Mysore
32
few clouds

Social Media

ಭಾನುವಾರ, 22 ಫೆಬ್ರವರಿ 2026
Light
Dark

ಕೇಂದ್ರದಿಂದ ರಾಜ್ಯಕ್ಕಾಗಿರುವ ಅನ್ಯಾಯ ಒಪ್ಪಿದ ವಿತ್ತ ಸಚಿವೆಗೆ ಧನ್ಯವಾದ: ಡಿಸಿಎಂ

ಬೆಂಗಳೂರು: ಬರ ಪರಿಹಾರ ವಿಚಾರದಲ್ಲಿ ಇಷ್ಟು ದಿನ ರಾಜ್ಯ ಸರ್ಕಾರದ ಮೇಲೆ ಆರೋಪ ಮಾಡುತ್ತಿದ್ದ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಈಗ ರಾಜ್ಯಕ್ಕೆ ಆಗಿರುವ ಅನ್ಯಾಯ ಒಪ್ಪಿಕೊಂಡಿದ್ದಾರೆ, ಅವರಿಗೆ ಧನ್ಯವಾದಗಳು ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ತಿಳಿಸಿದರು.

ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಅಪಾರ್ಟ್‌ ಮೆಂಟ್ ನಿವಾಸಿಗಳ ಭೇಟಿ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿ, ಬರ ಪರಿಹಾರ ವಿಳಂಬಕ್ಕೆ ಚುನಾವಣಾ ಆಯೋಗ ಕಾರಣ ಎಂಬ ವಿತ್ತ ಸಚಿವೆಯ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿ, ಬರ ಪರಿಹಾರಕ್ಕೂ ಚುನಾವಣೆಗೂ ಏನು ಸಂಬಂಧ? ಈ ಹೇಳಿಕೆ ಮೂಲಕ ರಾಜ್ಯಕ್ಕೆ ಬರ ಪರಿಹಾರ ಬರುವುದು ವಿಳಂಬವಾಗಿದ್ದು, ರಾಜ್ಯಕ್ಕೆ ಅನ್ಯಾಯ ಆಗಿದೆ ಎಂದು ಒಪ್ಪಿಕೊಂಡಿದ್ದಾರೆ. ಇಷ್ಟು ದಿನಗಳ ಕಾಲ ರಾಜ್ಯ ಸರ್ಕಾರದ ಮೇಲೆ ಆರೋಪ ಮಾಡುತ್ತಿದ್ದರು ಕಿಡಿಕಾರಿದ್ದಾರೆ.

ರಾಜ್ಯ ಸರ್ಕಾರ ಬರ ಪರಿಹಾರ ಮನವಿ ಕೊಟ್ಟ ಬಳಿಕ ನಾಲ್ಕು ತಿಂಗಳವರೆಗೂ ಯಾವುದೇ ಚುನಾವಣೆ ನೀತಿ ಸಂಹಿತೆ ಹಾಗೂ ಚುನಾವಣಾ ಆಯೋಗದ ನಿರ್ಬಂಧ ಇರಲಿಲ್ಲ. ಈಗ ಚುನಾವಣಾ ಆಯೋಗದ ನೆಪ ಹೇಳುತ್ತಿದ್ದಾರೆ ಎಂದು ಲೇವಡಿ ಮಾಡಿದರು.

ಕೇಂದ್ರ ಸರ್ಕಾರದ ಅಕ್ಷಮ್ಯ ಅಪರಾಧದ ಬಗ್ಗೆ ಜನರಿಗೂ ಅರಿವಾಗಿದೆ. ಈ ಮೂಲಕ ಡಿ.ಕೆ ಸುರೇಶ್‌ ಅವರ ನಮ್ಮ ತೆರಿಗೆ ನಮ್ಮ ಹಕ್ಕು ನಮ್ಮ ಪಾಲಿನ ಹೋರಾಟ ಒಪ್ಪಿಕೊಂಡಿದ್ದಾರೆ. ಅವರಿಗೆ ಧನ್ಯವಾದಗಳು ಎಂದರು.

ಮೇಕುದಾಟು ಯೋಜನೆ ವಿಚಾರವಾಗಿ ಇಲ್ಲಿನ ಜನರ ಕಷ್ಟಕ್ಕೆ ಪರಿಹಾರ ನೀಡಿ ಧೈರ್ಯ ತುಂಬುವವರು ನಾವು. ಬೇರೆ ಅಭ್ಯರ್ಥಿಗಳು ನಮ್ಮಂತೆ ಜನರಿಗೆ ಅಭಯ ನೀಡುವುದಿಲ್ಲ. ಎಚ್‌.ಡಿ ಕುಮಾರಸ್ವಾಮಿ ಅವರಿಗೆ ಈಗ ಮೇಕೆದಾಟು, ಮಹದಾಯಿ ಯೋಜನೆ ನೆನಪಾಗಿದೆ. ನಾನು ಮೇಕೆದಾಟು ಪಾದಯಾತ್ರೆ ಮಾಡುವ ಸಮಯದಲ್ಲಿ, ಕಬಾಬ್‌ ತಿನ್ನೋಕೆ ಪಾದಯಾತ್ರೆ ಮಾಡುತ್ತಿದ್ದಾರೆ ಎಂದಿದ್ದ ಕುಮಾರಸ್ವಾಮಿ ಈಗ ಪಾದಯಾತ್ರೆ ಬಗ್ಗೆ ಮಾತಾನಾಡುತ್ತಿದ್ದಾರೆ. ಮಂಡ್ಯಕ್ಕೆ ಬಂದ ನಂತರ ಅವರಿಗೆ ಬಿಸಿ ತಟ್ಟಿರುವಂತೆ ಕಾಣುತ್ತಿದೆ ಎಂದು ವ್ಯಂಗ್ಯವಾಡಿದರು.

Tags:
error: Content is protected !!