ಚೆನ್ನೈ : ತಮಿಳುನಾಡು ರಾಜಕಾರಣದಲ್ಲಿ ತಮ್ಮದೇ ಆದ ಕ್ರೇಜ್ ಸೃಷ್ಟಿಸಿಕೊಂಡಿರುವ ಟಿವಿಕೆ ಪಕ್ಷದ ಅಧ್ಯಕ್ಷ, ನಟ ʼದಳಪತಿʼ ವಿಜಯ್ ಅವರನ್ನು ಬಿಜೆಪಿ ತನ್ನತ್ತ ಸೆಳೆಯಲು ತಂತ್ರ ರೂಪಿಸುತ್ತಿರುವುದಾಗಿ ವರದಿಯಾಗಿದೆ.
ಟಿವಿಕೆ(ತಮಿಳಗ ವೆಟ್ರಿ ಕಳಗಂ) ಜೊತೆ ಚುನಾವಣಾ ಪೂರ್ವ ಮೈತ್ರಿ ಮಾಡಿಕೊಳ್ಳಲು ಬಿಜೆಪಿ ತಂತ್ರ ರೂಪಿಸುತ್ತಿದ್ದು, ಚುನಾವಣೆಯಲ್ಲಿ ಮೈತ್ರಿಕೂಟ ಗೆದ್ದರೆ ವಿಜಯ ಅವರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡುವುದಾಗಿ ಹೇಳಿದೆ.
ಜೊತೆಗೆ ಸೀಟು ಹಂಚಿಕೆಯಲ್ಲೂ 80 ಕ್ಷೇತ್ರಗಳನ್ನು ಬಿಟ್ಟುಕೊಡುವುದಾಗಿ ಬಿಜೆಪಿ ಭರವಸೆ ನೀಡಿದೆ ಎಂದು ಹೇಳಲಾಗುತ್ತಿದೆ. ಈ ಮಾತುಕತೆ ಸಹ ಅಂತಿಮ ಹಂತಕ್ಕೆ ತಲುಪಿದೆ ಎನ್ನಲಾಗಿದೆ. ಒಂದು ವೇಳೆ ಇದು ನಿಜವೇ ಆಗಿದ್ದರೆ ತಮಿಳುನಾಡು ರಾಜಕೀಯ ಲೆಕ್ಕಚಾರವೇ ಬದಲಾಗಬಹುದು ಎಂದು ಹೇಳಲಾಗುತ್ತಿದೆ.
ಆದರೆ ಸಿಎಂ ಸ್ಥಾನದ ಮೇಲೆ ಕಣ್ಣಿಟ್ಟಿರುವ ವಿಜಯ ತಾವೂ ಯಾವುದೇ ಕಾರಣಕ್ಕೂ ಬಿಜೆಪಿ ಜತೆ ಮೈತ್ರಿ ಮಾಡಿಕೊಳ್ಳಲ್ಲ ಎಂದು ಈ ಹಿಂದೆಯೇ ಸ್ಪಷ್ಟವಾಗಿ ಹೇಳಿದ್ದಾರೆ.
ತಮಿಳುನಾಡು ವಿಧಾನಸಭಾ ಚುನಾವಣೆಗೆ ಏಪ್ರಿಲ್ 9 ರಂದು ಮತದಾನ ನಡೆಯಲಿದ್ದು, ಮೇ 4 ರಂದು ಫಲಿತಾಂಶ ಹೊರಬೀಳಲಿದೆ.




