Mysore
28
scattered clouds

Social Media

ಶುಕ್ರವಾರ, 18 ಅಕ್ಟೋಬರ್ 2024
Light
Dark

ಮೈಸೂರು ದಸರಾ ಜಂಬೂ ಸವಾರಿಗೆ ಕ್ಷಣಗಣನೆ: ಅರಮನೆಯಲ್ಲಿ ಭರದ ಸಿದ್ಧತೆ

 

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಜಂಬೂ ಸವಾರಿಗೆ ಕ್ಷಣಗಣನೆ ಆರಂಭವಾಗಿದೆ.

ಅರಮನೆ ಕೋಟೆ ಆಂಜನೇಯಸ್ವಾಮಿ ದೇವಾಲಯ ಎದುರು ನಂದಿಧ್ವಜಕ್ಕೆ ಪೂಜೆ ನೆರವೇರಿದ ಬಳಿಕ ವಿಜಯದಶಮಿ ಮೆರವಣಿಗೆ ಆರಂಭಗೊಳ್ಳಲಿದ್ದು. ಇದಕ್ಕಾಗಿ ಅರಮನೆಯಲ್ಲಿ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ.

ಮಧ್ಯಾಹ್ನ 1:41 ರಿಂದ 2:10ರವರೆಗೆ ಸಲ್ಲುವ ಶುಭ ಮಕರ ಲಗ್ನದಲ್ಲಿ ಸಿಎಂ ಸಿದ್ದರಾಮಯ್ಯ ಪೂಜೆ ನೆರವೇರಿಸಲಿದ್ದಾರೆ. ಈ ಮೂಲಕ ಜಂಬೂ ಸವಾರಿ ಮೆರವಣಿಗೆಗೆ ಚಾಲನೆ ದೊರೆಯಲಿದೆ.

ನಂದಿ ಧ್ವಜದ ಹಿಂದೆ ನಿಶಾನೆ ಆನೆ, ಇನ್ನುಳಿದ ಕಲಾತಂಡಗಳು, ಸ್ತಬ್ಧಚಿತ್ರಗಳು ಸಾಗಲಿವೆ. ಕಳೆದ 65 ವರ್ಷಗಳಿಂದ ಗೌರಿಶಂಕರ ನಗರದ ನಂದಿ ಧ್ವಜ, ವೀರಗಾಸೆ ತಂಡದವರು ಈ ಪೂಜೆಯಲ್ಲಿ ಭಾಗಿಯಾಗುತ್ತಿದ್ದಾರೆ. ಉಡಿಗಾಲ ಮಹದೇವಸ್ವಾಮಿ ನೇತೃತ್ವದ ತಂಡದಿಂದ ನಂದಿ ಧ್ವಜ ಕುಣಿತ ನಡೆಯಲಿದೆ.

ಇನ್ನು ಈ ಬಾರಿ ಜಿಲ್ಲಾಡಳಿತ ಅರಮನೆ ಆವರಣದಲ್ಲಿ ಜಂಬೂ ಸವಾರಿ ಮಾರ್ಗ ಬದಲಾವಣೆ ಮಾಡಿದ್ದು, ಹೊಸ ಸಂಪ್ರದಾಯ ಆರಂಭಿಸಲು ಮೈಸೂರು ಜಿಲ್ಲಾಡಳಿತ ಮುಂದಾಗಿದೆ. ಪ್ರತಿ ಬಾರಿ ಅಂಬಾರಿ ಕಟ್ಟಿದ ನಂತರ ಆನೆ ನೇರವಾಗಿ ಪುಷ್ಪಾರ್ಚನೆಗೆ ಬಂದು ನಿಲ್ಲುತ್ತಿತ್ತು. ಆದರೆ ಈ ಬಾರಿ ಪುಷ್ಪಾರ್ಚನೆಗೆ ಮೊದಲೇ ಸುಮಾರು 400 ಮೀಟರ್ ಸಂಚಾರ ಮಾಡುವಂತೆ ಯೋಜನೆ ರೂಪಿಸಲಾಗಿದೆ.

ಅಂಬಾರಿ ಕಟ್ಟಿದ ನಂತರ ಅಭಿಮನ್ಯುವು ತ್ರಿನೇಶ್ವರ ದೇವಸ್ಥಾನ ತಲುಪಿ, ಅಲ್ಲಿಂದ ಶ್ವೇತ ವರಹ ದೇವಸ್ಥಾನ ಬಳಿ ಸಾಗಿ ನಂತರ ಗಣ್ಯರ ಬಳಿ ಬಂದು ನಿಲ್ಲುತ್ತದೆ. ಹೀಗಾಗಿ ಗಣ್ಯರ ಪುಷ್ಪಾರ್ಚನೆಗೆ ಮುನ್ನವೇ 10 ಸಾವಿರಕ್ಕೂ ಹೆಚ್ಚು ಮಂದಿಗೆ ಅಂಬಾರಿ ನೋಡುವ ಅವಕಾಶ ಸಿಗುತ್ತದೆ.

ಇನ್ನು ಈಗಾಗಲೇ ರಾಜಬೀದಿಗಳಲ್ಲಿ ಜನರು ಜಂಬೂಸವಾರಿ ಮೆರವಣಿಗೆ ನೋಡಲು ಜಮಾಯಿಸುತ್ತಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ.

Tags: