ಹೊಸದಿಲ್ಲಿ : ನ್ಯಾಯಾಂಗ ಸ್ವಾತಂತ್ರ್ಯಕ್ಕೆ ಅಪಾಯ ಹೊರಗಿನಿಂದಲ್ಲ, ‘ಆಂತರಿಕ ವ್ಯವಸ್ಥೆ’ಯಿಂದಲೇ ಇದೆ ಎಂದು ಹೇಳಿರುವ ಸರ್ವೋಚ್ಚ ನ್ಯಾಯಾಲಯದ ನ್ಯಾಯಮೂರ್ತಿ ಉಜ್ಜಲ್ ಭೂಯಾನ್, ಕೇಂದ್ರ ಸರ್ಕಾರದ ಸಲಹೆಯಂತೆ ಮಧ್ಯಪ್ರದೇಶ ಉಚ್ಚ ನ್ಯಾಯಾಲಯದ ನ್ಯಾಯಮೂರ್ತಿ ಅತುಲ್ ಶ್ರೀಧರನ್ ಅವರನ್ನು ಅಲಹಾಬಾದ್ ಉಚ್ಚ ನ್ಯಾಯಾಲಯಕ್ಕೆ ವರ್ಗಾಯಿಸಿರುವ ಕ್ರಮವನ್ನು ಬಹಿರಂಗವಾಗಿ ಟೀಕಿಸಿದ್ದಾರೆ.
ಕೊಲಿಜಿಯಂ ವ್ಯವಸ್ಥೆಯ ಮೇಲೆ ಇದು ಕಾರ್ಯಾಂಗದ ಒತ್ತಡಕ್ಕೆ ಬಹಿರಂಗ ನಿದರ್ಶನವಾಗಿದ್ದು, ದುರದೃಷ್ಟಕರ ಬೆಳವಣಿಗೆ ಎಂದು ಅವರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ನ್ಯಾಯಮೂರ್ತಿ ಶ್ರೀಧರನ್ ಅವರ ಹೆಸರನ್ನು ನೇರವಾಗಿ ಉಲ್ಲೇಖಿಸದೆ, ಸರ್ಕಾರಕ್ಕೆ ಅನನುಕೂಲವೆನಿಸುವ ಆದೇಶ ನೀಡಿದ ಕಾರಣಕ್ಕೆ ಒಬ್ಬ ನ್ಯಾಯಮೂರ್ತಿಯನ್ನು ಒಂದು ಉಚ್ಚ ನ್ಯಾಯಾಲಯದಿಂದ ಮತ್ತೊಂದು ಉಚ್ಚ ನ್ಯಾಯಾಲಯಕ್ಕೆ ವರ್ಗಾಯಿಸುವ ಅಗತ್ಯವೇನಿದೆ ಎಂದು ಪ್ರಶ್ನಿಸಿದ್ದಾರೆ.
ನಿರ್ದಿಷ್ಟ ಉಚ್ಚ ನ್ಯಾಯಾಲಯದ ನ್ಯಾಯಮೂರ್ತಿಗಳನ್ನು ಮತ್ತೊಂದು ಉಚ್ಚ ನ್ಯಾಯಾಲಯಕ್ಕೆ ವರ್ಗಾಯಿಸುವ ಸಂಬಂಧ ತಾನೇ ನೀಡಿದ್ದ ಶಿಫಾರಸನ್ನು, ಕೇಂದ್ರ ಸರ್ಕಾರದ ಕೋರಿಕೆಯ ಮೇರೆಗೆ ಸರ್ವೋಚ್ಚ ನ್ಯಾಯಾಲಯದ ಕೊಲಿಜಿಯಂ ಬದಲಾಯಿಸಿರುವುದು, ಕೊಲಿಜಿಯಂ ವ್ಯವಸ್ಥೆಯ ಸಮಗ್ರತೆಯ ವಿಷಯದಲ್ಲಿ ಮಾಡಿಕೊಂಡ ರಾಜಿಯಲ್ಲವೇ? ಎಂದು ಪ್ರಶ್ನಿಸಿದ್ದಾರೆ.
ನ್ಯಾಯಮೂರ್ತಿ ಶ್ರೀಧರನ್ ಅವರನ್ನು ಮಧ್ಯಪ್ರದೇಶ ಉಚ್ಚ ನ್ಯಾಯಾಲಯದಿಂದ ಛತ್ತೀಸ್ಗಢ ಉಚ್ಚ ನ್ಯಾಯಾಲಯಕ್ಕೆ ವರ್ಗಾಯಿಸಲು ಸರ್ವೋಚ್ಚ ನ್ಯಾಯಾಲಯದ ಕೊಲಿಜಿಯಂ ಕಳೆದ ಆಗಸ್ಟ್ನಲ್ಲಿ ಶಿಫಾರಸು ಮಾಡಿತ್ತು. ಆದರೆ ಕೇಂದ್ರ ಸರ್ಕಾರದ ಮನವಿಯ ಮೇರೆಗೆ ಕೊಲಿಜಿಯಂ ತನ್ನ ನಿರ್ಧಾರವನ್ನು ಬದಲಿಸಿ, ಅವರನ್ನು ಅಕ್ಟೋಬರ್ನಲ್ಲಿ ವರ್ಗಾಯಿಸಿತು.
ನ್ಯಾಯಮೂರ್ತಿ ಶ್ರೀಧರನ್ ನೇತೃತ್ವದ ಮಧ್ಯಪ್ರದೇಶ ಉಚ್ಚ ನ್ಯಾಯಾಲಯದ ಪೀಠವು ಅಲ್ಲಿನ ಸರ್ಕಾರಕ್ಕೆ ಅನನುಕೂಲವಾಗುವ ಆದೇಶ ನೀಡಿದ್ದ ಹಿನ್ನೆಲೆಯಲ್ಲಿ, ದಂಡನಾತ್ಮಕ ಕ್ರಮವಾಗಿ ಅವರನ್ನು ವರ್ಗಾಯಿಸಲಾಗಿದೆ ಎಂದು ಹಲವಾರು ಕಾನೂನು ತಜ್ಞರು ಅಭಿಪ್ರಾಯಪಟ್ಟಿದ್ದರು.
ಕರ್ನಲ್ ಸೋಫಿಯಾ ಖುರೇಷಿ ವಿರುದ್ಧ ಕೀಳುಹಾಸ್ಯದ ಭಾಷೆ ಬಳಸಿದ ಆರೋಪದ ಸಂಬಂಧ ಬಿಜೆಪಿ ಸಚಿವ ವಿಜಯ್ ಶಾ ವಿರುದ್ಧ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡ ಕಾರಣಕ್ಕೆ ಈ ಕ್ರಮ ಕೈಗೊಳ್ಳಲಾಗಿದೆ ಎಂಬ ಆರೋಪವೂ ಕೇಳಿಬಂದಿತ್ತು.




