ಢಾಕಾ: ಉದ್ಯೋಗ ಕೋಟಾ ಸುಧಾರಣೆಗಳ ಕುರಿತು ವಾರದಿಂದ ನಡೆಯುತ್ತಿರುವ ಹಿಂಸಾತ್ಮಕ ಪ್ರತಿಭಟನಗಳ ನಂತರ ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ ಅವರು ರಾಜೀನಾಮೆ ಸಲ್ಲಿಸಿದ್ದು, ದೇಶವನ್ನು ತೊರೆದಿದ್ದಾರೆ ಎಂದು ವರದಿಯಾಗಿದೆ.
ಶೇಖ್ ಹಸೀನಾ ಅವರು ತಮ್ಮ ಸಹೋದರಿಯೊಂದಿಗೆ ಢಾಕಾ ತೊರೆದಿದ್ದು, ಅವರು ಆಶ್ರಯ ಅರಸಿ ಭಾರತಕ್ಕೆ ಬಂದಿಳಿಸಿದ್ದಾರೆ ಎಂದು ರಾಯಿಟರ್ಸ್ ವರದಿ ಮಾಡಿದೆ.
ಬಾಂಗ್ಲಾದೇಶದ ಹಿಂಸಾತ್ಮಕ ಪ್ರತಿಭಟನೆಯಲ್ಲಿ ಆಡಳಿತರೂಢ ಅವಾಮಿ ಲೀಗ್ ಪಕ್ಷದ ಬೆಂಬಲಿಗರು ಹಾಗೂ ಪ್ರತಿಭಟನಕಾರರ ನಡುವೆ ಘರ್ಷಣೆ ನಡೆದು, ಸುಮಾರು 100ಕ್ಕೂ ಅಧಿಕ ಮಂದಿ ಮೃತಪಟ್ಟಿದ್ದಾರೆ.
ಹಸೀನಾ ರಾಜೀನಾಮೆಗೆ ಒತ್ತಾಯಿಸಿ ಅಸಹಕಾರ ಚಳವಳಿ ನಡೆಸುತ್ತಿರುವ ಪ್ರತಿಭಟನಾಕಾರರು ಹಾಗೂ ಆಡಳಿತ ಪಕ್ಷದ ಕಾರ್ಯಕರ್ತರಿಂದ ಭಾನುವಾರ ಬೆಳಿಗ್ಗೆ ಪ್ರತಿರೋಧ ಎದುರಾದಾಗ ಘರ್ಷಣೆ ಉಂಟಾಗಿತ್ತು. ದೇಶದ 13 ಜಿಲ್ಲೆಗಳಲ್ಲಿ ಘರ್ಷಣೆ ಉಂಟಾಗಿದೆ ಎಂದು ಸ್ಥಳೀಯ ಮಾಧ್ಯಮವೊಂದು ವರದಿ ಮಾಡಿದೆ.
ಹಿಂಸಾಚಾರದಿಂದ ಮೊಬೈಲ್ ಇಂಟರ್ನೆಟ್ ಕಡಿತಗೊಳಿಸಲಾಗಿದೆ ಮತ್ತು ಅನಿರ್ದಿಷ್ಟ ಅವಧಿಗೆ ರಾಷ್ಟ್ರವ್ಯಾಪ್ತಿ ಕರ್ಫ್ಯೂ ಜಾರಿಗೊಳಿಸಲಾಗಿದೆ.