ಹೊಸದಿಲ್ಲಿ: ಸ್ವಾತಂತ್ರ್ಯ ದಿನಾಚರಣೆಗೆ ಮುನ್ನ ದಿಲ್ಲಿಯಲ್ಲಿ ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳ ಬೃಹತ್ ಕಳ್ಳಸಾಗಣೆ ಜಾಲವನ್ನು ದಿಲ್ಲಿ ಪೊಲೀಸರು ಬೇಧಿಸಿದ್ದು, ಶಸ್ತ್ರಾಸ್ತ್ರ ಕಳ್ಳಸಾಗಣೆಯಲ್ಲಿ ಭಾಗಿಯಾಗಿದ್ದ ಆರೋಪದ ಮೇಲೆ ಆರು ಜನರನ್ನು ಬಂಧಿಸಿದ್ದಾರೆ.
ರಾಷ್ಟ್ರ ರಾಜಧಾನಿ ದಿಲ್ಲಿಯ ಆನಂದ್ ವಿಹಾರ್ನಲ್ಲಿ ಪೊಲೀಸರು ಆರೋಪಿಗಳನ್ನು ವಶಕ್ಕೆ ಪಡೆದಿದ್ದು, ಆರೋಪಿಗಳ ಬಳಿ ಇದ್ದ ಸುಮಾರು ೨ ಸಾವಿರ ಜೀವಂತ ಗುಂಡುಗಳನ್ನು ವಶಕ್ಕೆ ಪಡೆದಿದ್ದಾರೆ. ಇದಲ್ಲದೆ ಅಪಾರ ಪ್ರಮಾಣದ ಮದ್ದುಗುಂಡುಗಳನ್ನು ಕಳ್ಳಸಾಗಣೆ ಮಾಡುತ್ತಿದ್ದರು ಎನ್ನಲಾಗಿದೆ.
ಬಂಧಿತರ ವಶದಿಂದ ೨,೦೦೦ ಜೀವಂತ ಕಾಟ್ರಿಡ್ಜ್ಗಳು ಸೇರಿದಂತೆ ಅಪಾರ ಪ್ರಮಾಣದ ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ. ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಕುರಿತು ಮಾಹಿತಿ ನೀಡಿರುವ ದಿಲ್ಲಿ ಪೂರ್ವ ವಲಯ ಎಸಿಪಿ ವಿಕ್ರಮಜಿತ್ ಸಿಂಗ್ ಅವರು, ಈ ಮದ್ದುಗುಂಡುಗಳನ್ನು ಆರೋಪಿಗಳು ಉತ್ತರ ಪ್ರದೇಶದ ಲಖನೌಗೆ ಕಳ್ಳಸಾಗಣೆ ಮಾಡುತ್ತಿದ್ದರು. ಮೇಲ್ನೋಟಕ್ಕೆ ಇದು ಅಪರಾಧ ಜಾಲದ ಒಂದು ಭಾಗವಾಗಿ ಕಂಡುಬರುತ್ತದೆ. ಪ್ರಕರಣದಲ್ಲಿ ಭಯೋತ್ಪಾದನೆಯ ಕೋನವನ್ನು ತಳ್ಳಿಹಾಕಲಾಗಿಲ್ಲ ಎಂದು ಮಾಹಿತಿ ನೀಡಿದ್ದಾರೆ.
ಆಗಸ್ಟ್ ೧೫ ರಂದು ಭಾರತ ಸ್ವಾತಂತ್ರ್ಯ ದಿನಾಚರಣೆಗೆ ಸಜ್ಜಾಗುತ್ತಿರುವ ಹಿನ್ನೆಲೆಯಲ್ಲಿ ರಾಷ್ಟ್ರ ರಾಜಧಾನಿಯಾದ್ಯಂತ ಭದ್ರತೆಯನ್ನು ಬಿಗಿಗೊಳಿಸಲಾಗಿದೆ. ಪೊಲೀಸರು ಗಸ್ತು ಮತ್ತು ವಾಹನಗಳ ತಪಾಸಣೆಯನ್ನು ತೀವ್ರಗೊಳಿಸಿದ್ದಾರೆ. ಮೆಟ್ರೋ ನಿಲ್ದಾಣಗಳು, ರೈಲು ನಿಲ್ದಾಣಗಳು, ವಿಮಾನ ನಿಲ್ದಾಣಗಳು ಮತ್ತು ಮಾರುಕಟ್ಟೆಗಳು ಸೇರಿದಂತೆ ದಿಲ್ಲಿಯ ಎಲ್ಲಾ ಸೂಕ್ಷ್ಮ ಸ್ಥಳಗಳಲ್ಲಿ ಬಿಗಿ ಭದ್ರತಾ ವ್ಯವಸ್ಥೆಗಳನ್ನು ಮಾಡಲಾಗಿದೆ.