ದೇಶ- ವಿದೇಶ

ಅನಾರೋಗ್ಯದ ನಡುವೆಯೂ ಬಜೆಟ್ ಚರ್ಚೆಯಲ್ಲಿ ಪಾಲ್ಗೊಂಡ ಹೆಚ್.ಡಿ.ದೇವೇಗೌಡ

ಗ್ರಾಮೀಣಾಭಿವೃದ್ಧಿ, MSME ಗಳಿಗೆ ಬೆಂಬಲ, ನೀರಿನ ಭದ್ರತೆಗೆ ತುರ್ತು ಕ್ರಮ ವಹಿಸಲು ಕೇಂದ್ರ ಸರಕಾರಕ್ಕೆ ಸಲಹೆ

ನಗರಗಳಿಗೆ ಹೆಚ್ಚುತ್ತಿರುವ ವಲಸೆ ಬಗ್ಗೆ ಕಳವಳ

ಗೋದಾವರಿ – ಕಾವೇರಿ ನದಿಗಳ ಜೋಡಣೆಗೆ ಮನವಿ ಮಾಡಿದ ಮಾಜಿ ಪ್ರಧಾನಿಗಳು

ಹೊಸದಿಲ್ಲಿ: ಅನಾರೋಗ್ಯದ ನಡುವೆಯೂ ರಾಜ್ಯಸಭೆಯಲ್ಲಿ ಗುರುವಾರ ಬಜೆಟ್ ಮೇಲಿನ ಚರ್ಚೆಯಲ್ಲಿ ಪಾಲ್ಗೊಂಡಿದ್ದ ಮಾಜಿ ಪ್ರಧಾನಿಗಳಾದ ಹೆಚ್.ಡಿ.ದೇವೇಗೌಡರು; ಇಡೀ ರಾಷ್ಟ್ರದ ಎಲ್ಲಾ ವರ್ಗಗಳ ಜನರಿಗೆ ಶಕ್ತಿ ತುಂಬುವ ಆಯವ್ಯಯ ಮಂಡಿಸಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಆ ಸಂದರ್ಭದಲ್ಲಿ ಸದನದಲ್ಲಿಯೇ ಹಾಜರಿದ್ದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ ಮಾಜಿ ಪ್ರಧಾನಿಗಳು; ಎಲ್ಲರಿಗೂ ಅನುಕೂಲ ಆಗುವಂತಹ, ದೇಶದ ಅಭಿವೃದ್ಧಿಗೆ ದೂರದೃಷ್ಟಿಯ ಕೊಡುಗೆ ನೀಡುವಂತಹ ಬಜೆಟ್ ಮಂಡಿಸಿದ್ದೀರಿ ಎಂದರು.

ಜನರ ಹಿತಾಸಕ್ತಿಯನ್ನು ಕಾಪಾಡಲು ವಿತ್ತ ಸಚಿವರು ತಮ್ಮ ಕೈಲಾದ ಎಲ್ಲವನ್ನೂ ಮಾಡಿದ್ದಾರೆ. ನಾನು ಅವರನ್ನು ಅಭಿನಂದಿಸುತ್ತೇನೆ ಎಂದು ಅವರು ಹೇಳಿದರು.

ನಗರಗಳಿಗೆ ವಲಸೆ ಬಗ್ಗೆ ಕಳವಳ:

ಇತ್ತೀಚಿನ ದಿನಗಳಲ್ಲಿ ಗ್ರಾಮೀಣ ಭಾಗದಿಂದ ಯುವಜನರು ನಗರಗಳಿಗೆ ವಲಸೆ ಬರುವವರ ಪ್ರಮಾಣ ಹೆಚ್ಚುತ್ತಲೇ ಇದೆ ಎಂದು ದೇವೇಗೌಡರು ಕಳವಳ ವ್ಯಕ್ತಪಡಿಸಿದರು.

ಬೆಂಗಳೂರಿನ ಜನಸಂಖ್ಯೆ ಈಗ 1.4 ಕೋಟಿಗೆ ಮುಟ್ಟಿದೆ. ಎಲ್ಲಾ ಯುವಕರು ತಮ್ಮ ವಿದ್ಯಾಭ್ಯಾಸ ಮುಗಿದ ತಕ್ಷಣ ಹಳ್ಳಿಗಳನ್ನು ತೊರೆದು ನಗರಗಳಿಗೆ ಬಂದು ಸೇರುತ್ತಿದ್ದಾರೆ. ಇದು ಜೀವನೋಪಾಯದ ಸಮತೋಲನವನ್ನು ತಪ್ಪಿಸುತ್ತಿದೆ. ಯುವಕರಿಗೆ ತಮ್ಮ ಪ್ರದೇಶಗಳಿಗಳಲ್ಲಿಯೇ ಹೆಚ್ಚೆಚ್ಚು ಉದ್ಯೋಗವಕಾಶ ಕಲ್ಪಿಸುವ ಅಗತ್ಯವಿದೆ ಎಂದು ಮಾಜಿ ಪ್ರಧಾನಿಗಳು ಸಲಹೆ ನೀಡಿದರು.

