಸರಾವನ್ನು ಆಯೋಜಿಸಲಾಗಿತ್ತು. ಆದರೆ ಈ ಬಾರಿ ರಾಜ್ಯಾದ್ಯಂತ ಉತ್ತಮ ಮಳೆಯಾಗಿ, ನಿರೀಕ್ಷಿತ ಮಟ್ಟಕ್ಕಿಂತ ಉತ್ತಮ ಬೆಳೆ ಆಗುವ ಲಕ್ಷಣಗಳೂ ಸ್ಪಷ್ಟವಾಗಿವೆ. ಸಾಲದ್ದಕ್ಕೆ ಈ ಬಾರಿ ಜಿಎಸ್ ಟಿ ಮತ್ತು ತೆರಿಗೆ ಸಂಗ್ರಹವೂ ನಿರಾಸೆ ಮೂಡಿಸಿಲ್ಲ. ಇದು ರಾಜ್ಯದ ಆರ್ಥಿಕತೆ ಆರೋಗ್ಯಕರವಾಗಿ ಏರುಗತಿಯಲ್ಲಿ ಇರುವುದಕ್ಕೆ ಸಾಕ್ಷಿಯಾಗಿದೆ. ಎಲ್ಲವೂ ಒಟ್ಟಾಗಿ ದಸರಾ ಸಂಭ್ರಮವನ್ನು ಹೆಚ್ಚಿಸಿದೆ ಎನ್ನುವ ಸಂತೋಷವನ್ನೂ ವ್ಯಕ್ತಪಡಿಸಿದ್ದಾರೆ.

ದಸರಾ ಪೂರ್ವಭಾವಿ ಸಭೆಗಳಲ್ಲಿ ಕೊಟ್ಟ ಸೂಚನೆ ಮತ್ತು ತೆಗೆದುಕೊಂಡ ನಿರ್ಣಯಗಳನ್ನು ಜಿಲ್ಲಾಡಳಿತ ಶಿಸ್ತುಬದ್ದವಾಗಿ ಜಾರಿಗೊಳಿಸಿದೆ. ಇದೇ ಮೊದಲ ಬಾರಿಗೆ ಯುವ ದಸರಾವನ್ನು ಚಾಮುಂಡಿ ತಪ್ಪಲಿನ ಉತ್ತನಹಳ್ಳಿಯಲ್ಲಿ ಸಂಘಟಿಸಿ ಲಕ್ಷ ಲಕ್ಷ ಮಂದಿ ಸಂಭ್ರಮಿಸಿದರು. ಶಾಸ್ತ್ರೀಯ ಸಂಗೀತ ಪ್ರಕಾರಗಳಿಂದ, ಸಮಕಾಲೀನ ಸಂಗೀತವನ್ನೂ, ಶಾಸ್ತ್ರೀಯ ನೃತ್ಯದಿಂದ ಸಮಕಾಲೀನ ನೃತ್ಯ ಪ್ರಕಾರಗಳು, 20 ಕ್ಕೂ ಹೆಚ್ಚು ತಂಡಗಳು, ನೂರಾರು ಕಲಾವಿದರು ಯುವ ದಸರಾ ಸಡಗರವನ್ನು ಹೆಚ್ಚಿಸಿದ್ದಾರೆ.

ಹಾಗೆಯೇ ದಸರಾದ ಮುಖ್ಯ ಸಾಂಸ್ಕೃತಿಕ ವೇದಿಕೆಯಲ್ಲೂ ಸಾಹಿತ್ಯ, ಸಂಗೀತ, ಕಲೆ, ನೃತ್ಯಗಳು ಮೇಳೈಸಿ ಖುಷಿ ಕೊಟ್ಟಿದೆ.

