ನವದೆಹಲಿ: ಗಡಿ ಜಿಲ್ಲೆ ಚಾಮರಾಜನಗರದ ಮಲೆಮಹದೇಶ್ವರ ಅರಣ್ಯ ಪ್ರದೇಶದಲ್ಲಿ ವಿಷಪಾಷಣದಿಂದ ಐದು ಹುಲಿಗಳು ಸಾವನ್ನಪ್ಪಿದ್ದ ಪ್ರಕರಣದ ಬಗ್ಗೆ ಸುಪ್ರೀಂಕೋರ್ಟ್ ತೀವ್ರ ಕಳವಳ ವ್ಯಕ್ತಪಡಿಸಿದೆ.
ಅರಣ್ಯದಲ್ಲಿ ಅರಣ್ಯ ಸಿಬ್ಬಂದಿಗಳ ಕೊರತೆ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಸುಪ್ರೀಂಕೋರ್ಟ್, ಐದು ಹುಲಿಗಳ ಸಾವಿನ ಪ್ರಕರಣ ಸಂಬಂಧ ಪ್ರಕ್ರಿಯೆ ನೀಡುವಂತೆ ರಾಜ್ಯ ಸರ್ಕಾರಕ್ಕೆ ಸೂಚನೆ ನೀಡಿದೆ.
ಮಹದೇಶ್ವರ ಬೆಟ್ಟ ಅರಣ್ಯ ಪ್ರದೇಶದಲ್ಲಿ ಕಳೆದ ತಿಂಗಳು ಒಂದು ತಾಯಿ ಹುಲಿ ಹಾಗೂ ನಾಲ್ಕು ಮರಿ ಹುಲಿಗಳು ಸಾವನ್ನಪ್ಪಿದ್ದವು. ಅರಣ್ಯಾಧಿಕಾರಿಗಳು ಹಾಗೂ ಅರಣ್ಯ ವೀಕ್ಷಕರ ಹುದ್ದೆಗಳಲ್ಲಿ ಶೇಕಡಾ.80ರಷ್ಟು ಖಾಲಿ ಇವೆ. ದೊಡ್ಡ ಸಂಖ್ಯೆಯಲ್ಲಿ ಹುದ್ದೆ ಖಾಲಿ ಇರುವುದು ಸರಿಯಲ್ಲ ಎಂದು ನ್ಯಾಯಾಲಯ ಬೇಸರ ವ್ಯಕ್ತಪಡಿಸಿದೆ. ಮಾನವ ಹಾಗೂ ಪ್ರಾಣಿ ಸಂಘರ್ಷಕ್ಕೆ ಎಲ್ಲಾ ರಾಜ್ಯಗಳು ಶಾಶ್ವತ ಪರಿಹಾರ ಕಂಡುಕೊಳ್ಳುವ ನಿರ್ದೇಶನ ನೀಡಿದೆ.
ಕರ್ನಾಟಕ ಸರ್ಕಾರದೊಂದಿಗೆ ಪರಿಸರ, ಅರಣ್ಯ ಹಾಗೂ ಹವಮಾನ ಬದಲಾವಣೆ ಸಚಿವಾಲಯಕ್ಕೆ ನೋಟಿಸ್ ಜಾರಿ ಮಾಡಿ ಪ್ರತಿಕ್ರಿಯೆ ನೀಡುವಂತೆ ಸುಪ್ರೀಂಕೋರ್ಟ್ ಸೂಚಿಸಿದೆ.





