ವಿಧೇಯಕ ತರುವ ಮೂಲಕ ಮೋದಿ ಅವರು ವಕ್ಫ್ ನ ₹1.2 ಲಕ್ಷ ಕೋಟಿ ಬೆಲೆಯ ಆಸ್ತಿ ರಕ್ಷಣೆ ಮಾಡಿದ್ದಾರೆ
ನಾವು ಜಾತ್ಯತೀತ ಎಂದವರು ಮುಸ್ಲಿಮರಿಗೆ 75 ವರ್ಷಗಳಿಂದ ಅನ್ಯಾಯ ಮಾಡುತ್ತಲೇ ಇದ್ದಾರೆ
ಹೊಸದಿಲ್ಲಿ : ವಕ್ಫ್ ತಿದ್ದುಪಡಿ ಮಸೂದೆಯು ಮುಸ್ಲಿಮ್ ಸಮುದಾಯದಲ್ಲಿ ಅತ್ಯಂತ ತುಳಿತಕ್ಕೆ ಒಳಗಾಗಿರುವ ಬಡ, ದುರ್ಬಲ ಜನರಿಗೆ ವರದಾನವಾಗಿದೆ ಎಂದು ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಪ್ರತಿಪಾದಿಸಿದರು.
ರಾಜ್ಯಸಭೆಯಲ್ಲಿ ಇಂದು(ಏ.3) ಮಸೂದೆಯನ್ನು ಬೆಂಬಲಿಸಿ ಮಾತನಾಡಿದ ಅವರು, ದೇಶದಲ್ಲಿರುವ ವಕ್ಫ್ ಬೋರ್ಡ್ಗಳ ಆಸ್ತಿ ಸುಮಾರು ₹1.2 ಲಕ್ಷ ಕೋಟಿ ಬೆಲೆ ಬಾಳುತ್ತದೆ. ಇಂತಹ ಬೆಲೆ ಬಾಳುವ ಆಸ್ತಿಯನ್ನು ದಾನಿಗಳು ನೀಡಿದ್ದಾರೆ. ಈ ಆಸ್ತಿಯನ್ನು ರಕ್ಷಣೆ ಮಾಡಿ ಬಡ ಮುಸ್ಲಿಮರಿಗೆ ಅನುಕೂಲ ಆಗುವ ಕೆಲಸವನ್ನು ಈ ವಿಧೇಯಕ ಮಾಡುತ್ತಿದೆ ಎಂದರು.
ಈ ಮಸೂದೆಯು ವಕ್ಫ್ ಮಂಡಳಿಗಳ ಅಡಿಯಲ್ಲಿರುವ ಆಸ್ತಿಗಳ ಆಡಳಿತವನ್ನು ನಿಯಂತ್ರಿಸುತ್ತದೆ. ಇದು ಪ್ರಸ್ತುತ ಭಾರತದಾದ್ಯಂತ 9.4 ಲಕ್ಷ ಎಕರೆಗಳಷ್ಟು ಇರುವ ಒಟ್ಟು 8.7 ಲಕ್ಷ ಆಸ್ತಿಗಳನ್ನು ನಿಯಂತ್ರಿಸುತ್ತದೆ ಹಾಗೂ ಅದರ ಮೌಲ್ಯ ₹1.2 ಲಕ್ಷ ಕೋಟಿ. ಆದರೆ ಕೆಲವರು ತಮ್ಮ ಸ್ವಾರ್ಥಕ್ಕಾಗಿ ಈ ಆಸ್ತಿಗಳನ್ನು ದುರುಪಯೋಗ ಮಾಡಿಕೊಂಡಿದ್ದಾರೆ ಎಂದು ಅವರು ಹೇಳಿದರು.
ನಾವು ಜಾತ್ಯತೀತ ಎಂದು ಹೇಳಿಕೊಂಡವರು ಮುಸ್ಲಿಮರಿಗೆ ಕಳೆದ ಎಪ್ಪತ್ತೈದು ವರ್ಷಗಳಿಂದ ಅನ್ಯಾಯ ಮಾಡುತ್ತಲೇ ಇದ್ದಾರೆ ಎಂದು ಕಿಡಿಕಾರಿದ ಅವರು, ವಕ್ಫ್ ಆಸ್ತಿ ದುರ್ಬಳಕೆ ಆಗದಂತೆ ಪ್ರಧಾನಿ ನರೇಂದ್ರ ಮೋದಿ ಅವರು ದಿಟ್ಟ ಹೆಜ್ಜೆ ಇಟ್ಟಿದ್ದಾರೆ ಎಂದು ಶ್ಲಾಘಿಸಿದರು.
