ನವದೆಹಲಿ: ಮುರುಘಾ ಮಠದ ಆಸ್ತಿಯನ್ನು ಸರ್ಕಾರದ ವಶಕ್ಕೆ ನೀಡುವಂತೆ ಕೋರಿ ಸಲ್ಲಿಸಲಾದ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ರಾಜ್ಯ ಸರ್ಕಾರಕ್ಕೆ ನೋಟಿಸ್ ನೀಡಿದೆ.
ಎಚ್.ಏಕಾಂತಯ್ಯ ಸಲ್ಲಿಸಿದ್ದ ಅರ್ಜಿಯನ್ನು ನ್ಯಾ.ಪಂಕಜ್ ಮಿಥಲ್ ನೇತೃತ್ವದ ದ್ವಿಸದಸ್ಯ ಪೀಠ ವಿಚಾರಣೆ ನಡೆಸಿದೆ. ಅರ್ಜಿಯಲ್ಲಿ ಮಠದ ಆಸ್ತಿಯನ್ನು ಸರ್ಕಾರದ ವಶಕ್ಕೆ ನೀಡಬೇಕು ಎಂದು ಮನವಿ ಮಾಡಲಾಗಿದೆ.
ಇದಕ್ಕೂ ಮೊದಲು ಮಠದ ಆಸ್ತಿಯನ್ನು ಮಠದ ಸುಪರ್ದಿಗೆ ನೀಡುವಂತೆ ಹೈಕೋರ್ಟ್ ಆದೇಶ ನೀಡಿತ್ತು. ಹೈಕೋರ್ಟ್ನ ಈ ಆದೇಶವನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್ನಲ್ಲಿ ಮೇಲ್ಮನವಿ ಸಲ್ಲಿಸಲಾಗಿತ್ತು.
ಸುಪ್ರೀಂಕೋರ್ಟ್ನ ವಿಚಾರಣೆ ವೇಳೆ ಮಠದ ಭಕ್ತೆಯೊಬ್ಬರು ಮಧ್ಯಪ್ರವೇಶ ಅರ್ಜಿ ಸಲ್ಲಿಸಿ, ಈಗಾಗಲೇ ಸ್ವಾಮೀಜಿ ಮಠದ ಆಸ್ತಿಯನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದಾರೆ ಎಂಬ ಆತಂಕ ವ್ಯಕ್ತಪಡಿಸಿದರು. ಈ ಹಿನ್ನೆಲೆಯಲ್ಲಿ ತಮ್ಮನ್ನು ಕೂಡ ಪ್ರಕರಣದಲ್ಲಿ ಭಾಗಿಯಾಗಲು ಅವಕಾಶ ನೀಡುವಂತೆ ಮನವಿ ಮಾಡಿದರು.
ಈ ಮನವಿಗೆ ಸುಪ್ರೀಂಕೋರ್ಟ್ ಒಪ್ಪಿಗೆ ಸೂಚಿಸಿದ್ದು, ಮುಂದಿನ ವಿಚಾರಣೆ ವೇಳೆ ಹೆಚ್ಚಿನ ವಿವರಗಳನ್ನು ಪರಿಶೀಲಿಸುವುದಾಗಿ ತಿಳಿಸಿದೆ.