ಒಟ್ಟಾರೆಯಾಗಿ ದಸರಾ ಉದ್ಘಾಟನೆಯಿಂದ ಅಂಬಾರಿಯ ತಾಯಿ ಚಾಮುಂಡಿಗೆ ಪುಷ್ಪಾರ್ಚನೆವರೆಗೂ ಯಾವುದೇ ಅಡಚಣೆಗಳು ಇಲ್ಲದಂತೆ ಒಂಬತ್ತು ದಿನಗಳ ಕಲಾ ಸಾಂಪ್ರದಾಯಿಕ ದಸರಾ ಸಂಭ್ರಮದಿಂದ ಮುಗಿದಿದೆ.

ಪಂಜಿನ ಮೆರವಣಿಗೆ ಕೂಡ ಹಳೆಯ ಮತ್ತು ಆಧುನಿಕತೆಯ ಮಿಶ್ರಣವಾಗಿದ್ದು ಈ ಬಾರಿಯ ವಿಶೇಷ.‌ ಅತ್ಯಂತ ಪುರಾತನವಾದ ಪಂಜಿನ ಬೆಳಕಿನ ಜೊತೆಗೆ ಆಕಾಶದಲ್ಲಿ ರಚಿಸಿದ ಅತ್ಯಂತ ಆಧುನಿಕವಾದ 1500 ಡ್ರೋನ್ ಗಳ ಬೆಳಕಿನ ರಂಗೋಲಿ ನೆರೆದಿದ್ದವರನ್ನು ವಿಸ್ಮಯದ ಜೊತೆಗೆ ರಂಜಿಸಿದ್ದಕ್ಕೂ ಸಿಎಂ ಜಿಲ್ಲಾಡಳಿತಕ್ಕೆ ಮೆಚ್ಚುಗೆ ಸೂಚಿಸಿದ್ದಾರೆ.

ದಸರಾ ಹೊತ್ತಲ್ಲಿ ಕಾನೂನು ಸುವ್ಯವಸ್ಥೆಗೆ ಎಲ್ಲೂ ಧಕ್ಕೆ ಆಗದಂತೆ, ಸಂಚಾರ ನಿರ್ವಹಣೆಯಲ್ಲಿ ಅಧಿಕಾರಿ ಮತ್ತು ಸಿಬ್ಬಂದಿ ತೋರಿಸಿದ ಸಂಯಮ, ಶ್ರಮ ಫಲ ನೀಡಿದೆ. ಅನಿವಾರ್ಯ ಕಾರಣಗಳಿಂದ, ಏಕಾ ಏಕಿ ಮೈಸೂರಿಗೆ ರಾಜ್ಯದ ಮೂಲೆ ಮೂಲೆಗಳಿಂದ, ಅಕ್ಕ‌ಪಕ್ಕದ ರಾಜ್ಯಗಳಿಂದ ಬಂದಿಳಿದ ವಾಹನಗಳ ಪ್ರವಾಹ ನಿಭಾಯಿಸಲು ಏಕಮುಖ ಸಂಚಾರ ವ್ಯವಸ್ಥೆ ಮಾಡಬೇಕಾಯಿತು. ಇದರಿಂದ ಸ್ವಲ್ಪ ಮಟ್ಟದ ಕಿರಿ ಕಿರಿ ಮೈಸೂರಿಗರಿಗೆ ಆಗಿದ್ದರೂ ಒಟ್ಟಾರೆಯಾಗಿ ಜಿಲ್ಲಾ ಪೊಲೀಸ್ ಮತ್ತು ನಗರ ಪೊಲೀಸ್ ಕಮಿಷನರೇಟ್ ನ ಶ್ರಮ ಮತ್ತು ವೃತ್ತಿಪರತೆಗೆ ನಾವು ಮೆಚ್ಚುಗೆ ಸೂಚಿಸೋಣ ಎಂದು ಮುಖ್ಯಮಂತ್ರಿಗಳು ತಿಳಿಸಿದ್ದಾರೆ.