ಈ ವಿಧೇಯಕವೂ ಆರ್ಥಿಕ ಮತ್ತು ಸಾಮಾಜಿಕವಾಗಿ ದುರ್ಬಲವಾಗಿರುವ ಮುಸ್ಲಿಮರನ್ನು ಮೇಲೆತ್ತುತ್ತದೆ. ಆದರೆ, ಎಲ್ಲಿಯೂ ಅವರ ಧಾರ್ಮಿಕ ನಂಬಿಕೆಗಳಲ್ಲಿ ಮೂಗು ತೂರಿಸುವುದಿಲ್ಲ. ಇದನ್ನು ಈ ವಿಧೇಯಕದ ಟೀಕಾಕಾರರು ಅರ್ಥ ಮಾಡಿಕೊಳ್ಳಬೇಕು. ಈ ಮಸೂದೆ ಕೇವಲ ಕಂದಾಯ ಮತ್ತು ಆಡಳಿತ ವಿಷಯಗಳಲ್ಲಿ ಕಟ್ಟುನಿಟ್ಟಾಗಿ ವ್ಯವಹರಿಸುತ್ತದೆ ಎಂದು ಅವರು ಸ್ಪಷ್ಟಪಡಿಸಿದರು.
ನಮ್ಮ ದೇಶದಲ್ಲಿನ ನಾಗರಿಕರು ದೇವರನ್ನು ನಾನಾ ಹೆಸರುಗಳಲ್ಲಿ, ಬಗೆಯಲ್ಲಿ ಪೂಜಿಸುತ್ತಾರೆ, ಕರೆಯುತ್ತಾರೆ. ಕೆಲವರು ಅಲ್ಹಾ ಎನ್ನುತ್ತಾರೆ, ನಾನು ರಾಮ ಎಂದು ಕರೆಯುತ್ತೇನೆ. ನಾನು ದೇವರಲ್ಲಿ ನಂಬಿಕೆ ಇಟ್ಟಿದ್ದೇನೆ. ಎಲ್ಲಾ ದೇವರುಗಳ ಬಗ್ಗೆ ಗೌರವ, ನಂಬಿಕೆ ಹೊಂದಿದ್ದೇನೆ. ನಾನು ತಿರುಪತಿ, ಅಮೃತಸರದ ಸ್ವರ್ಣ ಮಂದಿರ, ಅಜ್ಮೀರ್ ದರ್ಗಾಕ್ಕೂ ಹೋಗುತ್ತೇನೆ. ನನ್ನ ನಂಬಿಕೆ ನನ್ನದು. ಇತರರ ನಂಬಿಕೆಯನ್ನು ಗೌರವಿಸುತ್ತೇನೆ. ತುಳಿತಕ್ಕೆ ಒಳಗಾದ ದುರ್ಬಲರ ಪರವಾಗಿ ನಾನು ವಕ್ಫ್ ಮಸೂದೆ ಮತ್ತು ಮೋದಿ ಅವರ ಸರ್ಕಾರವನ್ನು ಬೆಂಬಲಿಸುತ್ತೇನೆ ಎಂದು ಸ್ಪಷ್ಟ ಮಾತುಗಳಲ್ಲಿ ಹೇಳಿದರು.
