ಬೆಂಗಳೂರು: ಕಳೆದ ವಿಧಾನಸಭಾ ಚುನಾವಣೆ ವೇಳೆ ಬಿಜೆಪಿ ಸರ್ಕಾರದ ವಿರುದ್ಧ ಅಪಪ್ರಚಾರದ ಜಾಹೀರಾತು ನೀಡಿದ ಪ್ರಕರಣದಲ್ಲಿ ಲೋಕಸಭೆಯ ಪ್ರತಿಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಮೇಲೆ ದಾಖಲಾಗಿದ್ದ ದೂರನ್ನು ಹೈಕೋರ್ಟ್ ರದ್ದುಪಡಿಸಿದೆ.
ಅವರ ವಿರುದ್ಧ ದಾಖಲಾಗಿದ್ದ ಖಾಸಗಿ ದೂರನ್ನು ಕರ್ನಾಟಕ ಹೈಕೋರ್ಟ್ ಮಂಗಳವಾರ ರದ್ದುಪಡಿಸಿ ಆದೇಶಿಸಿದೆ. ಇದರೊಂದಿಗೆ ರಾಹುಲ್ ಗಾಂಧಿ ನಿರಾಳರಾದಂತಾಗಿದೆ.
ಕರ್ನಾಟಕ ವಿಧಾನಸಭೆ ಚುನಾವಣೆಗೂ ಮುನ್ನ ಮುಖ್ಯ ವಾಹಿನಿಯ ಆಂಗ್ಲ ಮತ್ತು ಕನ್ನಡ ದಿನಪತ್ರಿಕೆಗಳ ಮುಖಪುಟದಲ್ಲಿ ಅಂದಿನ ಬಿಜೆಪಿ ಸರ್ಕಾರದ ವಿರುದ್ಧ ಸರಣಿ ಆರೋಪಗಳನ್ನು ಮಾಡಿ ಕಾಂಗ್ರೆಸ್ ಜಾಹೀರಾತು ನೀಡಿದ್ದನ್ನು ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಹಂಚಿಕೊಂಡ ಆರೋಪದ ಕುರಿತು ಬಿಜೆಪಿಯು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಹೂಡಿದ್ದ ಮಾನಹಾನಿ ಪ್ರಕರಣವನ್ನು ರದ್ದುಪಡಿಸಿದೆ.
ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಸಂಜ್ಞೇ ಪರಿಗಣಿಸಿರುವ ಆದೇಶ ರದ್ದತಿ ಕೋರಿ ರಾಹುಲ್ ಗಾಂಧಿ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಎಸ್ ಸುನೀಲ್ ದತ್ ಯಾದವ್ ಅವರ ಏಕಸದಸ್ಯ ಪೀಠ ಪುರಸ್ಕರಿಸಿದೆ.
ವಿಚಾರಣಾಧೀನ ನ್ಯಾಯಾಲಯದಲ್ಲಿನ ಪ್ರಕ್ರಿಯೆ ಮುಂದುವರಿಕೆಯು ಕಾನೂನು ಪ್ರಕ್ರಿಯೆಯ ದುರ್ಬಳಕೆಯಾಗಲಿದೆ. ಹೀಗಾಗಿ, 4ನೇ ಆರೋಪಿ ರಾಹುಲ್ ಗಾಂಧಿ ವಿರುದ್ಧದ ಪ್ರಕ್ರಿಯೆ ಬದಿಗೆ ಸರಿಸಲಾಗಿದೆ” ಎಂದು ನ್ಯಾಯಾಲಯ ಆದೇಶಿಸಿತು.