ಹಾಗೆಯೇ ಶುಕ್ರವಾರ ಸಂಜೆ ಅಂಬಾರಿ ಬಸ್ ನಲ್ಲಿ ನಗರ ಪ್ರದಕ್ಷಿಣೆ ಹೊರಟು ದೀಪಾಲಂಕಾರ ವೀಕ್ಷಿಸಿದೆ. ಕಳೆದ ವರ್ಷಕ್ಕಿಂತ ಈ ವರ್ಷ ಭಿನ್ನ ಅನ್ನಿಸಿತು.‌ ಮತ್ತೊಬ್ಬರ ಸಂತೋಷಕ್ಕೆ ಘಾಸಿ ಮಾಡುವ ಹುಡುಗಾಟದ ತುತ್ತೂರಿಯನ್ನು, ಪೀಪಿಯನ್ನು ಈ ಬಾರಿ ಪೊಲೀಸರು ನಿಷೇಧಿಸಿದ್ದು ಒಳ್ಳೆಯದಾಯಿತು ಎನ್ನುವ ಅಭಿಪ್ರಾಯಗಳನ್ನೂ ನಗರ ಪ್ರದಕ್ಷಿಣೆ ವೇಳೆ ಹಲವರು ವ್ಯಕ್ತಪಡಿಸಿದರು.

ರಾಜ್ಯದ, ಹೊರ ರಾಜ್ಯದ, ವಿದೇಶಿಯರಿಗೆ ಅಚ್ಚುಕಟ್ಟಾದ ವಸತಿ, ಆತಿಥ್ಯ ನೀಡಿ ಮೈಸೂರಿನ, ರಾಜ್ಯದ ಘನತೆ ಹೆಚ್ಚಿಸಿದ ಹೋಟೆಲ್ ಉದ್ಯಮ ಮತ್ತು ಊಟೋಪಚಾರ, ಸಂಜೆಯ ಕುರುಕ್ ತಿಂಡಿಯವರಿಗೆಲ್ಲಾ ದಸರಾದ ಸಂಭ್ರಮ ಹೆಚ್ಚಿಸಿದ್ದಾರೆ.

ದಸರಾದ ಅಂತಾರಾಷ್ಟ್ರೀಯ ಖ್ಯಾತಿಯನ್ನು ಹೆಚ್ಚಿಸುವ, ಸಾಂಪ್ರದಾಯಿಕ ಹಿರಿಮೆಯನ್ನು ವಿಸ್ತರಿಸಿದ ಜಿಲ್ಲಾಡಳಿತದ ಶ್ರಮಕ್ಕೆ ಮುಖ್ಯಮಂತ್ರಿಗಳು ಮೆಚ್ಚುಗೆ ಸೂಚಿಸಿದ್ದಾರೆ.‌

ಈ ಎಲ್ಲಾ ಸಾರ್ಥಕತೆಗೆ ಕಾರಣವಾದ ಪೌರ ಕಾರ್ಮಿಕರಿಂದ ಜಿಲ್ಲಾಧಿಕಾರಿಗಳವರೆಗೆ, ಮಾವುತರಿಂದ ಜಿಲ್ಲಾ ಮಂತ್ರಿಗಳವರೆಗೆ ಪ್ರತಿಯೊಬ್ಬರ ಶ್ರಮ, ಕರ್ತವ್ಯ ಪ್ರಜ್ಞೆ, ವೃತ್ತಿಪರತೆಗೆ ಕೃತಜ್ಞತೆ  ಸಲ್ಲಿಸುತ್ತೇನೆ  ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಮಂಡ್ಯದಲ್ಲಿ ಭಿಕ್ಷುಕಿ ನಿಧನ : ಮೃತಳ ಮನೆಯಲ್ಲಿ ಮೂಟೆಗಟ್ಟಲೆ ಹಣ ಪತ್ತೆ; ಊರಿಗೂರೇ ಶಾಕ್!

