ಉತ್ತರಾಖಂಡ್: ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕೇದಾರನಾಥ ಯಾತ್ರೆಯನ್ನು ಸ್ಥಗಿತಗೊಳಿಸಲಾಗಿದೆ.
ನಿನ್ನೆ ಉತ್ತರಕಾಶಿಯ ಧರಾಲಿ ಪ್ರದೇಶದಲ್ಲಿ ಮೇಘಸ್ಪೋಟದಿಂದ ಹಠಾತ್ ಪ್ರವಾಹ ಉಂಟಾಗಿ ಕನಿಷ್ಠ ಐವರು ಸಾವನ್ನಪ್ಪಿದ್ದು, 60ಕ್ಕೂ ಹೆಚ್ಚು ಮಂದಿ ನಾಪತ್ತೆಯಾಗಿದ್ದಾರೆ.
ಘಟನಾ ಸ್ಥಳದಲ್ಲಿ ಪೊಲೀಸ್, ಸೇನೆ, ಎನ್ಡಿಆರ್ಎಫ್ ಹಾಗೂ ಎಸ್ಡಿಆರ್ಎಫ್ನ ರಕ್ಷಣಾ ತಂಡಗಳಿಂದ ಶೋಧ ಕಾರ್ಯ ನಡೆಸಲಾಗುತ್ತಿದೆ.
ಇನ್ನು ಉತ್ತರಾಖಂಡ್ನಲ್ಲಿ ಧಾರಾಕಾರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಕೇದಾರನಾಥ ಯಾತ್ರೆಯನ್ನು ಸ್ಥಗಿತಗೊಳಿಸಲಾಗಿದೆ.
ಮಳೆ ಸಂಪೂರ್ಣ ಕಡಿಮೆಯಾದರಷ್ಟೇ ಕೇದಾರನಾಥ ಯಾತ್ರೆಯನ್ನು ಪುನರ್ ಆರಂಭಿಸುವುದಾಗಿ ಅಲ್ಲಿನ ಪೊಲೀಸರು ಮಾಹಿತಿ ನೀಡಿದ್ದಾರೆ.
ಇನ್ನು ಧರಾಲಿ ಗ್ರಾಮದಲ್ಲಿ ಇದುವರೆಗೂ 130ಕ್ಕೂ ಹೆಚ್ಚು ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದ್ದು, ತಕ್ಷಣದ ಆಹಾರ, ಆಶ್ರಯ ಮತ್ತು ವೈದ್ಯಕೀಯ ಸಹಾಯಕ್ಕಾಗಿ ಸೂಚನೆಗಳನ್ನು ನೀಡಲಾಗಿದೆ ಎಂದು ಸಿಎಂ ಪುಷ್ಕರ್ ಸಿಂಗ್ ಧಾಮಿ ಮಾಹಿತಿ ನೀಡಿದ್ದಾರೆ.