ಸಮತೋಲಿತ ಜೀವನೋಪಾಯ ಸೃಷ್ಟಿ ಮಾಡುವ ನಿಟ್ಟಿನಲ್ಲಿ ಅತಿ ಸಣ್ಣ, ಸಣ್ಣ ಮತ್ತು ಮಧ್ಯಮ ಗಾತ್ರದ ಉದ್ಯಮಗಳನ್ನು (MSME) ಬೆಂಬಲಿಸಲು ಹೆಚ್ಚು ಸೂಕ್ತವಾದ ಉಪಕ್ರಮಗಳನ್ನು ಕೈಗೊಳ್ಳಬೇಕಾದ ಅಗತ್ಯವನ್ನು ಮಾಜಿ ಪ್ರಧಾನಿಗಳು ಒತ್ತಿ ಹೇಳಿದರು.

“ಹಣಕಾಸು ಬೆಂಬಲ ಪಡೆಯುವಲ್ಲಿ ಅತಿಸಣ್ಣ, ಸಣ್ಣ ಕೈಗಾರಿಕೆಗಳು ಮಧ್ಯಮ ಗಾತ್ರದ ಕೈಗಾರಿಕೆಗಳೊಂದಿಗೆ ಸ್ಪರ್ಧಿಸಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ಈ ಉದ್ದೇಶಕ್ಕಾಗಿ ಪ್ರತ್ಯೇಕ ನೀತಿ, ಕಾರ್ಯಕ್ರಮಗಳನ್ನು ರೂಪಿಸುವ ಅಗತ್ಯ ತುಂಬಾ ಇದೆ ಎಂದು ಮಾಜಿ ಪ್ರಧಾನಿಗಳು ಹೇಳಿದರು.

ಅತಿ ಸಣ್ಣ, ಸಣ್ಣ ಕೈಗಾರಿಕೆಗಳಿಗೆ ಸಾಲದ ಅನುಮೋದನೆ ನೀಡುವಾಗ ಸಿಬಿಲ್ (CIBIL) ಸ್ಕೋರ್‌ ಮಾನದಂಡವನ್ನು ಪರಿಗಣಿಸಬಾರದು. ಬಡ್ಡಿದರಗಳನ್ನು ಶೇ.7ರಿಂದ 8ಕ್ಕೆ ಇಳಿಸಬೇಕು ಮತ್ತು ಆರಂಭಿಕ ಸಾಲ ಮರುಪಾವತಿಗಾಗಿ ಸ್ವತ್ತುಗಳ ಮರುಸ್ವಾಧೀನ ದಂಡ ಪ್ರಯೋಗವನ್ನು ಕೈಬಿಡಬೇಕು ಎಂದು ದೇವೇಗೌಡರು ಸರಕಾರವನ್ನು ಒತ್ತಾಯಿಸಿದರು.

ಹಲಸಿನ ಹಣ್ಣು, ನೇರಳೆ, ಹುಣಸೆಹಣ್ಣು ಮಂಡಳಿ ರಚಿಸಿ:

ಕೃಷಿ ಉತ್ಪನ್ನಗಳಿಗೆ ನಾವು ಹೆಚ್ಚು ಬೆಂಬಲ ನೀಡುವುದನ್ನು ನಾವು ಮುಂದುವರಿಸಬೇಕು. ಬಿಹಾರದಲ್ಲಿ ಮಖಾನಾ ಮಂಡಳಿ ರಚನೆ ಮಾಡಿರುವುದನ್ನು ನಾನು ಸ್ವಾಗತ ಮಾಡುತ್ತೇನೆ ಎಂದ ದೇವೇಗೌಡರು, ಅದೇ ರೀತಿ ಹಲಸಿನ ಹಣ್ಣು, ನೇರಳೆ, ಹುಣಸೆಹಣ್ಣು ಮಂಡಳಿ ರಚಿಸಬೇಕು ಎಂದು ಒತ್ತಾಯ ಮಾಡಿದರು.