ಮಂಡ್ಯ: ವೃದ್ಧ ಭೀಕ್ಷುಕಿಯೊಬ್ಬರು ತಾನು ಬೇಡಿ ಸಂಗ್ರಹಿಸಿಟ್ಟಿದ್ದ ಸಂಪತ್ತು ಇದೀಗ ಪರರ ಪಾಲಾಗಿರುವ ಸಂಗತಿ ಜನರನ್ನು ಅಚ್ಚರಿಗೊಳಿಸಿದೆ. ಮಂಡ್ಯ ನಗರದ…

7 hours ago

ಜಿಲ್ಲೆಗೊಂದು ಕೈಗಾರಿಕೆ ತರುತ್ತೇನೆ : ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಭರವಸೆ

ಪಾಂಡವಪುರ : ಜಿಲ್ಲೆಯ ಜನರ ನಿರೀಕ್ಷೆಯಂತೆ ಕೇಂದ್ರ ಸಚಿವನಾಗಿ ನನ್ನ ಅಧಿಕಾರದ ಅವಧಿಯೊಳಗೆ ಜಿಲ್ಲೆಗೊಂದು ಕೈಗಾರಿಕೆಯನ್ನು ತಂದೇ ತರುತ್ತೇವೆ ಎಂದು…

8 hours ago

ನಕಲಿ ಔಷಧ ತಯಾರಿಕಾ, ಮಾರಾಟ ಜಾಲ ; ವಿದೇಶದಲ್ಲಿ ಕಿಂಗ್‌ಪಿನ್ ಬಂಧನ

ಬೆಂಗಳೂರು : ಕರ್ನಾಟಕ ಸೇರಿದಂತೆ ದೇಶದ ಹಲವೆಡೆ ಹರಡಿದ್ದ ನಕಲಿ ಔಷಧ ಮಾರಾಟ ಜಾಲದ ಕಿಂಗ್ ಪಿನ್, ವಿದೇಶದಲ್ಲಿ ಅಡಗಿದ್ದ…

9 hours ago

ಗೋಣಿಕೊಪ್ಪ | ಮಾರುಕಟ್ಟೆಯಲ್ಲಿ ಗಸ್ತು ತಿರುಗಿದ ಪೊಲೀಸರು ; ಅಕ್ರಮ ಚಟುವಟಿಕೆ ಮೇಲೆ ನಿಗಾ

ಗೋಣಿಕೊಪ್ಪ : ಗೋಣಿಕೊಪ್ಪ ಪಟ್ಟಣದ ಮಾರುಕಟ್ಟೆ ಪ್ರದೇಶದಲ್ಲಿ ಅನಧಿಕೃತ ವಾಹನ ನಿಲುಗಡೆ, ರಸ್ತೆ ಅತಿಕ್ರಮಣ ಹಾಗೂ ಅಕ್ರಮ ಚಟುವಟಿಕೆಗಳಿಗೆ ಕಡಿವಾಣ…

9 hours ago

ಪಾರದೀಪ್ ಕರಾವಳಿಯಲ್ಲಿ ಹಡಗು ಮುಳುಗಡೆ ; ಇಬ್ಬರ ರಕ್ಷಣೆ, 22 ಮಂದಿ ನಾಪತ್ತೆ

72,100 ಟನ್‌ ಕಬ್ಬಿಣದ ಅದಿರು ಇದ್ದ ಹಡಗು ಭುವನೇಶ್ವರ: ಒಡಿಶಾದ ಪಾರದೀಪ್ ಕರಾವಳಿಯ ಆಳ ಸಮುದ್ರದಲ್ಲಿ ಶನಿವಾರ ಭೀಕರ ನೌಕಾ…

11 hours ago

ಐಎಎಸ್‌ ಅಧಿಕಾರಿ ಜ್ಞಾನೇಂದ್ರ ಕುಮಾರ್ ಮನೆ ಬಾಗಿಲು ಒಡೆದು ಇಡಿ ದಾಳಿ

ಬೆಂಗಳೂರು : ಕೆಪಿಎಸ್‌ಸಿ ಹಗರಣ ಸಂಬಂಧ ಫೋನ್ ಕರೆಗೆ ಪ್ರತಿಕ್ರಿಯಿಸದ ಹಿನ್ನೆಲೆ ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಅನುಪಸ್ಥಿತಿಯಲ್ಲಿ ಅವರ…

12 hours ago