ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ವಿಜಯದಶಮಿ ಜಂಬೂಸವಾರಿ ಮೆರವಣಿಗೆ ವೀಕ್ಷಣೆ ಮಾಡಲು ಶಿಥಿಲ ಕಟ್ಟಡಗಳ ಮೇಲೆ ಹತ್ತಬಾರದು ಎಂದು ಪೊಲೀಸ್ ಕಮಿಷನರ್ ಸೀಮಾ ಲಾಟ್ಕರ್ ಹೇಳಿದ್ದಾರೆ.
ಈ ಕುರಿತು ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬೆಂಗಳೂರು ಹಾಗೂ ತಮಿಳುನಾಡಿನ ಕರೂರಿನಲ್ಲಿ ಸಂಭವಿಸಿದ ಕಾಲ್ತುಳಿತ ದುರಂತಗಳನ್ನು ದೃಷ್ಟಿಯಲ್ಲಿಟ್ಟುಕೊಂಡು ದಸರಾ ಮಹೋತ್ಸವವನ್ನು ವ್ಯವಸ್ಥಿತವಾಗಿ ನಡೆಸಲು ಉದ್ದೇಶಿಸಲಾಗಿದೆ ಎಂದರು.
ಇದನ್ನು ಓದಿ : ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ: ಸಿಎಂ, ಡಿಸಿಎಂಗೆ ವಿಶೇಷ ಉಡುಗೊರೆ ರೆಡಿ
ಈ ಬಾರಿ ಕಡ್ಡಾಯವಾಗಿ ಜಂಬೂಸವಾರಿ ಹಾಗೂ ಪಂಜಿನ ಕವಾಯತು ಕಾರ್ಯಕ್ರಮಕ್ಕೆ ನಿಗದಿತ ಪಾಸ್ ಇರುವವರಿಗೆ ಮಾತ್ರ ಪ್ರವೇಶ ನೀಡಲಾಗುವುದು. ಪಾಸ್ ಇಲ್ಲದವರಿಗೆ ಪ್ರವೇಶವಿಲ್ಲ. ಕಾರ್ಯಕ್ರಮಕ್ಕೆ ಬರುವವರು ನಿಗದಿತ ಸ್ಥಳದಲ್ಲೇ ತಮ್ಮ ವಾಹನಗಳನ್ನು ಪಾರ್ಕಿಂಗ್ ಮಾಡಬೇಕು ಎಂದು ಮಾಹಿತಿ ನೀಡಿದರು.
ಇನ್ನು ವಿಜಯದಶಮಿ ಜಂಬೂಸವಾರಿ ಸಾಗುವ ಮಾರ್ಗದಲ್ಲಿ ಅನೇಕ ಶಿಥಿಲ ಕಟ್ಟಡಗಳಿವೆ. ಅವುಗಳ ಮೇಲೆ ಹತ್ತಬಾರದು. ಆ ಕಟ್ಟಡಗಳ ಮೇಲೆ ಕುಳಿತು ಜಂಬೂಸವಾರಿ ವೀಕ್ಷಣೆಗೆ ನಿರ್ಬಂಧ ವಿಧಿಸಲಾಗಿದೆ ಎಂದು ಹೇಳಿದರು.