ಅತಿ ಕಡಿಮೆ ಬಂಡವಾಳದಿಂದ ಮಖಾನಾ ಬೆಳೆಯಲಾಗುತ್ತಿದೆ. ಇದರಿಂದ ರೈತರಿಗೆ ಹೆಚ್ಚು ಅನುಕೂಲ ಆಗುತ್ತಿದೆ. ಮಂಡಳಿ ರಚನೆಯಿಂದ ಮತ್ತಷ್ಟು ಅನುಕೂಲ ಆಗುತ್ತದೆ. ಹೀಗಿದ್ದ ಮೇಲೆ ಕನಿಷ್ಠ ಬಂಡವಾಳದಿಂದ ನೈಸರ್ಗಿಕವಾಗಿ ಬೆಳೆಯಲಾಗುವ ಹಲಸಿನ ಹಣ್ಣು, ನೇರಳೆ ಹಾಗೂ ಹುಣಸೆಹಣ್ಣು ಮಂಡಳಿಯನ್ನು ರಚಿಸಬಾರದೇಕೆ ಎಂದು ಮಾಜಿ ಪ್ರಧಾನಿಗಳು ಸಲಹೆ ನೀಡಿದರು.

ಬೆಂಗಳೂರು ನೀರಿನ ಸಮಸ್ಯೆ; ಪುನಾ ಪ್ರಸ್ತಾಪಿಸಿದ ದೇವೇಗೌಡರು:

ರಾಜ್ಯಸಭೆಯಲ್ಲಿ ಮತ್ತೊಮ್ಮೆ ಬೆಂಗಳೂರಿನ ಕುಡಿಯುವ ನೀರಿನ ಬವಣೆಯ ಬಗ್ಗೆ ಗಮನ ಸೆಳೆದರು ಮಾಜಿ ಪ್ರಧಾನಿಗಳು.

ಬೆಂಗಳೂರಿನಲ್ಲಿ ನೀರಿನ ಟ್ಯಾಂಕರ್‌ಗಳು ಬಡ ನಿವಾಸಿಗಳನ್ನು ಶೋಷಿಸುತ್ತಿವೆ ಎಂಬ ಅಂಶವನ್ನು ಸದನದ ಗಮನಕ್ಕೆ ತಂದ ಅವರು; ಹಣಕಾಸು ಸಚಿವರು ಕುಡಿಯುವ ನೀರಿನ ಯೋಜನೆಗಳಿಗೆ ₹1,400 ಕೋಟಿ ಮಂಜೂರು ಮಾಡಿದ್ದಾರೆ. ಆದರೆ ದೀರ್ಘಾವಧಿಯ ನೀರಿನ ಭದ್ರತೆಯನ್ನು ಖಚಿತಪಡಿಸಿಕೊಳ್ಳಲು ಗೋದಾವರಿ-ಕಾವೇರಿ ಜೋಡಣೆಗೆ ಆದ್ಯತೆ ನೀಡಬೇಕು ಎಂದು ಅವರು ಒತ್ತಿ ಹೇಳಿದರು.

ನದಿ ಜಲ ಸಂಪನ್ಮೂಲ ಸದ್ವಿಯೋಗಕ್ಕೆ ಎಲ್ಲಾ ಪರಿಣಾಮಕಾರಿ ಕ್ರಮಗಳ ಅಗತ್ಯವಿದೆ. ಅದಕ್ಕೆ ದೀರ್ಘಾವಧಿ ಕಾರ್ಯಕ್ರಮಗಳ ಅನುಷ್ಠಾನ ಅಗತ್ಯವಿದೆ. ಈ ನಿಟ್ಟಿನಲ್ಲಿ ಗೋದಾವರಿ-ಕಾವೇರಿ ನದಿ ಜೋಡಣೆ ಯೋಜನೆಗೆ ಆದ್ಯತೆ ನೀಡಬೇಕು ಎಂದು ಅವರು ಹೇಳಿದರು.

ತಮ್ಮ ಭಾಷಣದ ಕೊನೆಯಲ್ಲಿ ದೀರ್ಘಾವಧಿಯ ಆರ್ಥಿಕ ಸ್ಥಿರತೆಯತ್ತ ಗಮನ ಹರಿಸುವಂತೆ ಸರಕಾರಕ್ಕೆ ಸಲಹೆ ನೀಡಿದರಲ್ಲದೆ; ನಾವು ಅಲ್ಪಾವಧಿಯ ಜನಪರ ಕ್ರಮಗಳನ್ನು ಮೀರಿ ಮುನ್ನಡೆಯಬೇಕು ಮತ್ತು ಭವಿಷ್ಯದ ಪೀಳಿಗೆಗೆ ಆಸ್ತಿಗಳನ್ನು ನಿರ್ಮಿಸಬೇಕು ಎಂದರು.