ಕರ್ನಾಟಕದಲ್ಲಿ ನಾನು ಮುಖ್ಯಮಂತ್ರಿ ಆಗಿ ಅಲ್ಪಸಂಖ್ಯಾತರ ರಕ್ಷಣೆಗೆ ಸಾಕಷ್ಟು ನಿರ್ಧಾರಗಳನ್ನು ಮಾಡಿದ್ದೇನೆ. ಅವರ ಒಳ್ಳೆಯದಕ್ಕಾಗಿ ಅನೇಕ ಕ್ರಮಗಳನ್ನು ಕೈಗೊಂಡಿದ್ದೇನೆ. ಹಾಗಂತ ನಾನು ಯಾವುದೇ ಸಿದ್ಧಾಂತಕ್ಕೆ ಜೋತು ಬಿದ್ದಿಲ್ಲ. ನಾನೊಬ್ಬ ರೈತ. ರೈತರಿಗೂ ಒಳ್ಳೆಯದು ಮಾಡಿದ್ದೇನೆ. ಅಲ್ಲದೆ, ನಾನು ಯಾವುದೇ ಸಿದ್ಧಾಂತದವನಲ್ಲ, ನಾನು ರೈತ. ಮುಸ್ಲಿಂ ಮಾತ್ರವಲ್ಲ ಬಹಳಷ್ಟು ಸಮುದಾಯಕ್ಕೆ ಮೀಸಲಾತಿ ನೀಡಿದ್ದೇನೆ. ಸಣ್ಣಪುಟ್ಟ ಸಮುದಾಯಗಳಿಗೆ ಮೀಸಲು ಸೌಲಭ್ಯ ನೀಡಿ ಅವರ ಅಭಿವೃದ್ಧಿಗೆ ಕೆಲಸ ಮಾಡಿದ್ದೇನೆ. ಅನೇಕ ಹೋರಾಟ, ಸಂಘರ್ಷಗಳನ್ನು ಮಾಡಿದ್ದೇನೆ. ಆದರೆ, ಯಾವತ್ತೂ ನಾನು ಸಭಾಧ್ಯಕ್ಷರ ಪೀಠಕ್ಕೆ ಅಪಮಾನ ಮಾಡಿಲ್ಲ. ಮಾಡುವುದೂ ಇಲ್ಲ. ಆದರೆ, ಇಲ್ಲಿ ನಡೆಯುತ್ತಿರುವುದು ನೋಡಿ ಬೇಸರ ಆಗುತ್ತದೆ ಎಂದು ದೇವೇಗೌಡ ಅವರು ಅತೃಪ್ತಿ ವ್ಯಕ್ತಪಡಿಸಿದರು.
ಈ ನಡೆ ಶೋಷಿತ ಸಮುದಾಯಗಳ ಪ್ರಗತಿಗೆ ಸಹಕಾರಿ -ಟಿ.ಕೆ.ಹರೀಶ್ ಶಿಕ್ಷಣ ಕೇವಲ ವೈಯಕ್ತಿಕ ಬೆಳವಣಿಗೆಗೆ ಮಾತ್ರ ಸೀಮಿತವಾಗಿರಬಾರದು. ಅದು…
ಡಾ.ಎಂ.ಡಿ.ಉಮೇಶ್, ಉಪನ್ಯಾಸಕರು, ಗಾಂಧಿ ಅಧ್ಯಯನ ಕೇಂದ್ರ, ಮೈಸೂರು ವಿ.ವಿ ಬೆಳಗಾವಿ ಜಿಲ್ಲೆಯ ಹುದಲಿ ಗ್ರಾಮದಲ್ಲಿ ಬಾಲ ಕೃಷ್ಣ ಮತ್ತು ರಾಧಾಬಾಯಿ…
ಡಾಕ್ಟರ್ ಮೆಹತಾ ಮತ್ತು ನಾನು ಅವರ ಮಿತ್ರನ ಮನೆಗೆ ಹೋದೆವು. ಅವರು ನನ್ನ ವಿಷಯದಲ್ಲಿ ತುಂಬಾ ಕರುಣೆ ಮತ್ತು ಆದರವುಳ್ಳವರಾಗಿದ್ದರು.…
ನಂಜನಗೂಡು : ಹಾಡಾ ಹಗಲೇ ಜನನಿಬಿಡ ಪ್ರದೇಶದಲ್ಲಿ ನಿಲ್ಲಿಸಿದ್ದ ಸ್ಕೂಟಿಯಿಂದ ಹಣ ಕದ್ದ ಘಟನೆ ಪಟ್ಟಣದ ಮಿನಿ ವಿಧಾನಸೌಧದ ಬಳಿ…
ಮೈಸೂರು : ದಸರಾ ವಸ್ತು ಪ್ರದರ್ಶನವನ್ನು ಜಾಗತಿಕ ಮಟ್ಟದಲ್ಲಿ ಮತ್ತಷ್ಟು ಆಕರ್ಷಣೀಯವಾಗಿಸಲು ಕರ್ನಾಟಕ ಪ್ರದರ್ಶನ ಪ್ರಾಧಿಕಾರವು ವಸ್ತು ಪ್ರದರ್ಶನ ಆವರಣವನ್ನು…