ನವದೆಹಲಿ: ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಕೇಂದ್ರದ ಕೃಷಿ ಮತ್ತು ರೈತ ಕಲ್ಯಾಣ ಖಾತೆ ಮಂತ್ರಿಗಳಾದ ಶಿವರಾಜ್ ಸಿಂಗ್ ಚೌಹಾಣ್ ಅವರೊಂದಿಗೆ ಚರ್ಚೆ ನಡೆಸಿದ ಫಲವಾಗಿ ಕೇಂದ್ರ ಸರಕಾರ ರಾಜ್ಯದ ಮಾವು ಬೆಳೆಗಾರರ ನೆರವಿಗೆ ಧಾವಿಸಿದೆ.
ವಾತಾವರಣ ವೈಪರಿತ್ಯ ಮತ್ತು ಬೆಲೆ ಕುಸಿತದಿಂದ ತೀವ್ರ ಸಂಕಷ್ಟಕ್ಕೆ ಗುರಿಯಾಗಿದ್ದ ಮಾವು ಬೆಳೆಗಾರರಿಗೆ ನೆರವಿನ ಹಸ್ತ ಚಾಚಿರುವ ಕೇಂದ್ರವು, ಮಾರುಕಟ್ಟೆ ಹಸ್ತಕ್ಷೇಪ ಯೋಜನೆ ಅಡಿಯಲ್ಲಿ 1.30 ಲಕ್ಷ ಮೆಟ್ರಿಕ್ ಟನ್ ಮಾವಿಗೆ ಪ್ರತಿ ಕ್ವಿಂಟಲ್ಗೆ 1,750 ನೆರವು ಘೋಷಿಸಿದೆ.
ಈ ಸಂಬಂಧ ಸಚಿವ ಕುಮಾರಸ್ವಾಮಿ ಅವರು ನವದೆಹಲಿಯಲ್ಲಿ ಬುಧವಾರ ಕೃಷಿ ಸಚಿವರಾದ ಶಿವರಾಜ್ ಸಿಂಗ್ ಚೌಹಾಣ್ ಅವರನ್ನು ಅವರ ನಿವಾಸದಲ್ಲಿ ಭೇಟಿಯಾಗಿ ಮಾತುಕತೆ ನಡೆಸಿದರು. ತ್ವರಿತವಾಗಿ ಮಾವು ಬೆಳೆಗಾರರ ರಕ್ಷಣೆಗೆ ಧಾವಿಸಬೇಕು ಎಂದು ಮನವಿ ಮಾಡಿದ್ದರು. ಕುಮಾರಸ್ವಾಮಿ ಅವರು ಮನವಿಗೆ ಸ್ಪಂದಿಸಿದ್ದ ಚೌಹಾಣ್ ಅವರು, ಮಾವು ಬೆಳೆಗಾರರಿಗೆ ಆರ್ಥಿಕ ನೆರವು ಘೋಷಿಸಿದ್ದಾರೆ.
ಅಲ್ಲದೆ, ಇದೇ ಜೂನ್ 17ರಂದು ಸಚಿವ ಚೌಹಾಣ್ ಅವರಿಗೆ ಪತ್ರ ಬರೆದಿದ್ದ ಬೃಹತ್ ಕೈಗಾರಿಕೆ ಸಚಿವರು, ಮಾವು ಬೆಳೆಗಾರರ ನೆರವಿಗೆ ಬರುವಂತೆ ಕೋರಿದರು. ಬೆಲೆ ಕೊರತೆ ಪಾವತಿ ಯೋಜನೆ (PDPS)ಯಡಿ ನೆರವಾಗುವಂತೆ ಕೇಳಿದ್ದರು. ತದನಂತರ ಕೋಲಾರ ಜಿಲ್ಲೆಯಲ್ಲಿ ಮಾವು ಬೆಳೆಗಾರರು ಪ್ರತಿಭಟನೆ ಶುರು ಮಾಡುತ್ತಿದ್ದಂತೆಯೇ ತುರ್ತಾಗಿ ಬುಧವಾರ ಸಂಜೆ ಕೃಷಿ ಸಚಿವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದರು. ಅದರ ಫಲವಾಗಿ ಆರ್ಥಿಕ ನೆರವಿನ ಘೋಷಣೆ ಹೊರಬಿದ್ದಿದೆ. ಕೇಂದ್ರ ಸರ್ಕಾರದ ಈ ಉಪಕ್ರಮದ ಮೂಲಕ ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ, ತುಮಕೂರು, ಮಂಡ್ಯ ಸೇರಿದಂತೆ ವಿವಿಧ ಜಿಲ್ಲೆಗಳ ಮಾವು ಬೆಳೆಗಾರರಿಗೆ ನೆರವಾಗಲಿದೆ.




