ಹೊಸದಿಲ್ಲಿ : ದಸರಾ ಉದ್ಘಾಟನೆಗೆ ಬೂಕರ್ ಪ್ರಶಸ್ತಿ ವಿಜೇತ ಬಾನು ಮುಷ್ತಾಕ್ ಅವರನ್ನು ಆಯ್ಕೆ ಮಾಡಿರುವ ಕರ್ನಾಟಕ ಸರ್ಕಾರದ ನಿರ್ಧಾರವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ಗೆ ಅರ್ಜಿ ಸಲ್ಲಿಕೆಯಾಗಿದೆ.
ಈ ಸಂಬಂಧ ಅರ್ಜಿಯ ವಿಚಾರಣೆಗೆ ಸುಪ್ರೀಂಕೋರ್ಟ್ ಒಪ್ಪಿದೆ. ಮುಖ್ಯ ನ್ಯಾಯಮೂರ್ತಿ ಬಿ.ಆರ್ ಗವಾಯಿ ಹಾಗೂ ನ್ಯಾಯಮೂರ್ತಿ ಕೆ.ವಿನೋದ್ ಚಂದ್ರ ಅವರ ಪೀಠದ ಮುಂದೆ ಅರ್ಜಿಯ ವಿಚಾರಣೆ ಬಂತು. ಸೆಪ್ಟಂಬರ್ 22ರಂದು ಹಬ್ಬ ಪ್ರಾರಂಭವಾಗುವುದರಿಂದ ತುರ್ತು ವಿಚಾರಣೆಗೆ ಅರ್ಜಿದಾರರು ಕೋರಿದರು. ಇದನ್ನು ಮಾನ್ಯ ಮಾಡಿದ ಸುಪ್ರೀಂ ನಾಳೆ ಅಂದರೆ ಸೆ.19ರಂದು ವಿಚಾರಣಗೆ ಒಪ್ಪಿಗೆ ನೀಡಿದೆ.
ಇದೇ ತಿಂಗಳ 22ರರಂದು ನಡೆಯುವ ದಸರಾ ಉತ್ಸವಕ್ಕೂ ಮುನ್ನ ನಡೆಸುವ ಅಗ್ರ ಪೂಜೆ ನಡೆಸಲು ಹಿಂದೂಯೇತರ ವ್ಯಕ್ತಿಯೊಬ್ಬರಿಗೆ ಅವಕಾಶ ನೀಡಲಾಗಿದೆ. ಹೀಗಾಗಿ ಅರ್ಜಿಯನ್ನು ತುರ್ತಾಗಿ ವಿಚಾರಣೆಗೆ ಪರಿಗಣಿಸಬೇಕು ಎಂದು ಅರ್ಜಿದಾರರ ಪರ ವಕೀಲರು ಹೇಳಿದರು. ಇದಕ್ಕೆ ಸಿಜೆಐ ಒಪ್ಪಿಗೆ ನೀಡಿದರು.
ಬೂಕರ್ ವಿಜೇತೆ ಬಾನು ಮುಷ್ತಾಕ್ ಅವರು ದಸರಾ ಉದ್ಘಾಟಿಸುವುದನ್ನು ವಿರೋಧಿಸಿ ಬಿಜೆಪಿ ನಾಯಕ ಪ್ರತಾಪ ಸಿಂಹ ಸೇರಿದಂತೆ ಹಲವು ಮಂದಿ ಸಲ್ಲಿಸಿದ್ದ ಪಿಐಎಲ್ ಸೆ.15ರಂದು ಕರ್ನಾಟಕ ಹೈಕೋರ್ಟ್ ತಿರಸ್ಕರಿಸಿತ್ತು.