ಗ್ರಾಮೀಣ ಪ್ರದೇಶಗಳ ಅಭಿವೃದ್ಧಿ, ಸಣ್ಣ ಅತಿ ಸಣ್ಣ ಕೈಗಾರಿಕೆಗಳಿಗೆ ಬೆಂಬಲ ಹಾಗೂ ಅತ್ಯಂತ ಪ್ರಮುಖವಾದ ನೀರಿನ ಭದ್ರತೆಗೆ ಸರಕಾರದ ಕಡೆಯಿಂದ ತಕ್ಷಣದ ಕ್ರಮಗಳು ಆಗಬೇಕಿದೆ ಎಂದು ಅವರು ಪ್ರತಿಪಾದಿಸಿದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಕೊಡಗು ಜಿಲ್ಲೆಯಲ್ಲಿ ಕಳೆದ 24 ಗಂಟೆಯಲ್ಲಿ ಸುರಿದ ಮಳೆಯ ವಿವರ

ಕೊಡಗು: ಜಿಲ್ಲೆಯಲ್ಲಿ ಮಂಗಳವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 37 ಮಿ.ಮೀ. ಮಳೆಯಾಗಿದೆ. ಕಳೆದ…

5 hours ago

ಹಾರಂಗಿ ಜಲಾಶಯದ ಇಂದಿನ ನೀರಿನ ಮಟ್ಟ

ಮಡಿಕೇರಿ: ಹಾರಂಗಿ ಜಲಾಶಯದಲ್ಲಿ ನೀರಿನ ಮಟ್ಟ ಗರಿಷ್ಠ ಮಟ್ಟಕ್ಕೆ ತಲುಪಿದೆ. ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳಾಗಿದ್ದು, ಇಂದು 2,858.45…

5 hours ago

ತಮಿಳುನಾಡಿಗೆ ನಿತ್ಯ 9 ಸಾವಿರ ಕ್ಯೂಸೆಕ್ ನೀರು ಹರಿಸಿ – CWRC ಶಿಫಾರಸು ಎತ್ತಿಹಿಡಿದ CWMA

ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರದಲ್ಲಿ ಕಾವೇರಿ ನೀರು ನಿಯಂತ್ರಣ ಸಮಿತಿಯ, ಅಂದರೆ CWRCಯ ಶಿಫಾರಸನ್ನು ಕಾವೇರಿ ನೀರು…

5 hours ago

ಓದುಗರ ಪತ್ರ: ಭವಿಷ್ಯದ ಬೆಳಕಾಗಲಿ!

ಭವಿಷ್ಯದ ಬೆಳಕಾಗಲಿ! ಎಲ್ಲರ ಒಳಗೊಳ್ಳುವ ಎಲ್ಲರ ಹಿತ ಅಭ್ಯುದಯದ ಹೊಸ ದೇಶ ಕಟ್ಟುವುದಾಗಿ ಗುಡುಗುತಿದೆ ಜೆನ್ ಝೀ ಪಡೆ! ಈ…

8 hours ago

ಓದುಗರ ಪತ್ರ: ಓದುಗರ ಪತ್ರ ಚಾಮುಂಡಿಬೆಟ್ಟ: ನೋ-ಫ್ಲೈಝೋನ್ ಆಗಲಿ

ತಿರುಪತಿಯ ಮಾದರಿಯಲ್ಲಿ ಮೈಸೂರಿನ ಚಾಮುಂಡಿಬೆಟ್ಟಕ್ಕೂ ನೋ -ಫ್ಲೈಝೋನ್ ಘೋಷಣೆಗೆ ಗಂಭೀರವಾಗಿ ಪರಿಶೀಲಿಸುವಂತೆ ಸಂಸದ ಯದುವೀರ್ ಅವರು ಕೇಂದ್ರ ನಾಗರಿಕ ವಿಮಾನಯಾನ…

8 hours ago

ಓದುಗರ ಪತ್ರ: ಪ್ರೇಕ್ಷಕರ ಆಸಕ್ತಿಗೆ ತಕ್ಕಂತೆ ಕಾರ್ಯಕ್ರಮ ಆಯೋಜಿಸಿ

ಈ ವರ್ಷದ ನಾಡ ಹಬ್ಬ ದಸರಾದಲ್ಲಿ ನಡೆಯುವ ಕವಿಗೋಷ್ಠಿಗೆ, ಕವಿಗೋಷ್ಠಿಯ ಉಪಸಮಿತಿಯವರು ಅರ್ಜಿ ಸಲ್ಲಿಸಲು ತಿಳಿಸಿದ್ದಾರೆ. ಪ್ರಧಾನ ಕವಿಗೋಷ್ಠಿ, ಯುವ…

8 hours ago