ನವದೆಹಲಿ: ಕಾವೇರಿ ಜಲವಿವಾದಕ್ಕೆ ಸಂಬಂಧಿಸಿದ ಅರ್ಜಿಯ ವಿಚಾರಣೆಯನ್ನು ಸುಪ್ರೀಂಕೋರ್ಟ್ ಸೆಪ್ಟೆಂಬರ್ 15ಕ್ಕೆ ಮುಂದೂಡಿದೆ.
ಬಾಕಿ ಇರುವ 17 ಟಿಎಂಸಿ ನೀರನ್ನು ಬಿಡುಗಡೆ ಮಾಡುವಂತೆ ಕೋರಿ ತಮಿಳುನಾಡು ಸರ್ಕಾರ ಸುಪ್ರೀಂಕೋರ್ಟ್ಗೆ ಅರ್ಜಿ ಸಲ್ಲಿಸಿದೆ. ಕರ್ನಾಟಕ ಸರ್ಕಾರ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ನೀಡಿರುವ ನಿರ್ದೇಶನಗಳನ್ನು ಪಾಲಿಸುತ್ತಿಲ್ಲ ಎಂದು ತಮಿಳುನಾಡು ಸರ್ಕಾರ ಆರೋಪಿಸಿದೆ.
ಒಟ್ಟು 35 ಟಿಎಂಸಿ ನೀರಿನಲ್ಲಿ ಇದೀಗ 18 ಟಿಎಂಸಿ ನೀರು ಮಾತ್ರ ಹರಿದು ಬಂದಿದೆ. ಉಳಿದ 17 ಟಿಎಂಸಿ ನೀರನ್ನು ಕರ್ನಾಟಕ ಬಿಡುಗಡೆ ಮಾಡಿಲ್ಲ ಎಂದು ತಮಿಳುನಾಡು ಸರ್ಕಾರ ನ್ಯಾಯಾಲಯದ ಮುಂದೆ ವಾದಿಸಿದೆ.
ತಮಿಳುನಾಡು ಸರ್ಕಾರದ ವಾದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಸುಪ್ರೀಂಕೋರ್ಟ್, “ಕರ್ನಾಟಕ ನೀರು ಹರಿಸುತ್ತಿದೆಯಲ್ಲವೇ?” ಎಂದು ಪ್ರಶ್ನಿಸಿದೆ.
ಎರಡೂ ಕಡೆಯ ವಾದ-ಪ್ರತಿವಾದವನ್ನು ಆಲಿಸಿದ ಸುಪ್ರೀಂಕೋರ್ಟ್, ಪ್ರಕರಣದ ಮುಂದಿನ ವಿಚಾರಣೆಯನ್ನು ಸೆಪ್ಟೆಂಬರ್ 15ಕ್ಕೆ ಮುಂದೂಡಿದೆ.




