ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ವಿಜಯದಶಮಿ ಜಂಬೂಸವಾರಿ ಮೆರವಣಿಗೆಗೆ ಕ್ಷಣಗಣನೆ ಆರಂಭವಾಗಿದ್ದು, ದೇಶ ವಿದೇಶಗಳಿಂದ ಲಕ್ಷಾಂತರ ಜನರು ಜಂಬೂಸವಾರಿಯನ್ನು ಕಣ್ತುಂಬಿಕೊಳ್ಳಲು ಕಾತುರದಿಂದ ಕಾಯುತ್ತಿದ್ದಾರೆ.
ಈ ನಡುವೆ ವಿಜಯದಶಮಿಯ ಸಂಪ್ರದಾಯಿಕ ಆಚರಣೆಗಳು ಮತ್ತು ಪೂಜೆ ಸೇರಿದಂತೆ ಮತ್ತಿತರ ಕಾರ್ಯಕ್ರಮಗಳಲ್ಲಿ ಭಾಗಿಯಾಗಿದ್ದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು, ಅರಮನೆ ಅಂಗಳದಲ್ಲಿ ವಿಜಯಯಾತ್ರೆಯ ವಿಧಿ ವಿಧಾನಗಳನ್ನು ನೆರವೇರಿಸಿದರು.
ಅರಮನೆಯ ಕರಿಕಲ್ಲು ತೊಟ್ಟಿಯಲ್ಲಿ ವಜ್ರಮುಷ್ಠಿ ಕಾಳಗ ಮುಗಿದ ನಂತರ ಉತ್ತರ ದಿಕ್ಕಿನಲ್ಲಿರುವ ಭುವನೇಶ್ವರಿ ಅಮ್ಮನವರ ದೇಗುಲಕ್ಕೆ ವಿಜಯಯಾತ್ರೆ ಹೊರಟರು.
ಬಳಿಕ ಬನ್ನಿಮರಕ್ಕೆ ಸಂಪ್ರದಾಯದಂತೆ ವಿಶೇಷ ಪೂಜೆ ಸಲ್ಲಿಸಿ, ಬನ್ನಿ ಮಹಾಕಾಳಿಯಮ್ಮನವರ ಆಶೀರ್ವಾದ ಪಡೆದುಕೊಂಡರು.
ಅಲ್ಲಿಂದ ಹೊರಟ ಯದುವೀರ್ ವಿಜಯಯಾತ್ರೆ ಮುಂದುವರಿಸಿ ಅರಮನೆ ತಲುಪಿದರು. ಈ ಮೂಲಕ ರಾಜಮನೆತನದ ವಿಜಯದಶಮಿಯ ಪೂಜಾ ಕೈಂಕರ್ಯಗಳಿಗೆ ಅಂತಿಮ ತೆರೆಬಿದ್ದಿದೆ.